ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಬಂದ ನಂತರ ಯಾರೂ ಮಾಡದಂಥ ಅದ್ಬುತ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರೂಪಿಸಿದ್ದಾರೆ. ಇದೊಂದು ವಿಭಿನ್ನ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದ ಮೂಲಕ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಂತೆ ಕರೆ ನೀಡಿದರು.ಸಾರ್ವಜನಿಕ ಕುಂದುಕೊರತೆ ಅರಿಯಲು ಪೋರ್ಟಲ್ ರೂಪಿಸಲಾಗಿದೆ. ಅದರ ಮುಖಾಂತರ ನೀವು ಸಲ್ಲಿಸಿದ ಅರ್ಜಿ ಯಾವ ಹಂತದಲ್ಲಿದೆ ಎಂದು ತಿಳಿಯಲಿದೆ. ಇದರ ಮೇಲ್ವಿಚಾರಣೆ ಹಾಗೂ ಜವಾಬ್ದಾರಿಯನ್ನು ಜಿಲ್ಲಾಧಿಕಾರಿ ಸೇರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನಡೆಸಲಿದ್ದಾರೆ. ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಎಂದು ತಿಳಿಸಿದರು.
ಮೊದಲ ಶನಿವಾರ ಮತ್ತು ಮೂರನೇ ಶನಿವಾರ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಜಾಸೇವಾ ಕಾರ್ಯಕ್ರಮ ನಡೆಯಲಿದೆ. ಎರಡು ಮತ್ತು ಮೂರನೇ ಶನಿವಾರ ಶಾಸಕರ ನೇತೃತ್ವದಲ್ಲಿ ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಶಾಸಕ ಸಿ.ಪಿ.ಯೋಗೇಶ್ವರ್ ಮಾತನಾಡಿ, ಜನಸಾಮಾನ್ಯರ ಸಮಸ್ಯೆ ಗೆ ಪರಿಹಾರ ಕಂಡುಕೊಳ್ಳಲು, ಜನರ ಮನೆ ಬಾಗಿಲಿಗೆ ಸೇವೆ ಕಲ್ಪಿಸಲು ಪ್ರಜಾಸೇವಾ ಆಂದೋಲನಾ ರೂಪಿಸಲಾಗಿದೆ. ಈ ಹಿಂದೆ ನಡೆಯುವ ಕಾರ್ಯಕ್ರಮಗಳಿಗೆ ಲೆಕ್ಕಬುಕ್ಕ ಇಲ್ಲದಂತಾಗಿತ್ತು. ಆದರೆ, ಈ ಕಾರ್ಯಕ್ರಮದ ಸರ್ಕಾರದ ಅಧಿಕೃತ ಕಾರ್ಯಕ್ರಮವಾಗಿದೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಸ್ಪಂದಿಸಿದರೆ ಸಾರ್ವಜನಿಕರ ಸಮಸ್ಯೆಗಳನ್ನು ಬೇಗ ಬಗೆಹರಿಸಬಹುದು. ಅಧಿಕಾರಿಗಳು ಮುತುವರ್ಜಿಯಿಂದ ಕೆಲಸ ಮಾಡಬೇಕು ಎಂದರು.
ವಿಧಾನಪರಿಷತ್ ಸದಸ್ಯ ಸುಧಾಮದಾಸ್ ಮಾತನಾಡಿ, ಡಿ.ಕೆ.ಶಿವಕುಮಾರ್ ಸಿಎಂ ಆದ ನಂತರ ರೂಪಿಸಿದ ಅತ್ಯುತ್ತಮ ಕಾರ್ಯಕ್ರಮ ಪ್ರಜಾಸೇವಾ ಆಂದೋಲನವಾಗಿದೆ. ಇದು ಅಧಿಕಾರಶಾಹಿಯನ್ನು ಜನರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗುವ ಕಾರ್ಯಕ್ರಮವಾಗಿದೆ. ಸರ್ಕಾರ ಮುತುವರ್ಜಿಯಿಂದ ಈ ಕಾರ್ಯಕ್ರಮ ರೂಪಿಸಿದ್ದು, ಇದನ್ನು ಸದುಪಯೋಗ ಮಾಡಿಕೊಳ್ಳುವುದು ಜನರ ಜವಾಬ್ದಾರಿ. ಎಷ್ಟೋ ಕಾರ್ಯಕ್ರಮಗಳು ಅರ್ಥ ಕಳೆದುಕೊಂಡಿರುವುದನ್ನು ನಾವು ನೋಡಿದ್ದೇವೆ. ಆದರೆ ಈ ಕಾರ್ಯಕ್ರಮ ಹಾಗಾಗದಂತೆ ನೋಡಿಕೊಳ್ಳಬೇಕು. ಜನರ ಕೆಲಸ ಮಾಡುವಾಗ ಸಾಕಷ್ಟು ಭ್ರಷ್ಟಾಚಾರ ನಡೆಯುವುದನ್ನು ತಡೆಯಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಇದನ್ನು ಸದುಪಯೋಗ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಸಮಸ್ಯೆ ಪರಿಹಾರಕ್ಕೆ ಸೂಚನೆ:
ಪ್ರಜಾಸೇವೆ ಆಂದೋಲನದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಸಾರ್ವಜನಿಕರು ಹಾಗೂ ರೈತರಿಂದ ಕುಂದುಕೊರತೆ ಹಾಗೂ ಅಹವಾಲುಗಳನ್ನು ಆಲಿಸಲು ಡಾ. ಬಿ.ಆರ್. ಅಂಬೇಡ್ಕರ್ ಭವನದ ಆವರಣದಲ್ಲಿ ೨೬ ಕೌಂಟರ್ಗಳನ್ನು ತೆರೆಯಲಾಗಿತ್ತು. ಅಲ್ಲಿ ಕಂಪ್ಯೂಟರ್, ಪ್ರಿಂಟರ್ಗಳು, ಅರ್ಜಿಗಳು ಸೇರಿದಂತೆ ವಿವಿಧ ಪರಿಕರಗಳನ್ನು ಒದಗಿಸಲಾಗಿತ್ತು. ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲು ಹಾಗೂ ಕುಂದುಕೊರತೆಗಳನ್ನು ಸಲ್ಲಿಸಿದರು.
ಚನ್ನಪಟ್ಟಣ: ಇಂದು ತಾಲೂಕು ವ್ಯಾಪ್ತಿಯಲ್ಲಿ ನಡೆಸಿದ ಪ್ರಜಾಸೇವಾ ಆಂದೋಲನದಲ್ಲಿ ಸುಮಾರು ೮೦೦ರಿಂದ ೯೦೦ ಅರ್ಜಿ ಸ್ವೀಕೃತಗೊಂಡಿವೆ. ಕಾನೂನುಬದ್ಧವಾಗಿರುವ ಅರ್ಜಿಗಳನ್ನು ಶೀಘ್ರದಲ್ಲೇ ಇತ್ಯರ್ಥಪಡಿಸಲಾಗುವುದು ಎಂದು ಸಚಿವ ಎಚ್.ಸಿ.ಬಾಲಕೃಷ್ಣ ತಿಳಿಸಿದರು. ಪ್ರಜಾಸೇವಾ ಆಂದೋಲನದ ಅರ್ಜಿ ಸ್ವೀಕೃತಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಇದುವರೆಗೆ ಸುಮಾರು ೮೫೦೦ಯಿಂದ ೯ ಸಾವಿರ ಅರ್ಜಿಗಳು ಪೋರ್ಟಲ್ನಲ್ಲಿ ಸಲ್ಲಿಕೆಯಾಗಿವೆ ಎಂಬ ಮಾಹಿತಿ ಇದೆ ಎಂದರು.
ಕುಡಿಯುವ ನೀರಿನ ಸಮಸ್ಯೆ, ಜಮೀನು, ಪೋಡಿ ಸಮಸ್ಯೆ, ಪಿಂಚಣಿ, ನಿವೇಶನ ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತು ಅರ್ಜಿ ಸಲ್ಲಿಕೆಯಾಗಿವೆ. ಪ್ರತಿ ಬುಧವಾರ ಜಿಲ್ಲಾಧಿಕಾರಿಗಳಿಗೆ ಅರ್ಜಿ ರಿವ್ಯೂ ಮಾಡಲು ಸೂಚಿಸಲಾಗಿದೆ. ಮುಂದಿನ ಬಾರಿ ತಾಲೂಕಿಗೆ ಬಂದು ಪ್ರಜಾಸೇವೆ ಆಂದೋಲನ ನಡೆಸುವ ವೇಳೆಗೆ ಕಾನೂನುಬದ್ಧವಾಗಿರುವ ಸಮಸ್ಯೆಗೆ ಪರಿಹಾರ ದೊರಕಿಸಲಾಗುವುದು ಎಂದರು.ಕಚೇರಿಗಳಲ್ಲಿ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ ಎಂದು ಅರಿತ ಸಿಎಂ, ಸಚಿವರೇ ಖುದ್ದಾಗಿ ಹೋಗಿ ಜನರ ಸಮಸ್ಯೆ ಆಲಿಸಲು ಈ ಕಾರ್ಯಕ್ರಮ ರೂಪಿಸಿದ್ದಾರೆ. ಅಧಿಕಾರಿಗಳಿಗೆ ಚುರುಕು ಮುಟ್ಟಿಸಲು ಜನ ನಮ್ಮನ್ನು ಗೆಲ್ಲಿಸಿದ್ದಾರೆ. ಈ ಕೆಲಸ ಮೊದಲಿನಿಂದ ಆಗಿದ್ದರೆ ಸರಿ ಇತ್ತು, ಅದು ಮೊದಲಿನಿಂದ ಆಗಿಲ್ಲ. ಹೊಸ ಮುಖ್ಯಮಂತ್ರಿ ಬಂದ ಮೇಲೆ ಬಡವರಿಗೆ ತೊಂದರೆ ಆಗಬಾರದು ಎಂಬ ಆಲೋಚನೆಯಲ್ಲಿ ಕಾರ್ಯಕ್ರಮ ರೂಪಿಸಿದ್ದಾರೆ ಎಂದರು.