ಕನ್ನಡಪ್ರಭ ವಾರ್ತೆ ಹೂವಿನಹಡಗಲಿ/ಬೆಳಗಾವಿಈರುಳ್ಳಿ ಮತ್ತು ಟೊಮೆಟೋ ಬೆಲೆ ದಿಢೀರ್ ಕುಸಿತ ಕಂಡಿದ್ದು, ಆಕ್ರೋಶಗೊಂಡ ಬೆಳೆಗಾರರು ಈರುಳ್ಳಿ ಮತ್ತು ಟೊಮೆಟೋವನ್ನು ರಸ್ತೆಗೆ ಚೆಲ್ಲಿ ಪ್ರತಿಭಟನೆ ನಡೆಸಿದ ಘಟನೆ ಹೂವಿನಹಡಗಲಿಯಲ್ಲಿ ನಡೆದಿದೆ. ಮತ್ತೊಂದೆಡೆ ಎಲೆಕೋಸು (ಕ್ಯಾಬೇಜ್) ದರವೂ ಕುಸಿದಿದ್ದು, ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಹೂವಿನಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದ ರೆವರೆಂಡ್ ಉತ್ತಂಡಿ ಚೆನ್ನಪ್ಪ ವೃತ್ತದಲ್ಲಿ ನೂರಾರು ರೈತರು ತಾವು ಬೆಳೆದ ಈರುಳ್ಳಿ ಮತ್ತು ಟೊಮೆಟೋವನ್ನು ರಸ್ತೆಗೆ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿ, ಸರ್ಕಾರ ರೈತರ ನೆರವಿಗೆ ಬರಬೇಕೆಂದು ಆಗ್ರಹಿಸಿದರು.
ಕೋಸಿನ ದರ ಕೇಜಿಗೆ ₹80 ಪೈಸೆ:
ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆಗೆ ಕೋಸು ಎಸೆದು ಪ್ರತಿಭಟಿಸಿ, ಆಕ್ರೋಶ ವ್ಯಕ್ತಪಡಿಸಿದರು. ಕೋಸಿನ ದರ ಕುಸಿದಿದ್ದು, ಕೆಜಿಗೆ ₹80 ಪೈಸೆ ಸಿಗುತ್ತಿದೆ. ದರ ಕುಸಿತದಿಂದ ಬೆಳೆಗಾರರು ತೀವ್ರವಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೂರ್ನಾಲ್ಕು ತಿಂಗಳಿಂದ ಕೋಸು, ಮೂಲಂಗಿ ಮತ್ತಿತರ ತರಕಾರಿಗಳ ದರ ಕುಸಿದಿದೆ. ಮಾರಾಟಕ್ಕೆ ಮಾರುಕಟ್ಟೆಗೆ ತಂದರೆ ವಾಹನ ಬಾಡಿಗೆ ಸಿಗುತ್ತಿಲ್ಲ. ಬೆಳೆಗಳು ಹೊಲದಲ್ಲೇ ಕೊಳೆಯುತ್ತಿವೆ. ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗದೆ. ಎಲ್ಲ ತರಕಾರಿ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ಹಾನಿಗೀಡಾದ ಕೋಸು ಬೆಳೆಗಾರರಿಗೆ ಸೂಕ್ತ ಪರಿಹಾರ ಧನ ನೀಡುವಂತೆ ರೈತರು ಆಗ್ರಹಿಸಿದರು.