ಪುತ್ತೂರು : ಆಸ್ಪತ್ರೆಯಲ್ಲಿ ತ್ಯಾಜ್ಯವನ್ನು ಸುರಕ್ಷಿತವಾಗಿ, ವ್ಯವಸ್ಥಿತವಾಗಿ ಹಾಗೂ ಪರಿಸರ ಸ್ನೇಹಿಯಾಗಿ ನಿರ್ವಹಿಸುವ ಕುರಿತು ಸಿಬ್ಬಂದಿಯಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ತಾಲೂಕಿನ ನರಿಮೊಗರು ಪ್ರಸಾದಿನಿ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ಬುಧವಾರ ಆಸ್ಪತ್ರೆಯ ಸಿಬ್ಬಂದಿಗಾಗಿ ಸಾಮಾನ್ಯ ತ್ಯಾಜ್ಯ ನಿರ್ವಹಣೆ ಹಾಗೂ ಜೈವ ವೈದ್ಯಕೀಯ ತ್ಯಾಜ್ಯ ನಿರ್ವಹಣೆಯ ಕುರಿತು ಜಾಗೃತಿ ಮತ್ತು ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು. ಆಸ್ಪತ್ರೆಯಲ್ಲಿ ಉತ್ಪತ್ತಿಯಾಗುವ ವಿವಿಧ ರೀತಿಯ ತ್ಯಾಜ್ಯಗಳ ಸರಿಯಾದ ವಿಂಗಡಣೆ, ಸಂಗ್ರಹಣೆ, ಸಾಗಣೆ, ತಾತ್ಕಾಲಿಕ ಶೇಖರಣೆ ಮತ್ತು ಸೂಕ್ತ ವಿಲೇವಾರಿ ಕುರಿತು ಮಾಹಿತಿ ನೀಡಲಾಯಿತು. ಜೈವ ವೈದ್ಯಕೀಯ ತ್ಯಾಜ್ಯವನ್ನು ಸರಿಯಾಗಿ ನಿರ್ವಹಿಸದಿದ್ದಲ್ಲಿ ಉಂಟಾಗಬಹುದಾದ ಆರೋಗ್ಯ ಹಾಗೂ ಪರಿಸರದ ಅಪಾಯಗಳ ಬಗ್ಗೆಯೂ ಸಿಬ್ಬಂದಿಗೆ ಅರಿವು ಮೂಡಿಸಲಾಯಿತು.
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಹಾಗೂ ಆಯುರ್ವೇದ ತಜ್ಞ ವೈದ್ಯ ಡಾ.ರಾಘವೇಂದ್ರ ಪ್ರಸಾದ್ ಬಂಗಾರಡ್ಕ ವಂದಿಸಿದರು .