ಕನ್ನಡಪ್ರಭ ವಾರ್ತೆ ಮಂಗಳೂರು
ಮಾಧ್ಯಮಗಳು ಜನರಲ್ಲಿ ವಿಶ್ವಾಸಾರ್ಹತೆಯನ್ನು ಮೂಡಿಸುವ ಬಗ್ಗೆ ಹೆಚ್ಚು ಕಾರ್ಯ ಪ್ರವೃತ್ತ ವಾಗಬೇಕು ಎಂದು ಪತ್ರಕರ್ತ ವಾಲ್ಟರ್ ನಂದಳಿಕೆ ಹೇಳಿದ್ದಾರೆ.ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಧ್ಯಮದ ಸವಾಲುಗಳು ಎಂಬ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.ಇತ್ತೀಚೆಗೆ ಸಮೀಕ್ಷೆಯೊಂದರ ಪ್ರಕಾರ ಶೇ.60ರಷ್ಟು ಜನರು ಮುದ್ರಣ ಮಾಧ್ಯಮವನ್ನು ನಂಬುತ್ತಾರೆ. ಶೇ.63ರಷ್ಟು ಜನರು ಟಿ.ವಿ ನ್ಯೂಸ್ ನಂಬುವುದಿಲ್ಲ. ಶೇ. 89ರಷ್ಟು ಮಂದಿ ಸಾಮಾಜಿಕ ಮಾಧ್ಯಮಗಳು ಹಾಗೂ ಆನ್ಲೈನ್ ವೆಬ್ಸೈಟ್ಗಳನ್ನು ನಂಬುವುದಿಲ್ಲ ಎಂದವರು ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಡಿಜಿಟಲ್, ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನದ ಪ್ರವೇಶವಾಗಿದೆ. ಆದರೆ ಸೃಜನಶೀಲತೆ ಮೂಲಕ ಈ ಸವಾಲುಗಳನ್ನು ಎದುರಿಸಬಹುದು. ಅದಕ್ಕಿಂತ ಮುಖ್ಯವಾಗಿ ಜನರಲ್ಲಿ ವಿಶ್ವಾಸಾರ್ಹತೆ ಮೂಡಿಸುವ ಬಗ್ಗೆ ಹೆಚ್ಚು ಕಾರ್ಯ ಪ್ರವೃತ್ತವಾಗಬೇಕು ಎಂದರು.ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮ್ಮರ್ ಯು.ಎಚ್. ಮಾತನಾಡಿ, ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಸವಾಲುಗಳಿವೆ. ಮಾಧ್ಯಮ ಕ್ಷೇತ್ರದ ತಳ ಮಟ್ಟದಲ್ಲಿ ಪತ್ರಿಕಾ ವಿತರಣೆ ನಡೆಸುತ್ತಿ ರುವವರನ್ನು ಗೌರವಿಸುತ್ತಿರುವುದು ಶ್ಲಾಘನೀಯ ಎಂದರು.ಪತ್ರಿಕಾ ದಿನಾಚರಣೆ ಸಂದರ್ಭ ಹಿರಿಯ ಪತ್ರಿಕಾ ವಿತರಕ ರಘುರಾಮ ಕೆ. ಅವರನ್ನು ಸನ್ಮಾನಿಸಲಾಯಿತು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ಹಿರಿಯ ಪತ್ರಕರ್ತರಾದ ಚಿದಂಬರ ಬೈಕಂಪಾಡಿ, ಕುಮಾರನಾಥ್, ಕೆ.ವಿ. ಜಾರ್ಜ್, ದ.ಕ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಇದ್ದರು. ಕಾರ್ಯದರ್ಶಿ ವಿಜಯ ಕೋಟ್ಯಾನ್ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.