ಗದಗ: ಕರ್ನಾಟಕ ರಾಜ್ಯ ಎಂದು ನಾಮಕರಣಗೊಂಡು ೫೦ ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸುವರ್ಣ ಸಂಭ್ರಮದ ಕಾರ್ಯಕ್ರಮವನ್ನು ಅಭೂತಪೂರ್ವವಾಗಿ ಆಯೋಜಿಸಲು ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ, ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಕರ್ನಾಟಕ ನಾಮಕರಣಕ್ಕೆ ೫೦ ವರ್ಷ ಪೂರೈಸಿದ ಹಿನ್ನೆಲೆ ನಡೆದ ಸುವರ್ಣ ಸಂಭ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕರ್ನಾಟಕ ನಾಮಕರಣಕ್ಕೆ ೫೦ ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಸಂಭ್ರಮ ಆಚರಿಸಲಾಗುತ್ತಿದೆ. ೫೦ ವರ್ಷಗಳ ಹಿಂದೆ ನಗರದ ಕಾಟನ ಸೇಲ್ ಸೊಸೈಟಿ ಆವರಣದಲ್ಲಿ ಜರುಗಿದ ಐತಿಹಾಸಿಕ ಸಮಾವೇಶವನ್ನು ಮೆಲುಕು ಹಾಕುವ ಜತೆಗೆ ಸ್ವರ್ಣ ಮಹೋತ್ಸವ ಆಚರಣೆ ಯಶಸ್ವಿಗೊಳಿಸಲು ಅಧಿಕಾರಿಗಳು ವಿಶೇಷ ಮುತುವರ್ಜಿಯಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ನವೆಂಬರ್ ೩ರಂದು ಜರುಗಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಮುಖ್ಯಮಂತ್ರಿಯನ್ನು ಹಂಪಿಯಿಂದ ಗದುಗಿಗೆ ಗೋಲ್ಡನ್ ಚಾರಿಯೆಟ್ ರೈಲಿನ ಮೂಲಕ ಕರೆ ತರಲು ಚಿಂತಿಸಲಾಗುತ್ತಿದೆ. ನ. ೩ರಂದು ಗದುಗಿಗೆ ಆಗಮಿಸುವ ಮುಖ್ಯಮಂತ್ರಿ ವೀರನಾರಾಯಣ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುವ ಮೂಲಕ ಜ್ಯೋತಿಯೊಂದಿಗೆ ಮೆರವಣಿಗೆ ಮೂಲಕ ನಗರದ ಕಾಟನ ಸೇಲ್ ಸೊಸೈಟಿಗೆ ಕರೆತರಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಸೌಂದರ್ಯಕ್ಕೆ ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.ವೀರನಾರಾಯಣ ದೇವಸ್ಥಾನದಿಂದ ಮೆರವಣಿಗೆ ಹೊರಡಲಿದೆ. ಮೈಸೂರು ದಸರಾ ಮಾದರಿಯಲ್ಲಿ ಅಂಬಾರಿ ಮೇಲೆ ತಾಯಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ಆಯೋಜಿಸಲಾಗುವುದು. ಜತೆಗೆ ಮೆರವಣಿಗೆಯಲ್ಲಿ ಮುಖ್ಯಮಂತ್ರಿಗಳನ್ನು ಕಾರ್ಯಕ್ರಮದ ಸ್ಥಳದ ವರೆಗೆ ಕರೆತರಲು ಚಿಂತಿಸಲಾಗುವುದು. ಮೆರವಣಿಗೆ ಜತೆಗೆ ಉತ್ತಮ ಸಾಂಸ್ಕೃತಿಕ ಕಲಾ ತಂಡಗಳ ಆಯ್ಕೆ ಮಾಡಬೇಕು ಎಂದು ಸೂಚಿಸಿದರು.ಈ ಸುವರ್ಣ ಸಂಭ್ರಮದ ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡುವ ಜತೆಗೆ ಕಾರ್ಯಕ್ರಮದ ರೂಪುರೇಷೆಗಳನ್ನು ತಯಾರಿಸಬೇಕು. ವಿವಿಧ ಇಲಾಖೆಗಳ ವಸ್ತು ಪ್ರದರ್ಶನ ಮಳಿಗೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಪುಸ್ತಕಗಳ ಬಿಡುಗಡೆ ಜತೆಗೆ ಪ್ರವಾಸೋದ್ಯಮ ದೃಷ್ಟಿಯಿಂದ ಹೊಸ ಸೃಷ್ಟಿಗಳನ್ನು ತರುವಂತೆ ತಿಳಿಸಿದರು.ಈ ಕಾರ್ಯಕ್ರಮದ ನೈಜ ಸಂಭ್ರಮ ಹೆಚ್ಚಿಸಲು ಸಾರ್ವಜನಿಕರು, ಯುವಕರು, ಸಾಹಿತ್ಯಾಸಕ್ತರು ಪಾಲ್ಗೊಳ್ಳುವಂತೆ ಅಗತ್ಯದ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದ ಕುರಿತು ವೈಜ್ಞಾನಿಕವಾಗಿ ಹಾಗೂ ಅರ್ಥಪೂರ್ಣವಾಗಿ ಪ್ರಚಾರ ಕೈಗೊಳ್ಳಬೇಕು. ಕಾರ್ಯಕ್ರಮಕ್ಕೆ ಕಡಿಮೆ ಸಮಯಾವಕಾಶವಿದ್ದು, ಈ ಕಡಿಮೆ ಅವಧಿಯಲ್ಲಿ ಕರ್ನಾಟಕ ನಾಮಕರಣಕ್ಕೆ ೫೦ ವರ್ಷ ಸುವರ್ಣ ಸಂಭ್ರಮವನ್ನು ಐತಿಹಾಸಿಕ ಕಾರ್ಯಕ್ರಮವನ್ನಾಗಿ ಮಾಡಲು ಸೂಚಿಸಿದರು.
ಸಭೆ ಆರಂಭಕ್ಕೂ ಮುನ್ನ ಸಚಿವ ಎಚ್.ಕೆ. ಪಾಟೀಲ ಅವರು ೫೦ ವರ್ಷಗಳ ಹಿಂದೆ ಕರ್ನಾಟಕ ನಾಮಕರಣಕ್ಕೆ ಗದುಗಿನ ಪಾತ್ರದ ಕುರಿತು ಇತಿಹಾಸವನ್ನು ಮೆಲಕು ಹಾಕಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣಾ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಡಾ. ವೆಂಕಟೇಶ ನಾಯ್ಕ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.