ಕನ್ನಡಪ್ರಭ ವಾರ್ತೆ ತರೀಕೆರೆ
ತರೀಕೆರೆ ಮತ್ತು ಅಜ್ಜಂಪುರ ತಾಲೂಕುಗಳಲ್ಲಿ ಮೇ.29 ರಿಂದ ಪ್ರಸಕ್ತ ಶೈಕ್ಷಣಿಕ ವರ್ಷ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಎ.ಪರುಶುರಾಮಪ್ಪ ಮಾಹಿತಿ ನೀಡಿದ್ದಾರೆ.ಮೇ.29 ರಂದು ಶಾಲೆಗಳ ಸ್ವಚ್ಚತೆ ಮತ್ತು ಪೂರ್ವಸಿದ್ದತಾ ಕಾರ್ಯ ನೆಡೆಯಲಿದ್ದು, ಮೇ.30 ರಂದು ಶಾಲೆ ಪ್ರಾರಂಭೋತ್ಸವ ನೆಡೆಯಲಿದೆ. ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ, ಶಾಲೆಯಲ್ಲಿ ಜನಪ್ರತಿನಿಧಿಗಳು, ಶಾಲೆ ಎಸ್.ಡಿ.ಎಂ.ಸಿ.ಅಧ್ಯಕ್ಷರು ಮತ್ತು ಸದಸ್ಯರು ಶಾಲೆ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕವರ್ಗದವರು ಶಾಲೆಗೆ ಮಕ್ಕಳನ್ನು ಸ್ವಾಗತಿಸಲಿದ್ದಾರೆ ಎಂದು ತಿಳಿಸಿದರು. ಅಂದು ಮಧ್ಯಾಹ್ನ ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಸಿಹಿ ವಿತರಿಸಿ ಶುಭ ಕೋರಲಾಗುವುದು ಹಾಗೂ ಮಕ್ಕಳ ಶಾಲಾ ದಾಖಲಾತಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಶಾಲೆಯಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಮಕ್ಕಳಿಗೆ ಪಠ್ಯ ಪುಸ್ತಕ, ಎರಡು ಜೊತೆ ಸಮವಸ್ತ್ರ, ಶಾಲಾ ಬಿಸಿಯೂಟ ಯೋಜನೆಯಡಿ ಕ್ಷೀರಭಾಗ್ಯ , ರಾಗಿಮಾಲ್ಟ್, ಮೊಟ್ಟೆ ಮತ್ತು ಬಾಳೆ ಹಣ್ಣು ವಿತರಿಸುವ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.ತರೀಕೆರೆ ಮತ್ತು ಅಜ್ಜಂಪುರ ತಾಲೂಕುಗಳ್ಲಲ್ಲಿ 216 ಸರ್ಕಾರಿ ಪ್ರಾಥಮಿಕ ಶಾಲೆಗಳು, 33 ಖಾಸಗಿ ಪ್ರಾಥಮಿಕ ಶಾಲೆಗಳು, 45 ಪ್ರೌಢಶಾಲೆಗಳಿದ್ದು ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನಿಂದ ಒಟ್ಟು 21 ಸಾವಿರ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ, ಶಾಲಾ ಮಕ್ಕಳ ಅನುಕೂಲಕ್ಕಾಗಿ ಶಾಲಾ ಕಟ್ಟಡಗಳು, ತರಗತಿಗಳಲ್ಲಿ ಪೀಠೋಪಕರಣಗಳು, ಶೌಚಾಲಯ ವ್ಯವಸ್ಥೆ ಕೈಗೊಂಡಿದ್ದು, ಶಾಲೆಯಲ್ಲಿ ಸ್ವಚ್ಚತೆ ಹಾಗೂ ಶುದ್ದ ಕುಡಿಯುವ ನೀರಿನ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ತರೀಕೆರೆ ಮತ್ತು ಅ್ಜಜಂಪುರ ತಾಲೂಕುಗಳ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ಸರಿದೂಗಿಸಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ. ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಹಾಗೂ ತಂತ್ರಜ್ಞಾನ ಆಧಾರಿತ ಶಿಕ್ಷಣವನ್ನು ನೀಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಇಲಾಖೆ ಶ್ರಮಿಸುತ್ತಿದೆ, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಉತ್ತಮ ಶಿಕ್ಷಣ ಪಡೆಯುವುದರ ಜೊತೆಗೆ ಸರ್ಕಾರದ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.ಈ ಬಾರಿ ಪ್ರಕಟಗೊಂಡ ಎಸ್.ಎಸ್.ಎಲ್.ಸಿ.ಪರೀಕ್ಷಾ ಫಲಿತಾಂಶದಲ್ಲಿ ತರೀಕೆರೆ ಮತ್ತು ಅಜ್ಜಂಪುರ ತಾಲೂಕು ಜಿಲ್ಲೆಯಲ್ಲಿ ಶೇ.77.73 ರಷ್ಟು ಫಲಿತಾಂಶ ಪಡೆಯುವುದರ ಮೂಲಕ ಜಿಲ್ಲೆಯಲ್ಲಿ 8ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಏರಿದೆ, ಈ ಉತ್ತಮ ಫಲಿತಾಂಶಕ್ಕೆ ಮಾರ್ಗದರ್ಶನ ನೀಡಿ, ಎಲ್ಲ ಶಿಕ್ಷಕರನ್ನು ಪ್ರೋತ್ಸಾಹಿಸಿದ ಮಾನ್ಯ ಶಾಸಕರಾದ ಜಿ.ಹೆಚ್ ಶ್ರೀನಿವಾಸ್ ರವರಿಗೆ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಅವರು ಕೃತಜ್ಞತೆ ಅರ್ಪಿಸಿದ್ದಾರೆ. ಮತ್ತು ಶ್ರಮಿಸಿದ ಶಾಲೆಯ ಮುಖ್ಯ ಶಿಕ್ಷಕರು, ಎಲ್ಲಾ ಸಹಶಿಕ್ಷಕರಿಗೆ, ಉತ್ತಮ ಫಲಿತಾಂಶ ದೊರಕಿಸಿ ಕೊಟ್ಟ ಎಲ್ಲಾ ವಿದ್ಯಾರ್ಥಿಗಳನ್ನು ಅವರು ಅಭಿನಂದಿಸಿದ್ದಾರೆ.