ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲೆಯಲ್ಲಿ ಕಳೆದ ಏಪ್ರಿಲ್ 26 ರಂದು ಜರುಗಿದ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜೂನ್ ೪ರಂದು ಸುಗಮವಾಗಿ ಮತ ಎಣಿಕಾ ಕಾರ್ಯ ನಡೆಸಲು ಎಣಿಕಾ ಕೊಠಡಿ, ಎಣಿಕಾ ಟೇಬಲ್, ಅಗತ್ಯ ಅಧಿಕಾರಿ, ಸಿಬ್ಬಂದಿ ನಿಯೋಜನೆ ಸೇರಿದಂತೆ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ನಗರದ ಕಚೇರಿಯಲ್ಲಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಗೆ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದರು. ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೊಳಪಡುವ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಮಧುಗಿರಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯನ್ನು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಗುಬ್ಬಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕಾ ಕಾರ್ಯವನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜೂನ್ ೪ ರಂದು ಬೆಳಿಗ್ಗೆ ೮ ಗಂಟೆಯಿಂದ ನಡೆಸಲಾಗುವುದು ಎಂದು ಹೇಳಿದರು.ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್ನಂತೆ ಒಟ್ಟು 112 ಟೇಬಲ್, ಅಂಚೆ ಮತಪತ್ರ ಹಾಗೂ ಇಟಿಪಿಬಿಎಸ್ ಎಣಿಕೆಗಾಗಿ 19 ಟೇಬಲ್ ಸೇರಿದಂತೆ ಒಟ್ಟು 131 ಟೇಬಲ್ಗಳಲ್ಲಿ ಮತ ಎಣಿಕೆಯನ್ನು ನಡೆಸಲಾಗುವುದು. ಅಂಚೆ ಮತಪತ್ರಗಳ ಎಣಿಕೆಗಾಗಿ 2 ಕೊಠಡಿಯಲ್ಲಿ 18 ಎಣಿಕಾ ಟೇಬಲ್ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಟೇಬಲ್ಗೂ ತಲಾ ಒಬ್ಬರು ಸಹಾಯಕ ಚುನಾವಣಾ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಇದಕ್ಕಾಗಿ ಒಟ್ಟು ೪೪೮ ಎಣಿಕಾ ಮೇಲ್ವಿಚಾರಕರು, ಎಣಿಕಾ ಸಹಾಯಕರು ಹಾಗೂ ಸೂಕ್ಷ್ಮ ವೀಕ್ಷಕರನ್ನು ನಿಯೋಜಿಸಲಾಗಿದ್ದು, ಎಣಿಕಾ ಕಾರ್ಯಕ್ಕೆ ನಿಯೋಜಿಸಿದವರಿಗೆ ಈಗಾಗಲೇ 2 ಹಂತದ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
ಮತ ಎಣಿಕಾ ಕಾರ್ಯಕ್ಕೆ ಅಭ್ಯರ್ಥಿಗಳು ನೇಮಕ ಮಾಡಿಕೊಂಡಿರುವ ಎಣಿಕಾ ಏಜೆಂಟರು ಕಡ್ಡಾಯವಾಗಿ ಚುನಾವಣಾಧಿಕಾರಿಗಳಿಂದ ಗುರುತಿನ ಚೀಟಿ ಪಡೆದುಕೊಳ್ಳತಕ್ಕದ್ದು. ಈಗಾಗಲೇ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ೩೪೦ ಎಣಿಕಾ ಏಜೆಂಟರುಗಳನ್ನು ನೇಮಕ ಮಾಡಿರುವ ಬಗ್ಗೆ ನಿಗಧಿತ ನಮೂನೆಯಲ್ಲಿ ಮಾಹಿತಿ ಸಲ್ಲಿಸಿದ್ದಾರೆ. ಮತ ಎಣಿಕಾ ಕೇಂದ್ರಗಳಿಗೆ ಅಧಿಕೃತ ಗುರುತಿನ ಚೀಟಿ ಹೊಂದಿರುವ ಮತ ಎಣಿಕೆ ಸಿಬ್ಬಂದಿ, ಅಭ್ಯರ್ಥಿಗಳ ಚುನಾವಣಾ ಏಜೆಂಟ್ ಹಾಗೂ ಮತ ಎಣಿಕಾ ಏಜೆಂಟರುಗಳನ್ನು ಹೊರತುಪಡಿಸಿ ಅನ್ಯರಿಗೆ ಪ್ರವೇಶವಿರುವುದಿಲ್ಲ ಎಂದು ತಿಳಿಸಿದರು. ಜಿಲ್ಲೆಯ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಎರಡು ಕೇಂದ್ರಗಳಲ್ಲಿ ನಡೆಯಲಿದ್ದು, ಎಣಿಕಾ ಕಾರ್ಯವನ್ನು ವೀಕ್ಷಿಸಲು ಚುನಾವಣಾ ಆಯೋಗವು ಇಬ್ಬರು ವೀಕ್ಷಕರನ್ನು ನೇಮಿಸಿದೆ. ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಎಣಿಕಾ ಕೇಂದ್ರಕ್ಕೆ ಶಮ್ಮಿ ನಾಹಿದ್ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಎಣಿಕಾ ಕೇಂದ್ರಕ್ಕೆ ಕೆ.ಎಸ್.ವಾಸವ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ಮತ ಎಣಿಕಾ ಕಾರ್ಯವು ಜೂನ್ 4ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದ್ದು, ಉಮೇದುವಾರರು ಮತ್ತು ಮತ ಎಣಿಕಾ ಏಜೆಂಟರುಗಳು ಮತ ಎಣಿಕಾ ಕಾರ್ಯ ಪ್ರಾರಂಭವಾಗುವ ಕನಿಷ್ಟ 1 ಗಂಟೆ ಮೊದಲು ಎಣಿಕಾ ಕೇಂದ್ರದಲ್ಲಿ ಹಾಜರಿರಬೇಕು ಎಂದು ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮಾತನಾಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ಮತ ಎಣಿಕಾ ಕೇಂದ್ರದ ಸುತ್ತಮುತ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಎಣಿಕಾ ಕೇಂದ್ರಕ್ಕೆ ರಾಜ್ಯ ಪೊಲೀಸ್, ಕೆಎಸ್ಆರ್ಪಿ, ಸಿಎಪಿಎಫ್ ಸೇರಿದಂತೆ 3 ಸುತ್ತಿನ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ವ್ಯವಸ್ಥಿತವಾಗಿ ಮತ ಎಣಿಕೆ ನಡೆಸುವ ನಿಟ್ಟಿನಲ್ಲಿ ಮತ ಎಣಿಕಾ ಕೇಂದ್ರಕ್ಕೆ ಬಿಗಿ ಭದ್ರತೆಯನ್ನು ಒದಗಿಸಲು 300 ಮಂದಿ ಎಚ್ಸಿ/ಪಿಸಿ, 48 ಎಎಸ್ಐ, 29 ಪಿಎಸ್ಐ, 15 ಸಿಪಿಐ, 4 ಡಿವೈ.ಎಸ್ಪಿ, ೧ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.ಎಣಿಕಾ ಕೇಂದ್ರಕ್ಕೆ ಬಿಗಿ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಜೂನ್ 4ರಂದು ಡಾ: ಶಿವಕುಮಾರ ಸ್ವಾಮೀಜಿ ವೃತ್ತದಿಂದ ಬಟವಾಡಿ ಕಡೆಗೆ ಪಾದಚಾರಿ ಹಾಗೂ ಯಾವುದೇ ವಾಹನ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ನಡುವಿನ ಕುವೆಂಪು ನಗರ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮತ ಎಣಿಕಾ ಕೇಂದ್ರ ಪ್ರವೇಶಿಸುವವರು ಕುವೆಂಪು ನಗರದ ಕಡೆಯಿಂದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಹಿಂಭಾಗದ ಆವರಣದಲ್ಲಿ ಹಾಗೂ ಕೋತಿತೋಪು ರಸ್ತೆಯಲ್ಲಿ ವಾಹನಗಳ ನಿಲುಗಡೆ ಮಾಡಬಹುದಾಗಿದೆ. ಸರ್ಕಾರಿ ಪಾಲಿಟೆಕ್ನಿಕ್ ಹಿಂಭಾಗದ ಗೇಟ್ ಮೂಲಕ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳಿಗೆ ಎಣಿಕಾ ಕೇಂದ್ರದೊಳಗೆ ಪ್ರವೇಶ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.448 ಅಧಿಕಾರಿ, ಸಿಬ್ಬಂದಿ ನಿಯೋಜನೆ: ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ೮ ವಿಧಾನಸಭಾ ಕ್ಷೇತ್ರಗಳು ಒಳಪಡಲಿದ್ದು, ಈ ವ್ಯಾಪ್ತಿಯ ಒಟ್ಟು 1846 ಮತಗಟ್ಟೆಗಳಲ್ಲಿ ನಡೆದ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಮೂಲಕ 12,96,720 ಮತದಾರರು ಮತದಾನ ಮಾಡಿದ್ದಾರೆ. ಅಲ್ಲದೆ ಮನೆಯಿಂದ ಮತದಾನ ಮಾಡಿದ 80 ವರ್ಷ ಮೇಲ್ಪಟ್ಟ 2933 ಮತದಾರರು, ಶೇ.40ಕ್ಕಿಂತ ಹೆಚ್ಚಿನ ಪ್ರಮಾಣದ ಅಂಗವೈಕಲ್ಯ ಹೊಂದಿರುವ 878 ವಿಕಲಚೇತನರು, 545 ಅಗತ್ಯ ಸೇವೆಯಲ್ಲಿರುವ, 3023 ಚುನಾವಣಾ ಕರ್ತವ್ಯ ನಿಯೋಜಿತ ಹಾಗೂ 274 ಸೇವಾ ಮತದಾರರು ಸೇರಿ 7663 ಮತದಾರರು ಅಂಚೆ ಮತದಾನದ ಮೂಲಕ ಮತದಾನ ಮಾಡಿದ್ದಾರೆ. ಸೇವಾ ಮತದಾರರಿಂದ ಮತಪತ್ರವನ್ನು ಸ್ವೀಕರಿಸಲು ಜೂನ್ ೪ರ ಬೆಳಿಗ್ಗೆ ೭.೫೯ ನಿಮಿಷದವರೆಗೂ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ ನೀಡಿದರು.