ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

KannadaprabhaNewsNetwork |  
Published : Mar 29, 2026, 01:45 AM IST
090000 | Kannada Prabha

ಸಾರಾಂಶ

ಏಪ್ರಿಲ್ 1ರಂದು ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಭಾಗವಹಿಸಲಿದ್ದು, ಸಂಬಂಧಿಸಿದಂತೆ ತುಮಕೂರು ನಗರದಾದ್ಯಂತ ಅಂದು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಇರಲಿದೆ.

ಕನ್ನಡಪ್ರಭ ವಾರ್ತೆ ತುಮಕೂರುಏಪ್ರಿಲ್ 1ರಂದು ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಭಾಗವಹಿಸಲಿದ್ದು, ಸಂಬಂಧಿಸಿದಂತೆ ತುಮಕೂರು ನಗರದಾದ್ಯಂತ ಅಂದು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಇರಲಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅತಿಗಣ್ಯರ ಭದ್ರತೆಯ ಪೂರ್ವಭಾವಿ ಸಭೆಯ ಅಧ್ಕಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಈಗಾಗಲೇ ತುಮಕೂರು ಜಿಲ್ಲೆಗೆ ಉಪರಾಷ್ಟ್ರಪತಿ, ಕೇಂದ್ರ ಗೃಹ ಸಚಿವರು, ರಾಜ್ಯಪಾಲರು ಸೇರಿದಂತೆ ಗಣ್ಯರು ಆಗಮಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೂಕ್ತ ಭದ್ರತೆಯನ್ನು ಒದಗಿಸಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ಜರುಗಿಸಲಾಗಿದೆ. ಪ್ರಸ್ತುತ ರಾಷ್ಟ್ರಪತಿಯವರ ಕಾರ್ಯಕ್ರಮ ಅತಿಗಣ್ಯರ ಭದ್ರತೆ ಹೊಂದಿರುವುದರಿಂದ ಯಾವುದೇ ಲೋಪವಿಲ್ಲದಂತೆ ಭದ್ರತೆ ಒದಗಿಸುವ ಸಲುವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ನಿಯೋಜನೆ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಭದ್ರತೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್ ಅವರು, ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ಅವರ ಆಗಮನದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ವ್ಯವಸ್ಥೆ ಮಾಡಲಾಗಿದೆ. ರಾಷ್ಟ್ರಪತಿ ಅವರ ಭದ್ರತೆಗೆ ಸುಮಾರು ೧೫೦೦ ಪೊಲೀಸ್ ಸಿಬ್ಬಂದಿ ನಿಯೋಜಿಸಲು ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ ಅವರು, ರಾಷ್ಟ್ರಪತಿ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮತ್ತೆ ನಿರ್ಗಮಿಸುವವರೆಗೆ ತುಮಕೂರು ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿರುತ್ತದೆ. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಹೆಲಿಪ್ಯಾಡ್, ವಾಹನ ಸಂಚರಿಸುವ ರಸ್ತೆ ಮಾರ್ಗಗಳು ಹಾಗೂ ಕಾರ್ಯಕ್ರಮ ನಡೆಯುವ ಜಾಗ ಸೇರಿದಂತೆ ಎಲ್ಲಾ ಪ್ರದೇಶಗಳಲ್ಲಿ ಪ್ರತ್ಯೇಕವಾದ ತಂಡಗಳನ್ನು ರಚಿಸಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ. ಅಲ್ಲದೆ, ಮಾರ್ಚ್ ೩೧ರಂದೇ ತಾಲೀಮು ಪ್ರಕ್ರಿಯೆ ಹಾಗೂ ಪೊಲೀಸ್ ಸಿಬ್ಬಂದಿಗೆ ಮಾಹಿತಿ ಹಾಗೂ ಇನ್ನಿತರ ಚಟುವಟಿಕೆಗಳನ್ನು ಪೊಲೀಸ್ ಇಲಾಖೆ ಹಮ್ಮಿಕೊಂಡಿರುವುದಾಗಿ ಸಭೆಗೆ ಮಾಹಿತಿ ನೀಡಿದರು.

ನಗರದಾದ್ಯಂತ ಎಲ್ಲಾ ರಸ್ತೆಗಳನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಇರಿಸಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಪರ್ಯಾಯ ಮಾರ್ಗವನ್ನು ಸೂಚಿಸಲಾಗುವುದು. ಅಲ್ಲದೆ, ಕಾರ್ಯಕ್ರಮ ನಡೆಯುವ ಜಾಗಕ್ಕೆ ಸಾರ್ವಜನಿಕರು, ಭಕ್ತರು ತೆರಳಲು ಪ್ರತ್ಯೇಕ ಪ್ರವೇಶ ದ್ವಾರಗಳನ್ನು ನಿಗದಿಗೊಳಿಸಲಾಗುವುದು ಎಂದು ಅವರು ತಿಳಿಸಿದರು. ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ಗುಪ್ತಚರ ಇಲಾಖೆಯ ಸುಹಾಸ್ ಸೂಡ ಅವರು, ರಾಷ್ಟ್ರಪತಿ ಕಾರ್ಯಕ್ರಮಕ್ಕೆ ಅತಿಗಣ್ಯರ ಭದ್ರತೆ ಇರುವುದರಿಂದ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತದಿಂದ ಅಧಿಕಾರಿಗಳನ್ನು ನಿಯೋಜಿಸಿ ಜವಾಬ್ದಾರಿ ವಹಿಸಿರುವುದು ಸ್ವಾಗತಾರ್ಹ ಎಂದರು.

ರಾಜ್ಯ ಗುಪ್ತಚರ ಇಲಾಖೆಯ ಪೊಲೀಸ್ ಅಧೀಕ್ಷಕ ಸುರೇಶ್, ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಸಿದ್ಧಗಂಗಾ ಮಠದ ಪ್ರತಿನಿಧಿ ಮಲ್ಲಿಕಾರ್ಜುನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ನಂತರ ತುಮಕೂರು ವಿಶ್ವವಿದ್ಯಾನಿಲಯದ ಹೆಲಿಪ್ಯಾಡ್ ಹಾಗೂ ಸಿದ್ದಗಂಗಾ ಮಠದ ಕಾರ್ಯಕ್ರಮ ನಡೆಯುವ ವೇದಿಕೆ ಇತ್ಯಾದಿ ಪ್ರದೇಶಗಳಿಗೆ ನಿಯೋಗ ಭೇಟಿ ನೀಡಿ ಪರಿಶೀಲಿಸಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಣ್ಣಿಗೇರಿ ಪುರಸಭೆಯಿಂದ ಜನರ ಮೇಲೆ ತೆರಿಗೆ ಬಾರ
ದ್ವಿಭಾಷಾ ನೀತಿ ಎಲ್ಲರೂ ಒಪ್ಪಲೇಬೇಕು: ಸಿಎಂ