ಪ್ರಜ್ವಲರನ್ನು ಕತ್ತರಿಸಿ 3 ಸಾವಿರ ಸಂತ್ರಸ್ತರಿಗೆ ಹಂಚಬೇಕು

KannadaprabhaNewsNetwork |  
Published : May 03, 2024, 01:00 AM IST
ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಮನೆಗೆ ನೇಹಾ ಹಿರೇಮಠ ತಂದೆ -ತಾಯಿ ಭೇಟಿ ನೀಡಿ ಕೃತಜ್ಞತೆ ವ್ಯಕ್ತಪಡಿಸಿದರು | Kannada Prabha

ಸಾರಾಂಶ

ಸಚಿವೆ ಹೆಬ್ಬಾಳಕರ್ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ ನೇಹಾ ಹಿರೇಮಠ ತಂದೆ ನಿರಂಜನ ಹಿರೇಮಠ ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿಪ್ರಜ್ವಲ್ ರೇವಣ್ಣ ಅವರಿಗೆ ಎಂತಹ ಶಿಕ್ಷೆ ಕೊಟ್ಟರೂ ಕಡಿಮೆ. ಅವರನ್ನು ತುಂಡು ತುಂಡು ಮಾಡಿ ಸಂತ್ರಸ್ತ 3 ಸಾವಿರ ಹೆಣ್ಣು ಮಕ್ಕಳಿಗೆ ಹಂಚಬೇಕು ಎಂದು ಹುಬ್ಬಳ್ಳಿಯಲ್ಲಿ ಹತ್ಯೆಯಾದ ವಿದ್ಯಾರ್ಥಿನಿ ನೇಹಾ ತಂದೆ ನಿರಂಜನ ಹಿರೇಮಠ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮನೆಗೆ ಗುರುವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯ ವಿರುದ್ಧ ಶೀಘ್ರದಲ್ಲೇ ನಾವೂ ಪ್ರತಿಭಟನೆ ನಡೆಸಲಿದ್ದೇವೆ. ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣವನ್ನು ಖಂಡಿಸುತ್ತೇವೆ ಎಂದು ತಿಳಿಸಿದರು.

ಹೆಣ್ಣು ಮಕ್ಕಳಿಗೆ ಅನ್ಯಾಯವಾದ ಸಂದರ್ಭದಲ್ಲಿ ಅದನ್ನು ಖಂಡಿಸುವುದು, ಪ್ರತಿಭಟಿಸುವುದು ಸರಿ. ಆದರೆ, ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಅವರದೇ ಮನೆಯ ಹೆಣ್ಣು ಮಗಳಿಗೆ ಈ ರೀತಿಯಾದರೇ ಅವರು ರಾಜಕೀಯ ಮಾಡುತ್ತಾರಾ ಎಂದು ಪ್ರಶ್ನಿಸಿದರು.

ಫೋಟೋ ದುರ್ಬಳಕೆ ಸಲ್ಲದು:

ಮೂರು ವರ್ಷಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಫಯಾಜ್‌ಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸನ್ಮಾನ ಮಾಡುವಾಗ ಹಾಜರಿದ್ದ ಫೋಟೋವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ರಾಜಕಾರಣಿಗಳು ಎಲ್ಲೇ ಕಾರ್ಯಕ್ರಮಕ್ಕೆ ಕರೆದರೂ ಹೋಗುತ್ತೇವೆ. ಅಲ್ಲಿ ಯಾರ್‍ಯಾರಿಗೋ ಸನ್ಮಾನ ಮಾಡುತ್ತಾರೆ. ಅಂದು ಸಾಧನೆ ಮಾಡಿ ಸನ್ಮಾನಿಸಿಕೊಂಡವರು ಮುಂದೆ ಒಳ್ಳೆಯ ವ್ಯಕ್ತಿಗಳೂ ಆಗಬಹುದು, ಕ್ರಿಮಿನಲ್‌ಗಳೂ ಆಗಬಹುದು. ಅದು ನಮಗೆ ಹೇಗೆ ಗೊತ್ತಾಗುತ್ತದೆ? ಆದರೆ, ಇಂತಹ ಫೋಟೋಗಳನ್ನೆಲ್ಲ ಈ ರೀತಿ ರಾಜಕೀಯಕ್ಕಾಗಿ ದುರ್ಬಳಕೆ ಮಾಡಿಕೊಳ್ಳುವುದು ತಪ್ಪು ಎಂದು ಆಕ್ಷೇಪ ವ್ಯಕ್ತಪಡಿಸಿದರು.

------------

ಬಾಕ್ಸ್‌..

ಮೃಣಾಲ ಹೆಬ್ಬಾಳಕರಗೆ ಬೆಂಬಲಿಸಿ: ನಿರಂಜನ

ಬೆಳಗಾವಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಮೃಣಾಲ ಹೆಬ್ಬಾಳಕರ್‌ ಬೆಂಬಲಿಸುವಂತೆ ಹತ್ಯೆಯಾದ ವಿದ್ಯಾರ್ಥಿನಿ ನೇಹಾ ತಂದೆ ನಿರಂಜನ ಹಿರೇಮಠ ಮನವಿ ಮಾಡಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಮೃಣಾಲ್‌ ಹೆಬ್ಬಾಳಕರ ಬೆಂಬಲಿಸಿ. ಇಂತಹ ಯುವ ಸಂಸದರಿದ್ದರೇ ಹೆಣ್ಣು ಮಕ್ಕಳಿಗೆ ಅನ್ಯಾಯವಾದಾಗ ಧ್ವನಿ ಎತ್ತುತ್ತಾರೆ. ನಮಗೆ ನ್ಯಾಯ ಒದಗಿಸುತ್ತಾರೆ. ಹಾಗಾಗಿ ಸಮಾಜದ ಎಲ್ಲರೂ ಅವರನ್ನು ಬೆಂಬಲಿಸಬೇಕು ಎಂದು ಕೈ ಮುಗಿದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.

------------------------

ಬಾಕ್ಸ್......

ಸಚಿವೆ ಹೆಬ್ಬಾಳಕರಗೆ ಕೃತಜ್ಞತೆ ಸಲ್ಲಿಸಿದ ನಿರಂಜನ ದಂಪತಿ

ನಮ್ಮ ಕಷ್ಟಕಾಲದಲ್ಲಿ ತಮ್ಮೆಲ್ಲ ಕೆಲಸಗಳನ್ನು ಬಿಟ್ಟು ಲಕ್ಷ್ಮೀ ಹೆಬ್ಬಾಳಕರ್ ಸುರಿಯುತ್ತಿದ್ದ ಮಳೆಯ ಮಧ್ಯೆಯೂ ನಮ್ಮ ಮನೆಗೆ ಬಂದು ನಮ್ಮ ದುಃಖದಲ್ಲಿ ಭಾಗಿಯಾದರು. ಜೊತೆಗೆ ನಮಗೆ ಭದ್ರತೆ ಒದಗಿಸುವ, ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಮತ್ತು ಪ್ರಕರಣದ ತನಿಖೆಗೆ ತ್ವರಿತಗತಿ ನ್ಯಾಯಾಲಯ ಸ್ಥಾಪನೆ ಮಾಡುವ ಕೆಲಸ ಮಾಡಿದರು. ಹಾಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರಗೆ ಕೃತಜ್ಞತೆ ಸಲ್ಲಿಸಬೇಕೆಂದು ದಂಪತಿ ಸಮೇತ ಬಂದಿದ್ದೇವೆ ಎಂದು ನಿರಂಜನ ಹಿರೇಮಠ ಸ್ಪಷ್ಟಪಡಿಸಿದರು.

ನಮ್ಮ ಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು, ಜಾತಿ ಭೇದ ಮರೆತು ಎಲ್ಲರೂ ನಮ್ಮ ನೆರವಿಗೆ ನಿಂತಿದ್ದಾರೆ. ಈ ಘಟನೆಯನ್ನು ರಾಜಕೀಯಕ್ಕೆ ಬಳಸಬಾರದೆಂದು ನಾನು ಮನವಿ ಮಾಡಿದ್ದೆ. ಆ ರೀತಿ ಕೆಲವರು ಬಳಸುತ್ತಿರುವುದಕ್ಕೆ ಬೇಸರವಾಗಿದೆ. ಆದರೆ, ಲಕ್ಷ್ಮೀ ಹೆಬ್ಬಾಳಕರ್ ಅವರು ಯಾವ ಸ್ವಾರ್ಥವಿಲ್ಲದೆ ತಮ್ಮದೇ ಮಗಳು ಎನ್ನುವಂತೆ ಬಂದು ನಮ್ಮೊಂದಿಗೆ ನಿಂತಿದ್ದಾರೆ. ಅವರ ನೆರವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಿವ್‌-ಇನ್‌ ಸಂಬಂಧಕ್ಕೆ ಜನಿಸಿದ ಮಗುವಿಗೆ ತಾಯಿ ಸರ್‌ನೇಮ್‌!
ಪಿಎಂ ಹೇಳ್ತಿರೋ ಆರೆಂಜ್‌ ಆರ್ಥಿಕತೆ ರಾಜ್ಯದಲ್ಲಿ 2016ಲ್ಲೇ ನೀತಿ ಜಾರಿ: ಡಿಕೆ