ಭಟ್ಕಳದ 8 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ

KannadaprabhaNewsNetwork | Published : Mar 24, 2024 1:32 AM

ಸಾರಾಂಶ

ಭಟ್ಕಳ ತಾಲೂಕಿನ ಎಂಟು ಪರೀಕ್ಷಾ ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಎಲ್ಲ ಕೇಂದ್ರಗಳಲ್ಲಿ ಮೂಲ ಸೌಕರ‍್ಯ ಸೇರಿದಂತೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ

ಭಟ್ಕಳ: ಮಾ. 25ರಿಂದ ಆರಂಭಗೊಳ್ಳುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈ ವರ್ಷ ಹೊಸ ಹಾಗೂ ಪುನರಾವರ್ತಿತರು ಸೇರಿದಂತೆ 1179 ವಿದ್ಯಾರ್ಥಿಗಳು, 1157 ವಿದ್ಯಾರ್ಥಿನಿಯರು ಸೇರಿ 2336 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ. ಮೊಗೇರ ತಿಳಿಸಿದರು.ತಾಲೂಕಿನ ಎಂಟು ಪರೀಕ್ಷಾ ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಎಲ್ಲ ಕೇಂದ್ರಗಳಲ್ಲಿ ಮೂಲ ಸೌಕರ‍್ಯ ಸೇರಿದಂತೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮೂರು ಜಾಗೃತ ದಳವನ್ನು ನಿಯೋಜಿಸಿದ್ದು, ೮ ಮಂದಿ ಸಿಟಿಂಗ್ ಸ್ಕ್ವಾಡ್, ೮ ಮಂದಿ ಮುಖ್ಯ ಅಧೀಕ್ಷಕರು, ೮ ಮಂದಿ ಪೇಪರ್ ಕಸ್ಟೋಡಿಯನ್, ೮ ಮಂದಿ ಮೊಬೈಲ್ ಸ್ವಾಧೀನಾಧಿಕಾರಿಗಳು, ೧೯೦ ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗಿದೆ.

ಈಗಾಗಲೇ ತಾಲೂಕಿನ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಸಂಬಂಧ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದಾರೆ. ವಿಷಯವಾರು ಮಾರ್ಗದರ್ಶಿ ತರಗತಿಗಳು, ಪಾಲಕರ ಸಭೆ, ವಿದ್ಯಾರ್ಥಿಗಳ ಕಾರ್ಯಾಗಾರ, ಶಿಕ್ಷಕರ ಕಾರ್ಯಾಗಾರಗಳನ್ನು ನಡೆಲಾಗಿದ್ದು, ಈ ಬಾರಿ ಒಳ್ಳೆಯ ಫಲಿತಾಂಶ ದಾಖಲಿಸುವ ನಿರೀಕ್ಷೆ ಇದೆ ಎಂದರು.

ತಾಲೂಕಿನ ಸಹಾಯಕ ಆಯುಕ್ತರು ಹಾಗೂ ತಹಸೀಲ್ದಾರರು ಕಾಲಕಾಲಕ್ಕೆ ಮಾರ್ಗದರ್ಶನ ನೀಡುತ್ತಿದ್ದು, ತಾಲೂಕಿನ ಅಧಿಕಾರಿಗಳೊಂದಿಗೆ ಉತ್ತಮ ಸಂಪರ್ಕ ಹೊಂದಲಾಗಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಈ ಸಲ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು.

ಭಟ್ಕಳ ತಾಲೂಕಿನಲ್ಲಿ 277 ವಿದ್ಯಾರ್ಥಿಗಳು, 66 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 343 ವಿದ್ಯಾರ್ಥಿಗಳು ಖಾಸಗಿಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಪ್ರತಿವರ್ಷ ಇವರು ಕಾರವಾರಕ್ಕೆ ಹೋಗಿ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಈ ಬಾರಿ ಖಾಸಗಿ ವಿದ್ಯಾರ್ಥಿಗಳಿಗೆ ಹೊಸ ವಿದ್ಯಾರ್ಥಿಗಳೊಂದಿಗೆ ಭಟ್ಕಳದಲ್ಲೇ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ.

ಈ ಬಾರಿ ಶೇಕಡಾ ನೂರು ಫಲಿತಾಂಶ ಹೊಂದುವ ಗುರಿ ಇಟ್ಟುಕೊಳ್ಳಲಾಗಿದೆ. ಭಟ್ಕಳ ತಾಲೂಕಿನಲ್ಲಿ ಇದುವರೆಗೂ ಯಾವುದೇ ವಿದ್ಯಾರ್ಥಿಯ ಫಲಿತಾಂಶ ಶೇ. ೧೦೦ಕ್ಕೆ ೧೦೦ ಆಗಿಲ್ಲ. ಈ ಬಾರಿ ಶಾಲಾ ಪರೀಕ್ಷೆಗಳಲ್ಲಿ ಶೇ. 98.99 ಅಂಕ ತೆಗೆದುಕೊಳ್ಳುವ ೧೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ. ಈ ಎಲ್ಲ ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗದರ್ಶನ ಹಾಗೂ ತರಬೇತಿ ನೀಡಲಾಗಿದೆ. ಹಾಗಾಗಿ ಈ ಬಾರಿ ಶೇ. 100ಕ್ಕೆ 100 ಅಂಕಗಳನ್ನು ಪಡೆದು ಉತ್ತೀರ್ಣರಾಗುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಲಿದ್ದಾರೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

Share this article