ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ಹಾಗೂ ಆಯಾ ಸಮಾಜದ ಪ್ರತಿನಿಧಿಗಳೊಂದಿಗೆ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರಗೇಶ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಜಯಂತಿಗಳ ಹಿನ್ನೆಲೆ ಕೈಗೊಳ್ಳಬೇಕಾದ ಸಿದ್ಧತೆಗಳು ಹಾಗೂ ಅಚ್ಚುಕಟ್ಟಾಗಿ ಕಾರ್ಯಕ್ರಮಗಳನ್ನು ನಡೆಸುವುದರ ಕುರಿತು ಪ್ರತ್ಯೇಕವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಎಡಿಸಿ ದುರುಗೇಶ, ಇದೇ ಫೆ.10ಕ್ಕೆ ಕಾಯಕ ಶರಣರ ಜಯಂತಿಯ ಆಚರಿಸುತ್ತಿದ್ದು, ಶರಣರ ವಿಚಾರಗಳನ್ನು ಜನರಿಗೆ ತಿಳಿಯುವಂತೆ ಆಚರಿಸಬೇಕಿದೆ. ಸಂಪನ್ಮೂಲ ವ್ಯಕ್ತಿಗಳಿಂದ ವಿಷೇಶ ಉಪನ್ಯಾಸ ಆಯೋಜಿಸಲಾಗುವುದು. ಅಂದು ಬೆಳಗ್ಗೆ 9 ಕ್ಕೆ ಡಾ.ಅಂಬೇಡ್ಕರ್ ವೃತ್ತದಿಂದ ರಂಗಮಂದಿರದವರೆಗೆ ಕಾಯಕ ಶರಣರ ಭಾವಚಿತ್ರ ಮೆರವಣಿಗೆ ನಡೆಸಲಾಗುವುದು. ಬೆಳಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಅದೇ ರೀತಿ ಫೆ.15ಕ್ಕೆ ಸಂತ ಸೇವಾಲಾಲರ ಜಯಂತಿ ಆಚರಿಸುತ್ತಿದ್ದು, ಬೆಳಗ್ಗೆ 9ಕ್ಕೆ ನಗರದ ಬಸವೇಶ್ವರ ವೃತ್ತದಿಂದ ರಂಗಮಂದಿರದವರೆಗೆ ಭಾವಚಿತ್ರ ಮೆರವಣಿಗೆ ನಡೆಸಲಾಗುವುದು. ತೆರಳಿ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು.ಇನ್ನು ಫೆ.16ರಂದು ಸವಿತಾ ಮಹರ್ಷಿ ಜಯಂತಿ ಆಚರಿಸುತ್ತಿದ್ದು, ಬೆಳಗ್ಗೆ 9 ಕ್ಕೆ ಗಾಂಧಿ ವೃತ್ತದ ಹತ್ತಿರದ ಸವಿತಾ ಮಹರ್ಷಿ ವೃತ್ತದಿಂದ ರಂಗಮಂದಿರವರೆಗೆ ಭಾವಚಿತ್ರ ಮೆರವಣಿಗೆ ನಡೆಸಲಾಗುವುದು. 11 ಗಂಟೆಗೆ ವೇದಿಕೆ ಕಾರ್ಯಕ್ರಮ ಇರಲಿದೆ. ಕಡ್ಡಾಯವಾಗಿ ಗ್ರಾಪಂ ಮಟ್ಟದಲ್ಲಿ ಮತ್ತು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಜಯಂತಿ ಆಚರಿಸುವಂತೆ ತಿಳಿಸಿದರು.
ಈ ಎಲ್ಲ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವವರಿಗೆ ಕುಡಿವ ನೀರು, ಊಟ,ಸ್ವಚ್ಛತೆ ಸೇರಿ ಅಗತ್ಯ ಸವಲತ್ತುಗಳನ್ನು ಒದಗಿಸಿಕೊಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ, ಸಾಹಿತಿಗಳು, ಸಮಾಜದ ಮುಖಂಡರು ಸೇರಿ ಇತರರು ಇದ್ದರು.