-ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ನೃತ್ಯ ಪ್ರದರ್ಶನ
-----
ಕನ್ನಡಪ್ರಭ ವಾರ್ತೆ ಶಹಾಪುರ
ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ದೇಶ. ಈ ಕಾರ್ಯಕ್ರಮದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಶಿಕ್ಷಕ ಹಾಗೂ ಯೋಗ ಗುರು ಲಕ್ಷ್ಮಣ ಲಾಳಸೇರಿ ತಿಳಿಸಿದರು.
ನಗರದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಯಾದಗಿರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಸಹಯೋಗದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಿಕ್ಷಕಿ ಗೀತಾಂಜಲಿ ಮಾತನಾಡಿ, ಎಲೆಮರೆಕಾಯಿಯಂತಿರುವ ಪ್ರತಿಭೆಗಳನ್ನು ಗುರುತಿಸಿ ಬೆಳಕಿಗೆ ತರುವ ಕೆಲಸ ಶಿಕ್ಷಕರು ಮಾಡಬೇಕಾಗಿದೆ. ಯಾಕೆಂದರೆ ಪ್ರತಿಯೊಂದು ಮಗುವಿನಲ್ಲಿ ಅಘಾದ ಶಕ್ತಿ ಮತ್ತು ಕಲೆಗಳ ವಿವಿಧ ಪ್ರಕಾರಗಳಾದ ನೃತ್ಯ, ಜಾನಪದ, ಮಿಮಿಕ್ರಿ ಏಕಪಾತ್ರಾಭಿನಯ, ಮೂಕಾಭಿನಯ, ಅಡಕವಾಗಿರುತ್ತದೆ. ಆದ್ದರಿಂದ, ಅವುಗಳನ್ನು ಸಾಂಸ್ಕೃತಿಕವಾಗಿ ಮುನ್ನೆಲೆಗೆ ತರುವ ಕೆಲಸ ನಿರಂತರ ನಡೆಯಬೇಕಾಗಿದೆ ಎಂದರು.
ಮಲ್ಲನಗೌಡ ಬಿರಾದಾರ್ ಮಾತನಾಡಿ, ಪ್ರಾಥಮಿಕ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಮುಖ್ಯವಾದದ್ದು, ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸಲು ಇದು ವೇದಿಕೆಯಾಗಲಿದೆ. ಇಂತಹ ಕಾರ್ಯಕ್ರಮದಲ್ಲಿ ಎಲ್ಲ ಮಕ್ಕಳು ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆ ಪ್ರದರ್ಶಿಸಬೇಕು ಎಂದು ಹೇಳಿದರು.
ಸರ್ಕಾರಿ ನೌಕರ ಸಂಘದ ಸದಸ್ಯರಾದ ಬಸನಗೌಡ, ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಯ ತಿಪ್ಪಣ್ಣ ಖ್ಯಾತನಾಳ, ತಿಪ್ಪಣ್ಣ ಧೋತ್ರೆ, ಶಿಕ್ಷಕಿ ಸಾವಿತ್ರಿ, ಬಸ್ಸಮ್ಮ ಸೇರಿದಂತೆ ಇತರರಿದ್ದರು. ವೀರಭದ್ರಯ್ಯ ಸಿ.ಆರ್.ಪಿ ಸ್ವಾಗತಿಸಿದರು, ಅಶ್ವಿನಿ ನಿರೂಪಿಸಿ, ವಂದಿಸಿದರು.
-----
29ವೈಡಿಆರ್9: ಶಹಾಪುರ ನಗರದ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ನೃತ್ಯ ಮಾಡುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.