ಕನ್ನಡಪ್ರಭ ವಾರ್ತೆ ರಾಮದುರ್ಗ2014ರಲ್ಲಿ ಭಾರೀ ಬೆಲೆ ಏರಿಕೆಯಾಗಿದೆ ಎಂದು ಹೇಳಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೇರಿತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆಗಳು ಎರಡುಪಟ್ಟಿಗಿಂತ ಹೆಚ್ಚಾಗಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಲೆ ಏರಿಕೆಯಿಂದ ತತ್ತರಿಸಿರುವವರಿಗೆ ಏನಾದರೂ ಸಹಾಯ ಮಾಡಬೇಕೆಂದು ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ನೀಡಿದೆ. ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜನರಿಗೆ ಮುಟ್ಟುವ ವ್ಯವಸ್ಥೆ ಮಾಡಿದೆವು. ಮನೆ ಮನಗಳನ್ನು ಬೆಳಗಲು 5 ಯೋಜನೆಗಳನ್ನು ಜಾರಿಗೆ ತಂದೆವು. 5 ಗ್ಯಾರಂಟಿಗಳು ಇಂದು ಜನಪ್ರಿಯವಾಗಿವೆ. ಇಂದು ಗೃಹಲಕ್ಷ್ಮಿಯ 9ನೇ ಕಂತು ಜಮಾ ಮಾಡಲಾಗಿದೆ. ಪ್ರತಿಯೊಬ್ಬರ ಖಾತೆಗೆ ತಲಾ ₹18 ಸಾವಿರ ನೀಡಲಾಗಿದೆ. ಇದರಿಂದಾಗಿ ಬಡ ಕುಟುಂಬಗಳು ಸ್ವಲ್ಪವಾದರೂ ನೆಮ್ಮದಿ ಕಾಣಲು ಸಾಧ್ಯವಾಗಿದೆ. ಈಗ ಎಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸಿ ಮತ್ತೆ ನಿಮ್ಮ ಮುಂದೆ ನಿಂತಿದ್ದೇವೆ. ಕೊಟ್ಟ ಮಾತನ್ನು ಈಡೇರಿಸಿ ಮತ ಕೇಳಲು ಬಂದಿದ್ದೇವೆ ಎಂದು ತಿಳಿಸಿದರು.
ಬಿಜೆಪಿಯವರು ನಾವು ತಂದಿರುವ ಗ್ಯಾರಂಟಿಗಳನ್ನು ಪ್ರಶ್ನಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಲು ಹೇಳುತ್ತಿದ್ದಾರೆ. ಬಡವರಿಗೆ ಯೋಜನೆಗಳನ್ನು ಕೊಡುವುದು ಅವರಿಗೆ ಬೇಕಾಗಿಲ್ಲ. ಸ್ವತಂತ್ರ ಸಿಕ್ಕಿದ ನಂತರ 60 ವರ್ಷಗಳ ಕಾಲ ಕಾಂಗ್ರೆಸ್ ಆಡಳಿತ ಮಾಡಿದೆ. ಭಾರತ ಅತ್ಯಂತ ಸಂಕಷ್ಟದಲ್ಲಿದ್ದಾಗ, ಮಹಾಮಾರಿಗಳು ಬಂದಾಗ, ಮೂಲಭೂತ ಸೌಲಭ್ಯಗಳಿಲ್ಲದಾಗ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡು ಇಂದು ಭಾರತವನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ನೆಹರು ಅವರು ತಂದ ಪಂಚವಾರ್ಷಿಕ ಯೋಜನೆ, ಹಸಿರು ಕ್ರಾಂತಿ, ಬ್ಯಾಂಕ್ ಗಳ ರಾಷ್ಟ್ರೀಕರಣ ಮೊದಲಾದವುಗಳ ಮೂಲಕ ಭಾರತವನ್ನು ಅಭಿವೃದ್ಧಿಯತ್ತ ತಂದು ನಿಲ್ಲಿಸಿದೆ ಎಂದರು.ಪ್ರದೀಪ ಪಟ್ಟಣ, ಸೋಮಶೇಖ ಸಿದ್ದಲಿಂಗಪ್ಪನವರ್, ರಾಯಪ್ಪ ಕತ್ತಿ, ಜಿ.ಬಿ.ರಂಗಣ್ಣಗೌಡರ್, ಪರ್ವತಗೌಡ ಪಾಟೀಲ, ಜಾವುರ್ ಹಾಜಿ, ಆರ್.ಕೆ.ಪಾಟೀಲ, ಮಾರುತಿ ಶಿರೆಗಾರ ಮೊದಲಾದವರು ಇದ್ದರು. ಇದಕ್ಕೂ ಮೊದಲು ಬಸ್ ನಿಲ್ದಾಣದಿಂದ ಬಜಾರ್ ಪೇಟೆಯವರೆಗೆ ಬೃಹತ್ ಮೆರವಣಿಗೆ ನಡೆಯಿತು.