ಕಾರವಾರ: ಕೈಗಾ ಅಣು ಸ್ಥಾವರ ಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ ಯಾವುದೇ ಪ್ರದೇಶದಲ್ಲಿ ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ, ಪರಿಸ್ಥಿತಿಯ ಹತೋಟಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಎಲ್ಲ ಸಕಲ ಸಿದ್ಧತೆಗಳೊಂದಿಗೆ ಜಾಗೃತವಾಗಿರಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕೈಗಾ ಅಣು ಸ್ಥಾವರ ಪ್ರದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಮತ್ತು ವಿವಿಧ ಇಲಾಖೆಗಳ ಕರ್ತವ್ಯಗಳ ಕುರಿತ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಗುಡ್ಡಕುಸಿತ ಸಂಭವಿಸುವ 439 ಸ್ಥಳಗಳನ್ನು ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ವತಿಯಿಂದ ಗುರುತಿಸಲಾಗಿದೆ. ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಯಾವುದೇ ಕಾರಣಗಳಿಂದ ತುರ್ತು ಪರಿಸ್ಥಿತಿ ಘೋಷಿಸಿದಲ್ಲಿ ಈ ವ್ಯಾಪ್ತಿಯ ಶಾಲೆಗಳು, ಆಸ್ಪತ್ರೆಗಳು, ಜನವಸತಿ ಪ್ರದೇಶಗಳಲ್ಲಿನ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ತಕ್ಷಣದಲ್ಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿರಬೇಕು ಎಂದರು.
ಹಿರಿಯ ತಾಂತ್ರಿಕ ಎಂಜಿನಿಯರ್ ಚಿತ್ತರಂಜನ್ ಮಾತನಾಡಿ, ಕೈಗಾದಲ್ಲಿ ವಿದ್ಯುತ್ ಉತ್ಪಾದನಾ ಘಟಕ, ಅಣು ವಿದ್ಯುತ್ ಸ್ಥಾವರದ ಪ್ರದೇಶ ಮತ್ತು ಕೈಗಾ ಅಣು ವಿದ್ಯುತ್ ಸ್ಥಾವರದ ಹೊರ ಪ್ರದೇಶದಲ್ಲಿ ವಿಕಿರಣ ಸೋರಿಕೆಯಾಗದಂತೆ 3 ಹಂತದಲ್ಲಿ ಸಂಪೂರ್ಣ ಸುರಕ್ಷತೆಯನ್ನು ಕೈಗೊಂಡಿದ್ದು, ಈ ಬಗ್ಗೆ 24x7 ನಿರಂತರವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಒಂದು ವೇಳೆ ಸೋರಿಕೆಯಾಗಿರುವುದು ಕಂಡುಬಂದಲ್ಲಿ ಅದನ್ನು ನಿಯಂತ್ರಿಸುವ ಕುರಿತಂತೆ ಸಹ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗಿದೆ.
ಕೈಗಾ ಸೇರಿದಂತೆ ಇದುವರೆಗೆ ಭಾರತದ ಯಾವುದೇ ಅಣು ವಿದ್ಯುತ್ ಸ್ಥಾವರದಲ್ಲಿ ವಿಕಿರಣ ಸೋರಿಕೆ ಪ್ರಕರಣ ಸಂಭವಿಸಿಲ್ಲ ಎಂದರು.ಕೈಗಾ ಅಣು ವಿದ್ಯುತ್ ಸ್ಥಾವರದ ಒಳಗಿನ ಪ್ರದೇಶದಲ್ಲಿ ವಿಕಿರಣ ಸೋರಿಕೆಯಾದಲ್ಲಿ ಅದನ್ನು ಅಲ್ಲಿಯೇ ನಿಯಂತ್ರಿಸಲು ಸಂಸ್ಥೆಯಿಂದಲೇ ಕ್ರಮ ಕೈಗೊಳ್ಳಲಾಗುವುದು. ಆದರೆ ಹೊರ ಪ್ರದೇಶದಲ್ಲಿ ಹರಡಿದಲ್ಲಿ ಮಾತ್ರ ಅದರ ನಿಯಂತ್ರಣಕ್ಕೆ ಜಿಲ್ಲಾಡಳಿತ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೂಲಕ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದಲ್ಲಿ, ನ್ಯೂಕ್ಲಿಯರ್ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ತ್ವರಿತವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿದೆ ಎಂದರು.ಅಪರ ಜಿಲ್ಲಾಧಿಕಾರಿ ಸಾಜಿದ್ ಅಹಮದ್ ಮುಲ್ಲಾ, ಕೈಗಾ ಅಣು ವಿದ್ಯುತ್ ಸ್ಥಾವರದ ಹಿರಿಯ ತಾಂತ್ರಿಕ ಎಂಜಿನಿಯರ್ ರಾಜೇಶ ಪೈ, ಜಯರಾಮ ಮುಂತಾದವರು ಇದ್ದರು.