ರಾಮನಗರ: ಸಾರ್ವಜನಿಕರ ಕುಂದು-ಕೊರತೆಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರಜಾಸೇವಾ ಅಭಿಯಾನ ಚನ್ನಪಟ್ಟಣ ತಾಲೂಕಿನ ಕಸಬಾ ಹೋಬಳಿ ಡಾ. ಅಂಬೇಡ್ಕರ್ ಭವನದಲ್ಲಿ ಸೆ.5ರಂದು ಹಮ್ಮಿಕೊಂಡಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೂಚನೆ ನೀಡಿದರು.
ಪ್ರಜಾಸೇವೆ ಆಂದೋಲನಾ ಸಭೆಯಲ್ಲಿ ಗೊಂದಲ ಉಂಟಾಗದಂತೆ ಸಾರ್ವಜನಿಕರು ಅಹವಾಲು ಸಲ್ಲಿಸಲು ಕಂದಾಯ, ನಗರಸಭೆ, ತಾಪಂ, ಕೃಷಿ, ರೇಷ್ಮೆ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಹಾರ ಮತ್ತು ನಾಗರೀಕ ಸರಾಬರಾಜು ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಅರ್ಜಿ ಸಲ್ಲಿಸುವ ಪ್ರತ್ಯೇಕ ಕೌಂಟರ್ಗಳನ್ನು ತೆರೆಯಬೇಕು ಮತ್ತು ಇಲಾಖೆ ನಾಮಫಲಕ, ಕಾರ್ಯಕ್ರಮ ಹಾಗೂ ಯೋಜನೆಗಳ ಮಾಹಿತಿಯುಳ್ಳ ಸ್ಟಾಲ್ಗಳನ್ನು ತೆರೆಯಬೇಕು ಎಂದು ತಿಳಿಸಿದರು.
ಕೌಂಟರ್ಗಳಲ್ಲಿ ಆಯಾ ಇಲಾಖೆಯಿಂದ ಕಂಪ್ಯೂಟರ್/ಲ್ಯಾಪ್ಟಾಪ್, ಪ್ರಿಂಟರ್ ಹಾಗೂ ಇಂಟರ್ನೆಟ್ ಸೌಲಭ್ಯ, ಆನ್ಲೈನ್ನಲ್ಲಿ ಅರ್ಜಿ ಹಾಗೂ ಅಹವಾಲು ಸಲ್ಲಿಸುವ ವ್ಯವಸ್ಥೆ ಮಾಡಿಕೊಳ್ಳಬೇಕು ಹಾಗೂ ಪ್ರಜಾಸೇವಾ ಅಭಿಯಾನ ಸಭೆಗಳಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮೂರು ದಿನಗಳೊಳಗೆ ಸಮಸ್ಯೆಗಳನ್ನು ಪರಿಹರಿಸಿ ಅರ್ಜಿ ವಿಲೇವಾರಿ ಮಾಡಬೇಕು. ಸಭೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ಸೌಲಭ್ಯ ಒದಗಿಸಬೇಕು. ಜನರಿಂದ ನೂಕುನುಗ್ಗಲು ಉಂಟಾಗದಂತೆ ಮುಂಜಾಗ್ರತಾ ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ, ಜಿಪಂ ಉಪ ಕಾರ್ಯದರ್ಶಿ ಧನರಾಜ್, ಉಪ ವಿಭಾಗಾಧಿಕಾರಿ ಬಿನೋಯ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶೇಖರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅಧ್ಯಕ್ಷತೆಯಲ್ಲಿ ಪ್ರಜಾ ಸೇವಾ ಆಂದೋಲನದ ಪೂರ್ವಭಾವಿ ಸಿದ್ದತೆ ಸಭೆ ನಡೆಯಿತು.