ಕೊಪ್ಪಳ: ಜಿಲ್ಲೆಯಲ್ಲಿ ಹಿಂದೂ,ಮುಸ್ಲಿಂ ಮತ್ತು ಕ್ರೈಸ್ತ ಸೇರಿದಂತೆ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ ಹೇಳಿದರು.
ಜಿಲ್ಲೆಯಲ್ಲಿ ಈಗಾಗಲೇ ಬಾಲ್ಯವಿವಾಹ ಮಾಡಿಸಿದ ಪಾಸ್ಟರ್ (ಪಾದ್ರಿ)ರವರಿಗೆ ಶಿಕ್ಷೆಯಾಗಿದೆ. ಕಲ್ಯಾಣ ಮಂಟಪಗಳ ಮಾಲೀಕರು,ಸಾಮೂಹಿಕ ವಿವಾಹ ಆಯೋಜಕರ ವಿರುದ್ಧವೂ ಸಹ ಪ್ರಕರಣ ದಾಖಲಾಗಿವೆ. ಬಾಲ್ಯವಿವಾಹದಲ್ಲಿ ಭಾಗವಹಿಸಬೇಡಿ ಬಾಲ್ಯವಿವಾಹಗಳಿಗೆ ಅವಕಾಶ ನೀಡಬೇಡಿ ಎಂದು ತಿಳಿಸಿದರು.
ಬಾಲ್ಯ ವಿವಾಹ ಒಂದು ಶಿಕ್ಷಾರ್ಹ ಅಪರಾಧ, ಅದನ್ನು ತಡೆಗಟ್ಟುವುದು ಆದ್ಯ ಕರ್ತವ್ಯ ಆಗಿದೆ. ತಪ್ಪಿದಲ್ಲಿ ಬಾಲ್ಯವಿವಾಹ ನೆರವೇರಿಸಿದ, ಪ್ರೋತ್ಸಾಹಿಸಿದ ಮತ್ತು ಪಾಲ್ಗೊಂಡವರಿಗೂ ಸಹ 1 ರಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಜತೆಗೆ ₹1ಲಕ್ಷ ದಂಡ ವಿಧಿಸಬಹುದಾಗಿದೆ ಎಂದರು.ಕೊಪ್ಪಳವನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಯಾವುದೇ ಧಾರ್ಮಿಕ ಮಂದಿರಗಳಿಗೆ ಬರುವ ಸಾರ್ವಜನಿಕರಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆಯ ಕುರಿತು ಜಾಗೃತಿ ಮೂಡಿಸುವ ಮೂಲಕ ಜಿಲ್ಲಾಡಳಿತದೊಂದಿಗೆ ಎಲ್ಲರೂ ಕೈ ಜೋಡಿಸಿ ಎಂದು ಕರೆ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ದರಗದ ಮಾತನಾಡಿ, ಮಕ್ಕಳ ಬಾಲ್ಯವು ಅತ್ಯಮೂಲ್ಯವಾದದ್ದು, 18 ವರ್ಷದೊಳಗಿನ ಮಕ್ಕಳಲ್ಲಿ ದೈಹಿಕ, ಮಾನಸಿಕ, ಸಾಮಾಜಿಕ, ಬೌದ್ಧಿಕ ಹಾಗೂ ಶಾರೀರಿಕ ಬೆಳವಣಿಗೆಯು ತೀವ್ರವಾಗಿರುತ್ತದೆ. ಈ ಸಂದರ್ಭದಲ್ಲಿ ಮಕ್ಕಳು ಅವರ ಹಕ್ಕು ಅನುಭವಿಸುವಂತಹ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ. ಅಪ್ರಾಪ್ತ ವಯಸ್ಸಿನಲ್ಲಿ ಮಕ್ಕಳಿಗೆ ವಿವಾಹ ಮಾಡಿದರೆ ಅವರ ಬೆಳವಣಿಗೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಅಲ್ಲದೇ ಮಕ್ಕಳ ಮೇಲೆ ದೈಹಿಕ, ಮಾನಸಿಕ ಹಾಗೂ ಲೈಂಗಿಕ ಹಲ್ಲೆ ಘಟಿಸುತ್ತವೆ. ಸದ್ಯ ಜಾರಿಯಲ್ಲಿರುವ ಕಾನೂನಿನ್ವಯ ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗಿನ ಲೈಂಗಿಕ ಸಂಪರ್ಕವು ಸಹ ಅತ್ಯಾಚಾರವಾಗಿರುತ್ತದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ವಿಶ್ಲೇಷಿಸಲಾಗಿ ಈ ರೀತಿಯ ಪ್ರಕರಣಗಳೇ ಅಧಿಕವಾಗಿವೆ. ಆದ್ದರಿಂದ ಬಾಲ್ಯ ವಿವಾಹಗಳಲ್ಲಿ ಭಾಗವಹಿಸಬೇಡಿ, ಬಾಲ್ಯವಿವಾಹಗಳಿಗೆ ಅವಕಾಶ ನೀಡಬೇಡಿ ಮತ್ತು ಕಾಯ್ದೆಯ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸಿ ಎಂದು ಹೇಳಿದರು.ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ. ಕೆ. ರಾಘವೇಂದ್ರ ಭಟ್ ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಕರ್ನಾಟಕ ತಿದ್ದುಪಡಿ-2016ರ ಕುರಿತು ಹಾಗೂ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕ ಹರೀಶ ಜೋಗಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯ ಕುರಿತು ತರಬೇತಿ ನೀಡಿದರು.
ಪೋಸ್ಟರ್ ಬಿಡುಗಡೆ:ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಬಾಲ್ಯ ವಿವಾಹ ಕಾನೂನು ಪ್ರಕಾರ ಅಪರಾಧ, ಗಮನಿಸಿ ಎಂಬ ಪೋಸ್ಟರ್ ಹಾಗೂ 2025 ರ ನವೆಂಬರ್ ನಿಂದ 2026 ರ ಜನವರಿವರೆಗೆ ಹಮ್ಮಿಕೊಂಡಿರುವ ಬಾಲ್ಯ ವಿವಾಹ ಮುಕ್ತ ಭಾರತ ಎಂಬ ನೂರು ದಿನಗಳ ಅಭಿಯಾನದ ಬ್ಯಾನರ್ ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಕೊಪ್ಪಳ ಡಿವೈ.ಎಸ್ಪಿ ಮುತ್ತಣ್ಣ ಸವರಗೋಳ, ಕೊಪ್ಪಳ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ್, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮಹಾಂತಸ್ವಾಮಿ ಪೂಜಾರ, ಬೆಳಗಾವಿ ಸ್ಪಂದನ ಸೊಸೈಟಿ ಕಾರ್ಯದರ್ಶಿ ಸುಶೀಲಾ ವಿ. ಮತ್ತು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮೂಹಿಕ ವಿವಾಹ ಆಯೋಜಕರು, ಪೂಜಾರಿಗಳು, ಮೌಲ್ವಿಗಳು, ಪಾದ್ರಿಗಳು, ಡೇಕೊರೇರ್ಸ್, ಛಾಯಾಚಿತ್ರಗಾರರು, ಮುದ್ರಣಕಾರರು, ಕಲ್ಯಾಣ ಮಂಟಪಗಳ ಮಾಲೀಕರುಗಳು ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.