ಬೇಳೂರಿಗೆ ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಮೇಲೆ ಒತ್ತಡ ಹೇರಿ: ಲಿಂಗರಾಜ್

KannadaprabhaNewsNetwork |  
Published : Jun 11, 2026, 03:00 AM IST
 ಫೋಟೋ 9 ಎ, ಎನ್, ಪಿ 1 ಆನಂದಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ  ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ನಡೆಸಿದ ಪತ್ರಿಕಾಗೋಷ್ಠಿ. | Kannada Prabha

ಸಾರಾಂಶ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿಯವರು ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ಒತ್ತಡ ಹೇರಬೇಕು ಎಂದು ಕಾಂಗ್ರೆಸ್ ಮುಖಂಡ ಲಿಂಗರಾಜ್ ಗೇರುಬೀಸು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಆನಂದಪುರ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿಯವರು ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ಒತ್ತಡ ಹೇರಬೇಕು ಎಂದು ಕಾಂಗ್ರೆಸ್ ಮುಖಂಡ ಲಿಂಗರಾಜ್ ಗೇರುಬೀಸು ಆಗ್ರಹಿಸಿದರು.

ಸಮೀಪದ ಯಡೇಹಳ್ಳಿ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಗೋಡು ತಿಮ್ಮಪ್ಪ ಅವರ ಅಧಿಕಾರಾವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿಗೆ ಪ್ರತಿ ಹಂತದಲ್ಲೂ ಸಚಿವ ಸ್ಥಾನ ದೊರೆಯುತ್ತಿತ್ತು. ಆದರೆ ಪ್ರಸ್ತುತ ಸಾಗರ ತಾಲೂಕಿಗೆ ಸಮರ್ಪಕ ರಾಜಕೀಯ ಪ್ರಾತಿನಿಧ್ಯ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಪರವಾಗಿ ಯಾಕೆ ಧ್ವನಿ ಎತ್ತುತ್ತಿಲ್ಲ. ಈ ಹಿಂದೆ ಮಧು ಬಂಗಾರಪ್ಪ ಸಚಿವರಾದಾಗ ಎಲ್ಲರೂ ಸ್ವಾಗತಿಸಿದ್ದೇವೆ. ಇದೀಗ ಸಾಗರ ಕ್ಷೇತ್ರದ ಶಾಸಕರಿಗೂ ಸಚಿವ ಸ್ಥಾನ ದೊರೆಯಬೇಕು ಎಂದು ಹಾಕ್ಕೋತ್ತಾಯ ಮಾಡಬೇಕೆಂದರು.

ಕಾಗೋಡು ತಿಮ್ಮಪ್ಪ ಅವರ ಅವಧಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕಂಡಿದ್ದ ತಾಲೂಕು ಈಗ ಅಭಿವೃದ್ಧಿಯಿಂದ ವಂಚಿತವಾಗುತ್ತಿದೆ. ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ದೊರೆತರೆ ಸಾಗರ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದರು.

ಮುಳುಗಡೆ ಸಂತ್ರಸ್ತರ ಸಮಸ್ಯೆ, ಅರಣ್ಯ ಕಾಯ್ದೆ ತಿದ್ದುಪಡಿ ಆಗಬೇಕಾದರೆ ಸರ್ಕಾರ ಮಟ್ಟದಲ್ಲಿ ಬಲವಾದ ಧ್ವನಿ ಎತ್ತಬೇಕಾದರೆ ಗೋಪಾಲಕೃಷ್ಣ ಬೇಳೂರು ಸಚಿವರಾಗಬೇಕು. ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿಯಾಗುವ ದೃಷ್ಟಿಯಿಂದಲೂ, ಜಿಲ್ಲಾ ಹಾಗೂ ರಾಜ್ಯ ಸಮಿತಿಗಳು ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಬೇಕೆಂದರು.

ಆಚಾಪುರ ಗ್ರಾಪಂ ಮಾಜಿ ಅಧ್ಯಕ್ಷ ಕಲಿಮುಲ್ಲಾ ಖಾನ್ ಮಾತನಾಡಿ, ಜಿಲ್ಲಾ ಹಾಗೂ ತಾಲೂಕು ಕಾಂಗ್ರೆಸ್ ಸಮಿತಿಗಳು ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಬೀದಿಗಿಳಿದು ಹೋರಾಟ ಮಾಡಬೇಕಾಗಿದೆ. ಜನರೊಂದಿಗೆ ನಿರಂತರ ಸಂಪರ್ಕ ಹೊಂದಿರುವ ಗೋಪಾಲಕೃಷ್ಣ ಬೇಳೂರು ಅವರು, ಪಕ್ಷ ಸಂಘಟನೆ ಜೊತೆಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕರಾಗಿದ್ದಾರೆ. ಇಂತಹ ಜನ ನಾಯಕರಿಗೆ ಸಚಿವ ಸ್ಥಾನ ದೊರೆಯಲೇಬೇಕು ಎಂದರು.

ಗೌತಮಪುರ ಗ್ರಾಪಂ ಮಾಜಿ ಸದಸ್ಯ ಎಂ.ಎಲ್.ಈಶ್ವರ ಮಾತನಾಡಿ, ಸಾಗರ ತಾಲೂಕು ರಾಜ್ಯಕ್ಕೆ ಅಪಾರ ಕೊಡುಗೆ ನೀಡಿರುವ ಪ್ರದೇಶವಾಗಿದೆ. ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೆ ಜನರ ಆಶೀರ್ವಾದದಿಂದ ನಾಯಕತ್ವ ಬೆಳೆಸಿಕೊಂಡ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕಾಂಗ್ರೆಸ್ ನಾಯಕರನ್ನು ನಾವು ಒತ್ತಾಯಿಸುತಿದ್ದೇವೆ ಎಂದರು.

ಪಕ್ಷದ ಪ್ರಮುಖರಾದ ಗಜೇಂದ್ರ ಯಾದವ್, ನಜೀರುಲ್ಲಾ ಖಾನ್, ರಮಾನಂದ್ ಸಾಗರ್, ಅಮೀರ್, ಲೋಕೇಶ್, ಶರತ್ ನಾಗಪ್ಪ, ರೆಹಮತುಲ್ಲಾ, ಮೋಹನ್, ಬಸವರಾಜ್, ಮುಕುಂದ, ಚೌಡಪ್ಪ, ವಿಜಯ್ ಕುಮಾರ್, ಮುಕುಂದ, ಸಿರಾಜ್, ಆಸಿಫ್ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2028ರ ಚುನಾವಣೆಯಲ್ಲಿ ಏಕಾಂಗಿ ಹೋರಾಟಕ್ಕೂ ಸಿದ್ಧರಾಗೋಣ
ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳ ಉದ್ದೇಶದಿಂದ ಕಲಿಕಾ ಸಾಮಗ್ರಿ ವಿತರಣೆ