ಪಶ್ಚಿಮಘಟ್ಟಕ್ಕೆ ಅವಧಿಪೂರ್ವ ಕಾಡ್ಗಿಚ್ಚು ಕಂಟಕ

KannadaprabhaNewsNetwork |  
Published : Mar 03, 2025, 01:47 AM IST
ಪಶ್ಚಿಮ ಘಟ್ಟದ ಅತಿ ಸೂಕ್ಷ್ಮ ಹುಲ್ಲುಗಾವಲು ಮತ್ತು ಶೋಲಾರಣ್ಯ ಪ್ರದೇಶ. | Kannada Prabha

ಸಾರಾಂಶ

ಕರಾವಳಿಯಲ್ಲಿ ಹೀಟ್‌ ವೇವ್‌ ಅವಧಿಪೂರ್ವದಲ್ಲೇ ಕಾಣಿಸಿಕೊಂಡು ರಾಜ್ಯದಲ್ಲೇ ಅತಿ ಹೆಚ್ಚು ಉಷ್ಣಾಂಶ ಈಗಾಗಲೇ ದಾಖಲಾಗಿದೆ. ಇದರೊಂದಿಗೆ ಕರಾವಳಿಯುದ್ದಕ್ಕೂ ನೈಸರ್ಗಿಕ ರಕ್ಷಣಾ ಗೋಡೆಯಾಗಿ, ನಾಡಿಗೆ ನೀರಿನ ಮೂಲದ ಅಕ್ಷಯ ಪಾತ್ರೆಯಾಗಿರುವ ಪಶ್ಚಿಮಘಟ್ಟದಲ್ಲಿ ಈ ವರ್ಷ ಅವಧಿ ಪೂರ್ವದಲ್ಲೇ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಮುಂದಿನ 3 ತಿಂಗಳ ಕಡು ಬೇಸಗೆಯುದ್ದಕ್ಕೂ ನಿತ್ಯ ಹರಿದ್ವರ್ಣದ ಅರಣ್ಯಕ್ಕೆ ಕಾಡ್ಗಿಚ್ಚು ಭಾರೀ ಅಪಾಯ ತಂದೊಡ್ಡುವ ಎಲ್ಲ ಸಾಧ್ಯತೆಗಳಿವೆ.

ಸಂದೀಪ್‌ ವಾಗ್ಲೆ

ಕನ್ನಡಪ್ರಭ ವಾರ್ತೆ ಮಂಗಳೂರು

ಕರಾವಳಿಯಲ್ಲಿ ಹೀಟ್‌ ವೇವ್‌ ಅವಧಿಪೂರ್ವದಲ್ಲೇ ಕಾಣಿಸಿಕೊಂಡು ರಾಜ್ಯದಲ್ಲೇ ಅತಿ ಹೆಚ್ಚು ಉಷ್ಣಾಂಶ ಈಗಾಗಲೇ ದಾಖಲಾಗಿದೆ. ಇದರೊಂದಿಗೆ ಕರಾವಳಿಯುದ್ದಕ್ಕೂ ನೈಸರ್ಗಿಕ ರಕ್ಷಣಾ ಗೋಡೆಯಾಗಿ, ನಾಡಿಗೆ ನೀರಿನ ಮೂಲದ ಅಕ್ಷಯ ಪಾತ್ರೆಯಾಗಿರುವ ಪಶ್ಚಿಮಘಟ್ಟದಲ್ಲಿ ಈ ವರ್ಷ ಅವಧಿ ಪೂರ್ವದಲ್ಲೇ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಮುಂದಿನ 3 ತಿಂಗಳ ಕಡು ಬೇಸಗೆಯುದ್ದಕ್ಕೂ ನಿತ್ಯ ಹರಿದ್ವರ್ಣದ ಅರಣ್ಯಕ್ಕೆ ಕಾಡ್ಗಿಚ್ಚು ಭಾರೀ ಅಪಾಯ ತಂದೊಡ್ಡುವ ಎಲ್ಲ ಸಾಧ್ಯತೆಗಳಿವೆ.

ಪಶ್ಚಿಮಘಟ್ಟದಲ್ಲಿ ಕಳೆದ ಆರೇಳು ವರ್ಷಗಳಿಂದ ಹಿಂದೆಂದೂ ಕಾಣದಂತಹ ಭೂಕುಸಿತಗಳು, ಮೇಘಸ್ಫೋಟಗಳು ಸಂಭವಿಸಿ ಜನರ, ಪ್ರಾಣಿ, ಸಸ್ಯಸಂಕುಲಕ್ಕೆ ಅಪಾರ ಹಾನಿ ಆಗುತ್ತಲೇ ಇವೆ. ಮಳೆಗಾಲದ ಭೂಕುಸಿತಕ್ಕೂ, ಬೇಸಿಗೆಯ ಕಾಡ್ಗಿಚ್ಚಿಗೂ ನೇರ ಸಂಬಂಧ ಇದೆ ಎಂದು ಪರಿಸರ ತಜ್ಞರು ಹೇಳುತ್ತಾರೆ. ನಾಡಿನ ನೆಲ- ಜಲ-ಜೀವಸಂಕುಲಕ್ಕೆ ಇಷ್ಟು ದೊಡ್ಡ ಕಂಟಕ ಎದುರಾಗಿರುವಾಗ ಕಾಡ್ಗಿಚ್ಚನ್ನು ನಿಯಂತ್ರಿಸಲು ಹೆಲಿಕಾಪ್ಟರ್‌ನಂತಹ ಅತ್ಯಾಧುನಿಕ ವ್ಯವಸ್ಥೆ ಜಾರಿಗೊಳಿಸುವ ದಶಕದ ಬೇಡಿಕೆ ಮಾತ್ರ ಈಡೇರಿಲ್ಲ.

ಅವಧಿಪೂರ್ವ ಕಾಡ್ಗಿಚ್ಚು:

ಪಶ್ಚಿಮಘಟ್ಟದಲ್ಲಿ ಸಾಮಾನ್ಯವಾಗಿ ಮಾರ್ಚ್‌, ಏಪ್ರಿಲ್‌, ಮೇ ತಿಂಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಡ್ಗಿಚ್ಚು, ಈ ವರ್ಷ ಜನವರಿಯಲ್ಲೇ ಕಾಣಿಸಿಕೊಂಡಿದ್ದು, ಎಕರೆಗಟ್ಟಲೆ ಸೂಕ್ಷ್ಮ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಜನವರಿಯಲ್ಲೇ ಕಾಡ್ಗಿಚ್ಚು ಬಿದ್ದಿದ್ದರೆ, ಕಳೆದ ಎರಡೇ ತಿಂಗಳಲ್ಲಿ ದ.ಕ. ಜಿಲ್ಲೆಯೊಂದರಲ್ಲೇ 15 ಅರಣ್ಯ ಪ್ರದೇಶಗಳಲ್ಲಿನ 224 ಗುಡ್ಡಗಳಿಗೆ ಬೆಂಕಿ ಬಿದ್ದ ಪ್ರಕರಣಗಳು ನಡೆದಿವೆ. ಈ ಪೈಕಿ, ಫೆಬ್ರವರಿ ಕೊನೆಯ ವಾರವೊಂದರಲ್ಲೇ ಆರೇಳು ಪ್ರಕರಣಗಳು ನಡೆದಿವೆ. ಬೇಸಿಗೆಯ ಆರಂಭದಲ್ಲೇ ಹೀಗಾದರೆ ಇನ್ನುಳಿದ ಮೂರು ತಿಂಗಳ ಪರಿಸ್ಥಿತಿ ಏನು ಎಂಬ ಆತಂಕ ಎದುರಾಗಿದೆ.

ಅತ್ಯಾಧುನಿಕ ಉಪಕರಣಗಳೇ ಇಲ್ಲ!:

ಪಶ್ಚಿಮಘಟ್ಟದ ದುರ್ಗಮ ಪ್ರದೇಶಗಳಲ್ಲಿ ಬೆಂಕಿ ಬಿದ್ದಾಗ ನಂದಿಸಲು ಅರಣ್ಯ ಇಲಾಖೆ ಬಳಿ ಯಾವುದೇ ಆಧುನಿಕ ವ್ಯವಸ್ಥೆಗಳಿಲ್ಲ. ರಸ್ತೆ ವ್ಯವಸ್ಥೆ ಇರುವವರೆಗೂ ವಾಹನದಲ್ಲಿ ತೆರಳಿ ಬಳಿಕ ಕಾಲ್ನಡಿಗೆ ಮೂಲಕ ಹೋಗಿ ಅದೇ ಸಾಂಪ್ರದಾಯಿಕ ‘ಫೈರ್‌ ಲೈನ್‌’ ಮಾಡುತ್ತಾರೆ. ಗಾಳಿ ವೇಗವಾಗಿದ್ದರೆ ಫೈರ್‌ಲೈನ್‌ನಿಂದ ಯಾವುದೇ ಉಪಯೋಗ ಆಗುವುದಿಲ್ಲ. ಇಲಾಖೆ ಬಳಿ ನೀರು-ಅಗ್ನಿಶಾಮಕ ವಸ್ತುಗಳನ್ನು ಕೊಂಡೊಯ್ಯಲು ವ್ಯವಸ್ಥೆಯೇ ಇಲ್ಲ.

ವಿದೇಶಗಳಲ್ಲಾದರೆ ಅರಣ್ಯಕ್ಕೆ ಬೆಂಕಿ ಬಿದ್ದ ಕೂಡಲೇ ಹೆಲಿಕಾಪ್ಟರ್‌ ಮೂಲಕ ತಕ್ಷಣ ಸ್ಥಳಕ್ಕೆ ತೆರಳಿ ನಂದಿಸುವ ವ್ಯವಸ್ಥೆ ಇದೆ. ನಮ್ಮ ರಾಜ್ಯದಲ್ಲಿ ಪ್ರತಿವರ್ಷ ಇಷ್ಟು ದೊಡ್ಡ ಅನಾಹುತಗಳು ಕಣ್ಮುಂದೆಯೇ ನಡೆಯುತ್ತಿರುವಾಗ ಅತ್ಯಾಧುನಿಕ ವ್ಯವಸ್ಥೆಗಳನ್ನು ಕಲ್ಪಿಸುವ ಜರೂರತ್ತಿದೆ ಎಂದು ಪರಿಸರವಾದಿ ಹೋರಾಟಗಾರ ದಿನೇಶ್‌ ಹೊಳ್ಳ ಆಗ್ರಹಿಸುತ್ತಾರೆ.

ಎಲ್ಲವೂ ಮಾನವ ನಿರ್ಮಿತ ಬೆಂಕಿ:

ಪಶ್ಚಿಮಘಟ್ಟದಲ್ಲಿ ಕಾಣಿಸುವ ಬೆಂಕಿ ಅನಾಹುತಗಳೆಲ್ಲವೂ ಮಾನವ ನಿರ್ಮಿತ. ಘಟ್ಟಪ್ರದೇಶದುದ್ದಕ್ಕೂ ಅವ್ಯಾಹತವಾಗಿರುವ ರೆಸಾರ್ಟ್‌ಗಳು, ಬೃಹತ್‌ ಎಸ್ಟೇಟ್‌ನವರು, ಟ್ರಕ್ಕಿಂಗ್‌ ಹೋಗುವವರ ರಾತ್ರಿ ಕ್ಯಾಂಪ್‌ ಫೈರ್‌ ಇತ್ಯಾದಿಗಳಿಂದಲೇ ಹೆಚ್ಚು ಕಾಡ್ಗಿಚ್ಚು ಸೃಷ್ಟಿಯಾಗುತ್ತಿದೆ. ಇದನ್ನೆಲ್ಲ ತಡೆಗಟ್ಟಬೇಕಾದರೆ ಪಶ್ಚಿಮಘಟ್ಟದಲ್ಲಿ ಕನಿಷ್ಠ ಪಕ್ಷ ಬೇಸಿಗೆಯ ಅವಧಿಯಲ್ಲಾದರೂ ಮಾನವನ ಹಸ್ತಕ್ಷೇಪವನ್ನು ಸಂಪೂರ್ಣ ನಿಲ್ಲಿಸಬೇಕು. ಮಾನವನಿಗೆ ಅರಣ್ಯ ಪ್ರವೇಶವನ್ನೇ ನಿಷೇಧಿಸಬೇಕು ಎನ್ನುತ್ತಾರೆ ದಿನೇಶ್‌ ಹೊಳ್ಳ.

ಕಾಡ್ಗಿಚ್ಚಿನಿಂದಲೇ ಭೂ ಕುಸಿತ, ‘ಜಲಪ್ರಳಯ’

ಬೇಸಿಗೆಯಲ್ಲಿ ಕಾಡ್ಗಿಚ್ಚಿನಿಂದ ಶೋಲಾರಣ್ಯದ ಮೇಲ್ಭಾಗದಲ್ಲಿರುವ ಅತಿ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸುಟ್ಟು ಹೋಗುತ್ತದೆ. ಮಳೆ ಬಿದ್ದ ಕೂಡಲೆ ಹುಲ್ಲುಗಾವಲಿಗೆ ನೀರು ಹಿಡಿದಿಡುವ ಶಕ್ತಿ ಕುಂಠಿತಗೊಂಡು ಇಂಥ ಅನಾಹುತಗಳು ಸಂಭವಿಸುತ್ತಿವೆ ಎನ್ನುತ್ತಾರೆ ಪರಿಸರವಾದಿ ದಿನೇಶ್‌ ಹೊಳ್ಳ.

ಆರೇಳು ವರ್ಷಗಳ ಹಿಂದೆ ಪಶ್ಚಿಮಘಟ್ಟದುದ್ದಕ್ಕೂ ಬಾಯ್ದೆರೆದು, ದೊಡ್ಡ ಪರ್ವತ ಶ್ರೇಣಿಗಳೇ ಕುಸಿದು ಹೆದ್ದಾರಿಗಳಷ್ಟೇ ಅಲ್ಲ, ಮಂಗಳೂರು-ಬೆಂಗಳೂರು ರೈಲು ಮಾರ್ಗ ವಾರಗಳ ಕಾಲ ಬಂದ್‌ ಆಗಿತ್ತು. ಸುಳ್ಯ-ಮಡಿಕೇರಿ ಭಾಗದಲ್ಲಂತೂ ಪರ್ವತ ಶ್ರೇಣಿಗಳ ಭೂಕುಸಿತಕ್ಕೆ ಪ್ರಾಣಹಾನಿ ಸಂಭವಿಸಿತ್ತು. ಅದಾದ ಮರುವರ್ಷ ಘಟ್ಟ ಪ್ರದೇಶದಲ್ಲಿ ಭಾರೀ ಭೂಕುಸಿತ ಉಂಟಾಗಿ ಬೆಳ್ತಂಗಡಿ ಭಾಗದಲ್ಲಿ ಜಲಪ್ರಳಯ, ಅಪಾರ ನಷ್ಟ ಉಂಟಾಗಿತ್ತು. ಪ್ರತಿ ವರ್ಷವೂ ಒಂದಿಲ್ಲೊಂದು ಕಡೆ ಭೂಕುಸಿತ, ಮೇಘಸ್ಫೋಟ ನಡೆಯುತ್ತಲೇ ಇದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ