ನೆಹರೂ ಸ್ಟೇಡಿಯಂನಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದತೆ: ಡೀಸಿ ಗುರುದತ್ತ ಹೆಗಡೆ

KannadaprabhaNewsNetwork |  
Published : Jul 30, 2025, 12:45 AM IST
ಪೊಟೋ: 29ಎಸ್‌ಎಂಜಿಕೆಪಿ01ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವದ ಪೂರ್ವಸಿದ್ಧತಾ ಸಭೆಯಲ್ಲಿ  ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು. | Kannada Prabha

ಸಾರಾಂಶ

ಆಗಸ್ಟ್‌ 15ರಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಜಿಲ್ಲಾಡಳಿತದ ವತಿಯಿಂದ ಆಚರಿಸಲಾಗುವ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಈ ಬಾರಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಆಗಸ್ಟ್‌ 15ರಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಜಿಲ್ಲಾಡಳಿತದ ವತಿಯಿಂದ ಆಚರಿಸಲಾಗುವ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಈ ಬಾರಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿ, ನಗರದ ಡಿ.ಎ.ಆರ್.ಮೈದಾನದಲ್ಲಿ ಆಚರಿಸಲಾಗುತ್ತಿದ್ದ ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಥಳೀಯ ಜನರ ಅಪೇಕ್ಷೆ ಹಾಗೂ ಸಾರ್ವಜನಿಕರ ಒತ್ತಾಯದ ಮೇರೆಗೆ 12ವರ್ಷಗಳ ನಂತರ ನೆಹರೂ ಸ್ಟೇಡಿಯಂನಲ್ಲಿ ಆಚರಿಸಲು ನಿರ್ಣಯಿಸಲಾಗಿದೆ. ಸ್ಟೇಡಿಯಂನಲ್ಲಿನ ಸಿಂಥೆಟಿಕ್‌ ಟ್ರ್ಯಾಕ್ ಹಾನಿಗೊಳಗಾಗದಂತೆ ಅಗತ್ಯ ಕ್ರಮ ವಹಿಸಲಾಗಿದ್ದು, ಈ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನದಂದು ನಗರದ ಎಲ್ಲಾ ಕಚೇರಿಗಳ ಮುಖ್ಯಸ್ಥರು ತಮ್ಮ ಕಚೇರಿ ಕಟ್ಟಡಗಳನ್ನು ನಗರದ ಪ್ರಮುಖ ವರ್ತುಲಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದ ಅವರು, ಸ್ಥಳೀಯ ಸರ್ಕಾರೇತರ ಸಂಘ-ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳೂ ಸಹ ಈ ಸಂಭ್ರಮಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.

ಸ್ವಾತಂತ್ರ್ಯೋತ್ಸವವನ್ನು ವ್ಯವಸ್ಥಿತವಾಗಿ ಆಯೋಜಿಸಲು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ನೀಡಲಾಗಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಲಾಗಿರುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆಯೂ ಸೂಚಿಸಲಾಗಿದೆ. ಈ ಅವಧಿಯಲ್ಲಿ ಸಂಭ್ರಮಾಚರಣೆಗೆ ಯಾವುದೇ ಚ್ಯುತಿಯಾಗದಂತೆ ಎಚ್ಚರಿಕೆ ವಹಿಸುವಂತೆಯೂ ಸೂಚನೆ ನೀಡಲಾಗಿದೆ ಎಂದರು.

ಆಯೋಜನೆಯ ಜವಾಬ್ದಾರಿ ವಹಿಸಿಕೊಂಡಿರುವ ಅಧಿಕಾರಿಗಳು ವೇದಿಕೆ ಅಲಂಕಾರ, ರಾಷ್ಟ್ರಗೀತೆ, ನಾಡಗೀತೆ, ಪೆರೇಡ್‌ಸಿದ್ಧತೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮುಂತಾದ ಎಲ್ಲಾ ಚಟುವಟಿಕೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಪರೇಢ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಸಮರ್ಪಕ ತರಬೇತಿ ನೀಡಬೇಕು. ಮಕ್ಕಳು ಉತ್ತಮ ಶಾಲಾ ಸಮವಸ್ತ್ರದೊಂದಿಗೆ ಶಿಸ್ತುಬದ್ಧವಾಗಿ ಪರೇಡ್‌ನಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ನೆಹರೂ ಕ್ರೀಡಾಂಗಣದಲ್ಲಿ ಮತ್ತು ಅಂದು ಸಂಜೆ ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವ ಸಾಂಸ್ಕ್ರೃತಿಕ ಕಾರ್ಯಕ್ರಮಗಳನ್ನೂ ಸಹ ವ್ಯವಸ್ಥಿತವಾಗಿ ಆಯೋಜಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಸ್ವಾತಂತ್ರ್ಯ ಸೇನಾನಿಗಳನ್ನು ಗೌರವಯುತವಾಗಿ ಆಹ್ವಾನಿಸಿ, ಕಾರ್ಯಕ್ರಮದ ನಂತರ ಅವರನ್ನು ಬೀಳ್ಕೊಡುವ ಬಗ್ಗೆಯೂ ಅಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಸೂಡಾ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಸುಜಾತಾ, ಉಪವಿಭಾಗಾಧಿಕಾರಿ ಸತ್ಯನಾರಾಯಣ, ತಹಸೀಲ್ದಾರ್‌ ರಾಜೀವ್‌ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ