ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ವಕೀಲರ ಭವನದಲ್ಲಿ ಶುಕ್ರವಾರ ಚಿತ್ರದುರ್ಗ ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಕೇವಲ ಸಂವಿಧಾನದ ಪೀಠಿಕೆಗೆ ಮಾತ್ರ ಸೀಮಿತವಾಗಿಲ್ಲ. ಇಡೀ ಸಂವಿಧಾನವನ್ನೇ ಆವರಿಸಿದ್ದಾರೆ ಎಂದರು.
ಇತ್ತೀಚಿನ ದಿನಗಳಲ್ಲಿ ಸಂವಿಧಾನದ ಪೀಠಿಕೆಯ ಬಗ್ಗೆ ಮಕ್ಕಳಿಗೆ ತಿಳಿಸಿಕೊಡಲಾಗುತ್ತಿದೆ ಮತ್ತು ಅದನ್ನು ವಾಚಿಸಲಾಗುತ್ತಿದೆ. ಆದರೆ ಬರಿ ಪೀಠಿಕೆ ಓದಿದರೆ ಸಾಲದು, ಸಂವಿಧಾನದಲ್ಲಿ ಅಡಕವಾಗಿರುವ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ನಾವು ಯಾವಾಗಲೂ ನಮ್ಮ ಹಕ್ಕುಗಳ ಬಗ್ಗೆ ಮಾತನಾಡುತ್ತೇವೆಯೇ ಹೊರತು, ಸಂವಿಧಾನದ ಭಾಗ 4 ಎ ನಲ್ಲಿ ಉಲ್ಲೇಖಿಸಲಾದ ಮೂಲಭೂತ ಕರ್ತವ್ಯಗಳ ಬಗ್ಗೆ ಗಮನ ಹರಿಸುವುದಿಲ್ಲ. ಪ್ರತಿಯೊಬ್ಬರೂ ಆತ್ಮವಿಮರ್ಶೆ ಮಾಡಿಕೊಂಡು ದೇಶಕ್ಕೆ ನಿಷ್ಡೆಯಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದೇವೆಯೇ ಮತ್ತು ಭ್ರಾತೃತ್ವವನ್ನು ಬೆಳೆಸುತ್ತಿದ್ದೇವೆಯೇ ಎಂಬ ಬಗ್ಗೆ ಪ್ರಶ್ನಿಸಿಕೊಳ್ಳಬೇಕು ಎಂದರು.ಅಂಬೇಡ್ಕರ್ ನೀಡಿದ ಸಂದೇಶಗಳನ್ನು ದೈನಂದಿನ ಜೀವನದಲ್ಲಿ ಪಾಲಿಸಿದಾಗ ಮಾತ್ರ ಆ ಹಿರಿಯ ಚೇತನಕ್ಕೆ ನಾವು ಸಲ್ಲಿಸುವ ನಿಜವಾದ ಗೌರವವಾಗುತ್ತದೆ. ವರ್ಷಕ್ಕೊಮ್ಮೆ ಕಾರ್ಯಕ್ರಮಗಳನ್ನು ನಡೆಸಿ ಅವರನ್ನು ನೆನೆಯುವುದಕ್ಕಿಂತ, ಅವರ ಆದರ್ಶಗಳನ್ನು ಅನುಸರಿಸುವುದು ಮುಖ್ಯ ಎಂದು ರೋಣ ವಾಸುದೇವ್ ಹೇಳಿದರು.
ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿಯಲ್ಲ, ಶ್ರೇಷ್ಠ ಆರ್ಥಿಕ ತಜ್ಞರೂ ಆಗಿದ್ದರು. 1923ರಲ್ಲಿ ಅವರು ಇಂಗ್ಲೆಂಡ್ನಲ್ಲಿ ಮಂಡಿಸಿದ ಆರ್ಥಿಕ ಪ್ರಬಂಧ ಮತ್ತು ರೂಪಾಯಿಯ ಮೌಲ್ಯದ ಕುರಿತಾದ ಚಿಂತನೆಗಳೇ 1935ರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಗೆ ಮೂಲ ಪ್ರೇರಣೆಯಾದವು.ದೇಶದ ಸಮೃದ್ಧಿಗಾಗಿ ನದಿಗಳ ಜೋಡಣೆಯಾಗಬೇಕು ಎಂಬ ಕನಸನ್ನು ಅಂಬೇಡ್ಕರ್ ಅಂದೇ ಕಂಡಿದ್ದರು. ಮಹಿಳೆಯರು ಮತ್ತು ಪುರುಷರಿಗೆ ಸಮಾನ ಶಿಕ್ಷಣ ದೊರೆತಾಗ ಮಾತ್ರ ದೇಶ ಅಭಿವೃದ್ಧಿ ಹೊಂದುತ್ತದೆ ಎಂದು ಪ್ರತಿಪಾದಿಸಿದ್ದರು. ಸುಮಾರು 40 ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ, ಭಾರತದ ವೈವಿಧ್ಯಮಯ ಸಂಸ್ಕೃತಿಗೆ ಅನುಗುಣವಾಗಿ ಸಮಾನತೆಯ ಸಂವಿಧಾನ ನೀಡಿದ ಮಹಾನ್ ನಾಯಕನನ್ನು ಸ್ಮರಿಸುವುದು ನಮ್ಮೆಲ್ಲರ ಸೌಭಾಗ್ಯ ಎಂದರು.