ಸಂವಿಧಾನದ ಪೀಠಿಕೆ ಸಾಮಾಜಿಕ ನ್ಯಾಯದ ಪ್ರತೀಕ: ಸಚಿವ ಎಸ್.ಮಧು ಬಂಗಾರಪ್ಪ

KannadaprabhaNewsNetwork |  
Published : Jan 27, 2025, 12:49 AM IST
ಪೊಟೋ: 26ಎಸ್‌ಎಂಜಿಕೆಪಿ06ಶಿವಮೊಗ್ಗದ ಅಲ್ಲಮಪ್ರಭು ಉದ್ಯಾನವನದಲ್ಲಿ ಭಾನುವಾರ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸಂವಿಧಾನ ಪೀಠಿಕೆಯನ್ನು ಲೋಕಾರ್ಪಣೆಗೊಳಿಸಿದರು. | Kannada Prabha

ಸಾರಾಂಶ

ಬಾಬಾ ಸಾಹೇಬ್ ಅಂಬೇಡ್ಕರರ ಆಶಯದಂತೆ ಇಂದು ಸಂವಿಧಾನದ ಪೀಠಿಕೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿರುವುದು ಹರ್ಷದ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಸಾಮೂಹಿಕ ವಾಚನದ ಮೂಲಕ ಸಂವಿಧಾನ ಪೀಠಿಕೆ ಲೋಕಾರ್ಪಣೆ

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಬಾಬಾ ಸಾಹೇಬ್ ಅಂಬೇಡ್ಕರರ ಆಶಯದಂತೆ ಇಂದು ಸಂವಿಧಾನದ ಪೀಠಿಕೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿರುವುದು ಹರ್ಷದ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ನಗರದ ಅಲ್ಲಮಪ್ರಭು ಉದ್ಯಾನದಲ್ಲಿ ಭಾನುವಾರ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚಿಸುವ ಮೂಲಕ ಲೋಕಾರ್ಪಣೆಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀಮಂತ ಸಂಸ್ಕೃತಿ, ಪರಂಪರೆಯನ್ನು ಹೊಂದಿರುವ ಭಾರತದಂತಹ ಬೃಹತ್ ರಾಷ್ಟ್ರದ ಎಲ್ಲರೂ ಒಪ್ಪಿತ ಏಕೈಕ ಸಂವಿಧಾನ ನಮ್ಮದಾಗಿದೆ. ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮದಾಗಿದೆ. ಹಲವು ರಾಜ್ಯಗಳಾಗಿ ವಿಂಗಡಣೆಯಾಗಿದ್ದರೂ, ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಟ ರಾಷ್ಟ್ರವಾಗಿ ದೇಶ ಬೆಳೆದು ನಿಂತಿದೆ ಎಂದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ದೇಶಕ್ಕೆ ಭೇಟಿ ನೀಡಿದ ನೂರನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಲವು ವಿಶಿಷ್ಟ ಕಾರ್ಯಕ್ರಮಗಳನ್ನು ರೂಪಿಸಿದೆ. ಅದರ ಭಾಗವಾಗಿ 2025ರ ಅಕ್ಟೋಬರ್ 2ರಿಂದ 2026ರ ಅಕ್ಟೋಬರ್ ಮಾಹೆಯವರೆಗೆ ಗಾಂಧಿ ಭಾರತ ಹೆಸರಿನಲ್ಲಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದು ಹೇಳಿದರು.

2023ರ ಸೆಪ್ಟಂಬರ್ 5ರಿಂದ ಈವರೆಗೆ ರಾಜ್ಯದ ಎಲ್ಲಾ ಶಾಲೆಗಳ 1.8 ಕೋಟಿ ವಿದ್ಯಾರ್ಥಿಗಳು ಪ್ರತಿದಿನ ಶಾಲೆಯಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವ ಪರಿಪಾಠ ಆರಂಭಿಸಲಾಗಿದೆ. ಈ ಮೂಲಕ ಮಕ್ಕಳಿಗೆ ಸಂವಿಧಾನದ ಮಹತ್ವ ತಿಳಿಸಲಾಗುತ್ತಿದೆ. ಪೀಠಿಕೆಯನ್ನು ಅರ್ಥೈಸಿಕೊಂಡು ಅನುಸರಿಸುವ ಅಗತ್ಯವಿದೆ ಎಂದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಪ್ರವಾಸೋದ್ಯಮವನ್ನು ಉತ್ತೇಜಿಸುವಲ್ಲಿ ಸೊರಬ ತಾಲೂಕಿನ ಇತಿಹಾಸ ಪ್ರಸಿದ್ದ ಚಂದ್ರಗುತ್ತಿಯನ್ನು ಹಾಗೂ ಶ್ರೀ ರೇಣುಕಾಂಬ ದೇವಸ್ಥಾನದ ಸರ್ವಾಂಗೀಣ ವಿಕಾಸಕ್ಕೆ ವಿಸ್ತøತ ಕ್ರಿಯಾಯೋಜನೆಯನ್ನು ತಯಾರಿಸಿದ್ದು, ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರ ಪ್ರಾಚ್ಯವಸ್ತು ಸಂಶೋಧನಾ ಇಲಾಖೆಗೆ ಅನುಮೋದನೆಗಾಗಿ ರವಾನಿಸಲಾಗಿದೆ. ಶೀಘ್ರದಲ್ಲಿ ಅನುಮೋದನೆ ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ನಗರದ ಹೃದಯಭಾಗದಲ್ಲಿರುವ ಅಲ್ಲಮಪ್ರಭು ಉದ್ಯಾನ, ಅಲ್ಲಮಪ್ರಭುಗಳ ಜನ್ಮಸ್ಥಳ ಅನಿಮಿಷಾರಣ್ಯ ಹಾಗೂ ಗುಡವಿ ಪಕ್ಷಿಧಾಮ ಪ್ರದೇಶದ ಅಭಿವೃದ್ಧಿಗೆ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಹಣಕಾಸು ಕಾಯ್ದಿರಿಸಲು ಮುಖ್ಯಮಂತ್ರಿಗಳನ್ನು ಕೋರಲಾಗುವುದು. ಆನೆಗಳ ಹತೋಟಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲು ಅರಣ್ಯ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದರು.

ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಈಗಾಗಲೇ ಮಧ್ಯಂತರ ವರದಿಯನ್ನು ನೀಡಲಾಗಿದೆ. ಮಾನ್ಯ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ತಜ್ಞರ ಸಭೆಯ ತೀರ್ಮಾನದಂತೆ ರಾಜ್ಯ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ರವಿಕುಮಾರ್, ಚಂದ್ರಭೂಪಾಲ, ಸುಂದರೇಶ್, ಆರ್.ಪ್ರಸನ್ನಕುಮಾರ್ ಮತ್ತಿತರರು ಇದ್ದರು.

ಮೈಕ್ರೋ ಫೈನಾನ್ಸ್ ದಂಧೆಗೆ ಕಠಿಣ ಕ್ರಮ

ಮೈಕ್ರೋ ಫೈನಾನ್ಸ್, ಮೀಟರ್ ಬಡ್ಡಿದಂಧೆಗೆ ನಿಯಂತ್ರಣಕ್ಕೆ ಈಗಾಗಲೇ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಲಾಗಿದ್ದು, ಈ ಪಿಡುಗಿನ ಸಮಗ್ರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಕುಪ್ಪಳಿಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಆಶಯಕ್ಕೆ ವಿರುದ್ಧವಾಗಿ ನಡೆದ ಕಾರ್ಯಕ್ರಮದ ಕುರಿತು ವಿಷಾದ ವ್ಯಕ್ತಪಡಿಸಿದ ಅವರು, ಸಮಗ್ರ ಮಾಹಿತಿ ಪಡೆದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದಲ್ಲಿ ಈ ಹಿಂದೆ ಕೈಗೊಳ್ಳಲಾದ ಸ್ಮಾರ್ಟ್‍ಸಿಟಿ ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಆಗಿರಬಹುದಾದ ಲೋಪಗಳ ತನಿಖೆ ಹಾಗೂ ಪರಿಸರಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಷಾಹಿ ಎಕ್ಸ್‌ಪೋರ್ಟ್ ಕಂಪನಿಯ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ