ಕಂದಾಯ- ಅರಣ್ಯ ಭೂಮಿ ಜಂಟಿ ಸರ್ವೆಗೆ ಸಿದ್ಧತೆ: ಕಟಾರಿಯಾ

KannadaprabhaNewsNetwork |  
Published : Nov 22, 2023, 01:00 AM IST
ಚಿಕ್ಕಮಗಳೂರು ಪ್ರೆಸ್‌ ಕ್ಲಬ್‌ನಲ್ಲಿ ಮಂಗಳವಾರ ನಡೆದ ಸಂವಾದ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

ಕಂದಾಯ- ಅರಣ್ಯ ಭೂಮಿ ಜಂಟಿ ಸರ್ವೆಗೆ ಸಿದ್ಧತೆ: ಕಟಾರಿಯಾಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ

ಅಕ್ರಮ ಭೂ ಮಂಜೂರಾತಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ, ಪತ್ರಕರ್ತರೊಂದಿಗೆ ಸಂವಾದ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಜಿಲ್ಲೆಯಲ್ಲಿ ಕಂದಾಯ ಮತ್ತು ಅರಣ್ಯ ಭೂಮಿ ಜಂಟಿ ಸರ್ವೆಗೆ ಸಂಬಂಧಿಸಿದಂತೆ ಪೂರ್ವಸಿದ್ಧತಾ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್ ಕಟಾರಿಯಾ ಹೇಳಿದರು.

ಚಿಕ್ಕಮಗಳೂರು ಪ್ರೆಸ್‌ ಕ್ಲಬ್‌ ಮಂಗಳವಾರ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಎಷ್ಟು ಪ್ರದೇಶ ಸರ್ವೆ ಆಗಬೇಕು, ಕಂದಾಯ ಮತ್ತು ಅರಣ್ಯ ಇಲಾಖೆಯಲ್ಲಿ ಎಷ್ಟು ಮಂದಿ ಸರ್ವೆಯರ್‌ ಇದ್ದಾರೆ. ಜಾಗದಲ್ಲಿ ಸರ್ವೆ ಮಾಡಬೇಕಾ, ಡ್ರೋಣ್‌ ಮೂಲಕ ಸರ್ವೆ ಮಾಡಬೇಕಾ, ಇದಕ್ಕಾಗಿ ಹೊರ ಜಿಲ್ಲೆಯಿಂದ ಸರ್ವೆಯರ್‌ಗಳನ್ನು ಕರೆಸಿಕೊಳ್ಳಬೇಕಾ, ಈ ಎಲ್ಲಾ ಆಯಾಮಗಳಲ್ಲಿ ಯೋಚಿಸಲಾಗುತ್ತಿದೆ ಎಂದರು.

ಕಾಫಿ ಬೆಳೆಗಾರರು ಸಾಗುವಳಿ ಮಾಡಿಕೊಂಡು ಬರುತ್ತಿರುವ ಕಂದಾಯ ಭೂಮಿಯನ್ನು ಅವರಿಗೆ ಗುತ್ತಿಗೆ ಆಧಾರದಲ್ಲಿ ನೀಡುವುದು ಪರಿಶೀಲನೆಯ ಹಂತದಲ್ಲಿದೆ. ಇದಕ್ಕೂ ಮೊದಲು ಆಸ್ಪತ್ರೆ, ಅಂಗನವಾಡಿ, ಸರ್ಕಾರಿ ಶಾಲೆಗಳು, ಆಟದ ಮೈದಾನ, ಸಶ್ಮಾನಗಳಿಗೆ ಜಾಗ ಮೀಸಲಿಟ್ಟು ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕಾಫಿ ಬೆಳೆಗಾರರಿಗೆ ಕಂದಾಯ ಭೂಮಿ ಗುತ್ತಿಗೆ ಆಧಾರದಲ್ಲಿ ನೀಡುವ ಸಮಸ್ಯೆಗಳಿರುವುದು ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಉಡುಪಿ ಜಿಲ್ಲೆಗಳಲ್ಲಿ. ಸಾಗುವಳಿ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ನೀಡುವ ಮೊದಲು ರಸ್ತೆ ಪಕ್ಕದಲ್ಲಿ ಯಾವ ಯಾವ ಸರ್ವೆ ನಂಬರ್‌ಗಳ ಜಾಗ ಇದೆ ಎಂಬುದನ್ನು ಪತ್ತೆ ಹಚ್ಚಬೇಕು, ಅವುಗಳನ್ನು ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕಡೂರು ಹಾಗೂ ಮೂಡಿಗೆರೆ ತಾಲೂಕುಗಳಲ್ಲಿ ಅನರ್ಹರಿಗೆ ಜಮೀನು ಮಂಜೂರು ಮಾಡಿರುವ ಪ್ರಕರಣಗಳ ತನಿಖೆ ಮುಕ್ತಾಯಗೊಂಡಿದೆ. ನಮ್ಮ ಕೈಗೆ ವರದಿ ಸಹ ಬಂದಿದೆ. ಸುಮಾರು 10 ಸಾವಿರ ಪ್ರಕರಣಗಳಿದ್ದು, ಅವುಗಳಿಗೆ ಸಂಬಂಧಿಸಿದಂತೆ ಮುಂದಿನ ಹಂತದಲ್ಲಿ ಯಾವ ರೀತಿಯ ಕ್ರಮ ಆಗಬೇಕೆಂಬುದು ತೀರ್ಮಾನ ಮಾಡಬೇಕಾಗಿದೆ ಎಂದರು.

ತಪ್ಪು ಮಾಡಿದ ಅಧಿಕಾರಿಗಳಿಗೆ ಶಿಕ್ಷೆ ಆಗಬೇಕು, ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ತಪ್ಪು ಮಾಡಿದರೆ ಅವರಿಗೆ ಯಾವ ಶಿಕ್ಷೆ ನೀಡಬೇಕೆಂಬುದು ಕಾನೂನಿನಲ್ಲಿ ಹೇಳಲಾಗಿದೆ. ಹಾಗಾಗಿ ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಾಗಬೇಕಾಗಿದೆ. ಇದರ ಜತೆಗೆ ಮಂಜೂರು ಮಾಡಿರುವ ಜಾಗ ವಶಕ್ಕೆ ಪಡೆಯಬೇಕಾಗಿದೆ. ಈ ಎಲ್ಲಾ ಪ್ರಕ್ರಿಯೆಗಳು ಹಂತ ಹಂತವಾಗಿ ನಡೆಯಲಿವೆ ಎಂದರು.

ಕಾಡು ಪ್ರಾಣಿಗಳ ಉಪಟಳ ಮಲೆನಾಡಿನಲ್ಲಿ ಹೆಚ್ಚಳವಾಗಿದೆ. ಕೆಲವೆಡೆ ಜನರು ಕಾಡಿನಿಂದ ಹೊರಗೆ ಬರಲು ವಾಸಿಸಲು ಇಚ್ಚಿಸಿದ್ದಾರೆ. ಕುದುರೆಮುಖ ಮೀಸಲು ಅರಣ್ಯದೊಳಗೆ ವಾಸವಾಗಿರುವ ಜನರು ಅಲ್ಲಿಂದ ಹೊರ ಬರಲು ಉದ್ದೇಶಿಸಿದ್ದಾರೆ. ಅವರಿಗೆ ವಿಶೇಷ ಪ್ಯಾಕೇಜ್‌ ನೀಡಬೇಕಾಗಿದೆ. ಈ ಸಿದ್ಧತೆಯೂ ಕೂಡ ನಡೆಯುತ್ತಿದೆ ಎಂದು ಹೇಳಿದರು.

ಸಂವಾದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಚಿಕ್ಕಮಗಳೂರು ಪ್ರೆಸ್‌ ಕ್ಲಬ್ ಅಧ್ಯಕ್ಷ ಪಿ. ರಾಜೇಶ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಮೀನಾ ನಾಗರಾಜ್‌, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ರಾಜೇಶ್‌, ಚಿಕ್ಕಮಗಳೂರು ತಹಸೀಲ್ದಾರ್‌ ಡಾ. ಸುಮಂತ್‌, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜೇಗೌಡ, ಪ್ರೆಸ್‌ ಕ್ಲಬ್‌ ಪ್ರಧಾನ ಕಾರ್ಯದರ್ಶಿ ಆರ್‌. ತಾರಾನಾಥ್‌ ಉಪಸ್ಥಿತರಿದ್ದರು. ಖಜಾಂಚಿ ಗೋಪಿ ಸ್ವಾಗತಿಸಿದರು. ನಿರ್ದೇಶಕ ಶಿವಕುಮಾರ್‌ ವಂದಿಸಿದರು. 21 ಕೆಸಿಕೆಎಂ 1

ಚಿಕ್ಕಮಗಳೂರು ಪ್ರೆಸ್‌ ಕ್ಲಬ್‌ನಲ್ಲಿ ಮಂಗಳವಾರ ನಡೆದ ಸಂವಾದ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ
ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?