ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ವೇದಿಕೆ ಅಧ್ಯಕ್ಷ ಮೆಣಸ ಕುಮಾರ್ ಮತ್ತು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎಂ.ಬಿ.ಕುಮಾರ್ ನೇತೃತ್ವದಲ್ಲಿ ದೇವಾಲಯಕ್ಕೆ ಆಗಮಿಸಿದ ಸದಸ್ಯರು, ಡಿ.ಕೆ.ಶಿವಕುಮಾರ್ ನಾಡಿನ ಮುಖ್ಯಮಂತ್ರಿಯಾಗಬೇಕೆಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ವೇದಿಕೆ ಅಧ್ಯಕ್ಷ ಮೆಣಸ ಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಸಿಎಂ ಸಿದ್ದರಾಮಯ್ಯ ಅವರಷ್ಟೇ ಪರಿಶ್ರಮವನ್ನು ಡಿ.ಕೆ.ಶಿವಕುಮಾರ್ ಹಾಕಿದ್ದಾರೆ ಎಂದರು.ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕೆನ್ನುವ ಕಾರಣಕ್ಕಾಗಿಯೇ ಕಳೆದ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಒಕ್ಕಲಿಗ ಸಮುದಾಯವೇ ಪ್ರಮುಖ ಕಾರಣ ಎಂದು ತಿಳಿಸಿದರು.
ತಡವಾಗಿಯಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಧಿಕಾರ ಯಾರಿಗೂ ಶಾಶ್ವತವಲ್ಲ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅತ್ಯುತ್ತಮ ಆಡಳಿತ ನೀಡಿದ್ದಾರೆ. ಯಾವುದೇ ರಾಜಕೀಯ ಗೊಂದಲಗಳಿಗೆ ಅವಕಾಶ ನೀಡದೆ ರಾಜೀನಾಮೆ ನೀಡುವ ಹಂತದಲ್ಲೂ ಸಿದ್ದರಾಮಯ್ಯ ರಾಜಕೀಯ ಪ್ರಬುದ್ಧತೆ ಮೆರೆದಿದ್ದಾರೆ. ಮುಂದಿನ ದಿನಗಳಲ್ಲಿ ಒಕ್ಕಲಿಗರು ಮತ್ತು ಹಾಲುಮತ ಸಮುದಾಯದವರು ಒಗ್ಗೂಡಿ ರಾಜ್ಯದ ಅಭಿವೃದ್ಧಿಗೆ ಶಕ್ತಿ ನೀಡಲಿದ್ದಾರೆ ಎಂದು ಹೇಳಿದರು.