ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ಗ್ರಂಥಾಲಯ ತೆರೆಯಲು ಸಿದ್ಧತೆ

KannadaprabhaNewsNetwork |  
Published : Jun 07, 2024, 12:32 AM IST

ಸಾರಾಂಶ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಓದಲು ಅನುಕೂಲವಾಗುವ ದೃಷ್ಟಿಯಿಂದ ಇ-ಲೈಬ್ರರಿ ತೆರೆಯುವ ಗುರಿ ಹೊಂದಲಾಗಿದೆ

ವಿಶೇಷ ವರದಿ ಗದಗ

ರಾಜ್ಯದ ಎಲ್ಲ ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ನಿಲಯಗಳಲ್ಲಿ ಗ್ರಂಥಾಲಯ ಸ್ಥಾಪನೆ ಮಾಡುವ ಮೂಲಕ ವಿದ್ಯಾರ್ಥಿಗಳ ಜ್ಞಾನಾರ್ಜನೆಯನ್ನು ಹೆಚ್ಚಿಸುವಲ್ಲಿ ಇಲಾಖೆ ವಿಶೇಷ ಗಮನ ನೀಡುತ್ತಿದೆ. ಪ್ರಾಯೋಗಿಕವಾಗಿ ಗದಗ ಜಿಲ್ಲೆಯ 18 ವಸತಿ ನಿಲಯಗಳಲ್ಲಿ ಗ್ರಂಥಾಲಯ ಸ್ಥಾಪನೆ ಮಾಡುತ್ತಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಹಾಗೂ ಮೆಟ್ರಿಕ್ ಪೂರ್ವ ವಸತಿ ನಿಲಯಗಳ ಹಲವು ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ರ‍್ಯಾಂಕ್ ಪಡೆಯುತ್ತಿದ್ದು, ಅವರಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಇಲಾಖೆಯು ಕ್ರಮ ಕೈಗೊಂಡಿದೆ. ಈಗಾಗಲೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕೆಲವು ವಸತಿ ನಿಲಯಗಳಲ್ಲಿ ಗ್ರಂಥಾಲಯ ವ್ಯವಸ್ಥೆಯಿದ್ದು, ಜಿಲ್ಲಾ ಪಂಚಾಯಿತಿಯ ಅನಿರ್ಬಂಧಿತ ಅನುದಾನವನ್ನು ಬಳಸಿಕೊಂಡು ಇಲಾಖೆಯ ಎಲ್ಲ ವಸತಿ ನಿಲಯಗಳಲ್ಲಿ ಗ್ರಂಥಾಲಯ ಸ್ಥಾಪನೆ ಮಾಡುವ ಚಿಂತನೆ ಇಲಾಖೆಯದ್ದಾಗಿದೆ.

18 ವಸತಿ ನಿಲಯಗಳಲ್ಲಿ ಸ್ಥಾಪನೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಮೆಟ್ರಿಕ್ ನಂತರದ 18 ವಸತಿ ನಿಲಯಗಳಲ್ಲಿ ₹1.16 ಕೋಟಿ ವೆಚ್ಚವನ್ನು ಜಿಲ್ಲಾ ಪಂಚಾಯಿತಿಯ ಅನಿರ್ಬಂಧಿತ ಅನುದಾನವನ್ನು ಬಳಸಿಕೊಂಡು ಕನಿಷ್ಠ 15/15 ಅಳತೆಯ ಕೊಠಡಿಯಲ್ಲಿ ಗ್ರಂಥಾಲಯ ಸ್ಥಾಪನೆಯ ಗುರಿ ಹೊಂದಲಾಗಿದ್ದು, ಇದರ ತಯಾರಿ ಕೂಡಾ ಅಂತಿಮ ಹಂತದಲ್ಲಿದೆ. ಇಲಾಖೆಯು ಸ್ವಂತ ಕಟ್ಟಡ ಹೊಂದಿರುವ ಹಾಗೂ ಗ್ರಂಥಾಲಯ ತೆರೆಯಲು ಸೂಕ್ತ ಸ್ಥಳಾವಕಾಶ ಹೊಂದಿರುವ 18 ವಸತಿ ನಿಲಯಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಗ್ರಂಥಾಲಯ ತೆರೆಯಲು ಅವಶ್ಯಕವಾಗಿ ಬೇಕಿರುವ ವಸ್ತುಗಳು ಪುಸ್ತಕ ಖರೀದಿಗೂ ಸಿದ್ಧತೆ ಪೂರ್ಣಗೊಂಡಿದೆ.

ತಂತ್ರಜ್ಞಾನ ಅಳವಡಿಕೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಓದಲು ಅನುಕೂಲವಾಗುವ ದೃಷ್ಟಿಯಿಂದ ಇ-ಲೈಬ್ರರಿ ತೆರೆಯುವ ಗುರಿ ಹೊಂದಲಾಗಿದೆ. ಅದಕ್ಕೆ ಪೂರಕವಾಗಿ ಬೇಕಿರುವ ಕಂಪ್ಯೂಟರ್, ಇಂಟರ್‌ನೆಟ್ ಸಂಪರ್ಕಕ್ಕಾಗಿ ಬ್ರಾಡ್‌ಬ್ಯಾಂಡ್, ಕಂಪ್ಯೂಟರ್ ಟೇಬಲ್, ಕುರ್ಚಿ ವ್ಯವಸ್ಥೆ. ಅದಲ್ಲದೆ ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ವಾಷಿಂಗ್ ಮಶಿನ್ ನೀಡುವ ಚಿಂತನೆಯೂ ನಡೆದಿದೆ.

ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಅವರು ಗದಗ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಗ್ರಂಥಾಲಯ ಸೌಲಭ್ಯ ಒದಗಿಸುವ ಕುರಿತು ಸೂಚನೆ ನೀಡಿದ್ದರು. ಪ್ರಾಯೋಗಿಕವಾಗಿ ಗದಗ ಜಿಲ್ಲೆಯ ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ಗ್ರಂಥಾಲಯ ಸ್ಥಾಪನೆ ಮಾಡಿದ ನಂತರ, ಇತರೆ ಜಿಲ್ಲೆಗಳಿಗೂ ವಿಸ್ತರಣೆ ಮಾಡಬಹುದು ಎಂದು ಚರ್ಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ವಂತ ಕಟ್ಟಡ ಹಾಗೂ ಸೂಕ್ತ ಸ್ಥಳಾವಕಾಶ ಹೊಂದಿರುವ ಮೆಟ್ರಿಕ್ ನಂತರದ 18 ವಸತಿ ನಿಲಯಗಳಲ್ಲಿ 1.16 ಕೋಟಿ ವೆಚ್ಚದಲ್ಲಿ ಗ್ರಂಥಾಲಯ ಸೌಲಭ್ಯ ಒದಗಿಸಲು ನಿರ್ಣಯಿಸಲಾಗಿದೆ. ಜಿಪಂ ಸಿಇಒ ಅವರ ನಿರ್ದೇಶನದಂತೆ ವಸತಿ ನಿಲಯಗಳನ್ನು ಗುರುತಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರವಿ ಗುಂಜೀಕರ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ
ಕಾರ್ಯಭಾರ ಆಧರಿಸಿ ಶಿಕ್ಷಕರ ನೇಮಕ - ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿ