- ಚಿತ್ರದುರ್ಗದಲ್ಲಿ ಟ್ರ್ಯಾಕ್ಟರ್ಗೆ ಹಗ್ಗೆ ಕಟ್ಟಿ ಎಳೆದು ಆಕ್ರೋಶ । ಆಕಳು ಹೊಡೆದುಕೊಂಡು ಬಂದಿದ್ದ ಪ್ರತಿಭಟನಾಕಾರರು
ರಾಜ್ಯ ಸರ್ಕಾರದ ಬೆಲೆ ಹೆಚ್ಚಳ ನೀತಿ ಖಂಡಿಸಿ ಭಾರತೀಯ ಜನತಾಪಕ್ಷದ ಕಾರ್ಯಕರ್ತರು ಮಂಗಳವಾರ ಚಿತ್ರದುರ್ಗದಲ್ಲಿ ವಿನೂತನ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಟ್ರ್ಯಾಕ್ಟರ್ಗೆ ಹಗ್ಗ ಕಟ್ಟಿ ಎಳೆದು ತೈಲ ಬೆಲೆ ಹೆಚ್ಚಳಕ್ಕೆ ಆಕ್ರೋಶ ಹೊರ ಹಾಕಿದರು. ಆಕಳು, ಕರು ಪ್ರತಿಭಟನೆಗೆ ಕರೆತಂದು ಹಾಲು ದರ ಹೆಚ್ಚಳಕ್ಕೆ ವಿರೋಧ ವ್ಯಕ್ತಪಡಿಸಿದರು.
ನಗರದ ಒನಕೆ ಓಬವ್ವ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದಾಗಿನಿಂದಲೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಪೆಟ್ರೋಲ್, ಡೀಜೆಲ್, ಹಾಲು, ವಿವಿಧ ನೋಂದಣಿ, ಪಹಣಿ ಸೇರಿದಂತೆ ಮದ್ಯದ ದರ ಹೆಚ್ಚಳ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನ ಗ್ಯಾರೆಂಟಿಗಳ ನಿರ್ವಹಣೆಗಾಗಿ ದರ ಹೆಚ್ಚಳ ಮಾಡಿದೆ. ಜನ ಸಾಮಾನ್ಯರ ಬದುಕಿನಲ್ಲಿ ಆಟವಾಡುತ್ತಿದೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಬಡವರಿಗಾಗಿ, ರೈತರಿಗಾಗಿ, ಕಾರ್ಮಿಕ ಮಕ್ಕಳಿಗಾಗಿ ವಿವಿಧ ರೀತಿ ಯೋಜನೆಗಳನು ಜಾರಿ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಇವುಗಳನ್ನು ರದ್ದು ಮಾಡಿದೆ. ಮತದಾರರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತಂದಿದ್ದಕ್ಕೆ ಪಶ್ಚಾತ್ತಾಪ ಪಡುತ್ತಿದ್ದಾರೆಂದು ಆರೋಪಿಸಿದರು.ಬಿಜೆಪಿ ರೈತಮೊರ್ಚಾ ರಾಜ್ಯ ಕಾರ್ಯದರ್ಶಿ ರಾಜೇಶ್ ಬುರುಡೆ ಕಟ್ಟೆ ಮಾತನಾಡಿ, ಹಾಲಿನ ದರವನ್ನುಹಿಂದೆ ರು.4 ಏರಿಕೆ ಮಾಡಿ ಆ ಹಣವನ್ನು ರೈತರಿಗೆ ತಲುಪಿಸಲಾಗುವುದು ಎಂದು ಹೇಳಿಕೆ ಕೊಟ್ಟ ಸರ್ಕಾರ ಇದುವರೆಗೂ ಆ ರೀತಿ ನಡೆದುಕೊಂಡಿಲ್ಲ. ಅಕ್ರಮ ಎಸೆಗಲಾಗಿದೆ. ಮತ್ತೆ ಈಗ 2 ರು. ಹೆಚ್ಚಿಸಲಾಗಿದೆ. ಒಟ್ಟು 6 ರು. ರೈತರಿಗೆ ನೀಡಬೇಕು ಎಂದು ಆಗ್ರಹಿಸಿದರು.
ಬಿಜೆಪಿಯ ಮಲ್ಲಿಕಾರ್ಜುನ್ ಮಾತನಾಡಿ, ಹಾಲಿನ ಪ್ರೋತ್ಸಾಹ ಹಣವೂ ಇಲ್ಲ, ಬರ ಪರಿಹಾರದ ಮೊತ್ತವೂ ಇಲ್ಲ. ಇಂತಹ ಸಂಕಷ್ಟ ಸನ್ನಿವೇಶದ ನಡುವೆ ಬಿತ್ತನೆ ಬೀಜಗಳ ಬೆಲೆ ಏರಿಕೆಯಾಗಿದೆ. ಭೂ ಸಿರಿ ಯೋಜನೆಯನ್ನು ನಿಲ್ಲಿಸಲಾಗಿದೆ. ದುಪ್ಪಟ್ಟು ಹಣವನ್ನು ಟ್ರಾನ್ಸ್ ಫಾರ್ಮರ್ ಗಳಿಗೆ ನೀಡುವಂತಾಗಿದ್ದು, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಮುದ್ರಾಂಕ ಶುಲ್ಕ ಏರಿಸಿರುವುದರಿಂದ ಆಸ್ತಿ ನೋಂದಣಿ ಶೇ.30 ರಷ್ಟು ಹೆಚ್ಚಾಗಿದೆ. ಕ್ಷೀರ ಸಮೃದ್ಧಿ ಬ್ಯಾಂಕ್ ಯಾಕೆ ಪ್ರಾರಂಭಿಸಿಲ್ಲವೆಂದು ದೂರಿದರು.
ಫೋಟೊ:-2 ಸಿಟಿಡಿ1