ರಾಮನಗರ: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಕ್ರಮ ಕೈಗೊಳ್ಳುವ ಸಂಬಂಧ ಸಂಸದ ಡಿ.ಕೆ.ಸುರೇಶ್ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ರಾಮನಗರ ಜಿಲ್ಲೆಯಲ್ಲಿ ನಿರಂತರವಾಗಿ ಆನೆ ದಾಳಿ ನಡೆಯುತ್ತಿದೆ. ರೈತರ ತೋಟಕ್ಕೆ ನುಗ್ಗುವ ಆನೆಗಳು ಫಸಲು ನಾಶ ಮಾಡುತ್ತಿರುವ ಘಟನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಜತೆಗೆ, ಆನೆದಾಳಿ ನಿಯಂತ್ರಣ ಮಾಡುವಂತೆ ಆಗ್ರಹಿಸಿ ರೈತರು ಹಾಗೂ ರೈತ ಸಂಘಟನೆಯ ಪದಾಧಿಕಾರಿಗಳು ಹಲವು ಬಾರಿ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟನೆ ನಡೆಸಿದ್ದರು.
ಹಾಗಾಗಿ ಸಂಸದ ಡಿ.ಕೆ.ಸುರೇಶ್ ಅವರು, ಕಾಡಾನೆ ಹಾವಳಿ ನಿಯಂತ್ರಣ ಸಂಬಂಧ ಸಿಎಂ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.ಜಿಲ್ಲೆಯ ಹಲವು ಭಾಗಗಳಲ್ಲಿ ನಿರಂತರವಾಗಿ ಜಮೀನುಗಳ ಮೇಲೆ ಆಗುತ್ತಿರುವ ಕಾಡಾನೆ ದಾಳಿಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. ಕಾಡಾನೆ ದಾಳಿಯ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆ ಹಾಗೂ ಅದಕ್ಕೆ ಬೇಕಾದ ಅನುದಾನದ ಬಗ್ಗೆ ಮನವಿ ಮಾಡಲಾಗಿದೆ.
ಲೋಕಸಭಾ ಕ್ಷೇತ್ರದ ಅಡಿಯಲ್ಲಿ ಬರುವ ವಿವಿಧ ಕಾಮಗಾರಿಗಳ ಅನುದಾನ ಬಿಡುಗಡೆ ವಿಚಾರವಾಗಿಯೂ ಪ್ರಸ್ತಾಪಿಸಿರುವುದಾಗಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಸದ ಡಿ.ಕೆ.ಸುರೇಶ್ ಭೇಟಿ ಮಾಡಿರುವುದು. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ವಿಧಾನ ಪರಿಷತ್ ಸದಸ್ಯ ರವಿ ಇತರರಿದ್ದರು.