ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಅಧಿಕೃತವಾಗಿ ಸಾರ್ವಜನಿಕರಿಗೆ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು. ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಗಟ್ಟಲು ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಿ, ಕಟ್ಟುನಿಟ್ಟಾಗಿ ಪರಿಶೀಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಸರ್ಕಾರಿ ಕಾಮಗಾರಿಗಳಿಗೆ ಮರಳು ಪೂರೈಕೆ ಸಂಬಂಧ ಬ್ಲಾಕ್ಗಳನ್ನು ನಿಗದಿಪಡಿಸಬೇಕು. ಕಡಿಮೆ ಕಾಮಗಾರಿ ಇರುವೆಡೆ ಒಂದು ಬ್ಲಾಕ್ ಹಾಗೂ ಕಾಮಗಾರಿಗಳನ್ನು ನೋಡಿಕೊಂಡು ಅದಕ್ಕೆ ಅನುಗುಣವಾಗಿ ಹಾಗೂ ಕಾಮಗಾರಿಗಳ ವಿವರ ಮತ್ತು ಬೇಡಿಕೆಗಳನ್ನು ಪರಿಶೀಲಿಸಿ, ಬ್ಲಾಕ್ಗಳನ್ನು ಮೀಸಲಿಡುವಂತೆ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಹೊಸ ಮರಳು ನೀತಿ- 2020 ರಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1 ವರ್ಷ ಅವಧಿಗೆ ಮರಳು ಎತ್ತುವಳಿ ಮಾಡಲು ಈಗಾಗಲೇ ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ ಮತ್ತು ಶಿಕಾರಿಪುರದ 70 ಬ್ಲಾಕ್ ಗಳಲ್ಲಿ ಅನುಮತಿ ನೀಡಲಾಗಿದೆ. ಐದು ವರ್ಷ ಪೂರ್ಣಗೊಳಿಸಿರುವ 35 ಬ್ಲಾಕ್ಗಳಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅನುಮತಿ ನೀಡಲು ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ ತಿಳಿಸಿದರು.
ಜಿಲ್ಲಾ ಎಸ್ಪಿ ಮಿಥುನ್ಕುಮಾರ್ ಮಾತನಾಡಿ, ಅಕ್ರಮ ಗಣಿಗಾರಿಕೆ ತಡೆಯಲು ಗಸ್ತು, ಪೊಲೀಸರನ್ನು ಬಳಕೆ ಮಾಡಿಕೊಳ್ಳಬೇಕು. ಒಂದು ಉಸ್ತುವಾರಿ ತಂಡ ರಚಿಸುವಂತೆ ಸಹ ಸೂಚನೆ ನೀಡಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸೀನರ್ ಜಿಯಾಲಜಿಸ್ಟ್ ನವೀನ್ ಮಾತನಾಡಿ, 2023-24ನೇ ಸಾಲಿಗೆ ಗಣಿಗಾರಿಕೆ ಇಲಾಖೆಯ ರಾಜಸ್ವ ಗುರಿ ₹35 ಕೋಟಿ ಇದ್ದು, 2024ರ ಫೆಬ್ರವರಿ ಅಂತ್ಯದವರೆಗೆ ₹31 ಕೋಟಿ ರಾಜಸ್ವ ಸಂಗ್ರಹವಾಗಿದೆ. ಅಂದರೆ ಶೇ.106.53 ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದರು.ಅಕ್ರಮ ಉಪಖನಿಜ ಗಣಿಗಾರಿಕೆ/ಸಾಗಾಣಿಕೆ/ದಾಸ್ತಾನು ಕುರಿತು ಗಣಿ ಹಾಗೂ ಪೊಲೀಸ್ ಇಲಾಖೆಯಿಂದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಫೆಬ್ರವರಿ ಅಂತ್ಯದವರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವತಿಯಿಂದ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸಾಮಾನ್ಯ ಮರಳು, ಕಟ್ಟಡ ಕಲ್ಲು ಇತರೆ ಸೇರಿ ಒಟ್ಟು 44 ಪ್ರಕರಣ ಪತ್ತೆ ಹಚ್ಚಲಾಗಿದೆ. 8 ಪ್ರಕರಣಗಳ ಮೊಕದ್ದಮೆ ದಾಖಲಿಸಿದ್ದು, ₹34.82 ಲಕ್ಷ ದಂಡ ಸಂಗ್ರಹಿಸಲಾಗಿದೆ. ಅಕ್ರಮ ಸಾಗಾಣಿಕೆಯಲ್ಲಿ 166 ಪ್ರಕರಣ ಪತ್ತೆಹಚ್ಚಿ ₹55.16 ಲಕ್ಷ ದಂಡ ಮತ್ತು ಅಕ್ರಮ ದಾಸ್ತಾನು ಸಂಬಂಧ ₹6.35 ದಂಡ ಸಂಗ್ರಹಿಸಲಾಗಿದೆ ಎಂದು ವಿವರಿಸಿದರು.
ಪೊಲೀಸ್ ಇಲಾಖೆ ವತಿಯಿಂದ ಅಕ್ರಮ ಸಾಗಾಣಿಕೆಗೆ ಸಂಬಂಧಿಸಿದಂತೆ ಸಾಮಾನ್ಯ ಮರಳು, ಕಟ್ಟಡ ಕಲ್ಲು ಇತರೆ ಸೇರಿ ಒಟ್ಟು 80 ಪ್ರಕರಣ ಪತ್ತೆ ಹಚ್ಚಿ, ₹24.45 ಲಕ್ಷ ದಂಡ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.ಸಭೆಯಲ್ಲಿಯೇ ಪಟ್ಟಾ ಜಮೀನಿನಲ್ಲಿ ಕಟ್ಟಡ ಕಲ್ಲು ಮಂಜೂರಾತಿ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅರ್ಜಿಗಳಿಗೆ ಜಿಲ್ಲಾಧಿಕಾರಿ ಅನುಮತಿ ನೀಡಿದರು. ಹಾಗೂ ಕರ್ನಾಟಕ ಕಲ್ಲು ಪುಡಿ ಮಾಡುವ ಘಟಕಗಳ ನಿಯಂತ್ರಣ ಅಧಿನಿಯಮ 2011, ತಿದ್ದುಪಡಿ ನಿಯಮಗಳು 2020 ರನ್ವಯ ಜಲ್ಲಿ ಕ್ರಷರ್ ಘಟಕಗಳ ಅವಧಿಯನ್ನು 20 ವರ್ಷಗಳಿಗೆ ವಿಸ್ತರಿಸಲು ಸಲ್ಲಿಸಲಾಗಿದ್ದ ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹ ಅರ್ಜಿಗಳಿಗೆ ಷರತ್ತುಗಳನ್ನು ವಿಧಿಸಿ ಅನುಮೋದನೆ ನೀಡಿದರು.
ಸಭೆಯಲ್ಲಿ ಜಿಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ಕುಮಾರ್, ಸಾಗರ ಎಸಿ ದಿನೇಶ್, ಗಣಿ ಇಲಾಖೆ, ಅರಣ್ಯ ಇಲಾಖೆ, ಇತರೆ ಅಧಿಕಾರಿಗಳು ಹಾಜರಿದ್ದರು.- - - -ಫೋಟೋ:
ಶಿವಮೊಗ್ಗ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್ ಫೋರ್ಸ್, ಜಿಲ್ಲಾ ಮರಳು ಸಮಿತಿ ಮತ್ತು ಜಿಲ್ಲಾ ಕ್ರಷರ್ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಸಮಿತಿ ಸಭೆಯು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆಯಲ್ಲಿ ನಡೆಯಿತು.