ಪ್ರಧಾನಿ ಮೋದಿ ಜಗತ್ತು ಕಂಡ ಅದ್ಭುತ ನಾಯಕ: ಸಂಸದ ಸಂಗಣ್ಣ ಕರಡಿ

KannadaprabhaNewsNetwork |  
Published : Feb 27, 2024, 01:32 AM IST
26kpl21 ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಹಾಗೂ  ಹುಲಿಗಿ ಮೇಲ್ ಸೇತುವೆ ನಿರ್ಮಾಣದ ಶಂಕು. | Kannada Prabha

ಸಾರಾಂಶ

ನೂತನ ರೈಲ್ವೆ ಮೇಲ್ಸೇತುವೆಯಿಂದ ಭಕ್ತರಿಗೆ ಅನುಕೂಲವಾಗಲಿದೆ. ಅಮೃತ್ ಭಾರತ ಯೋಜನೆ ಅಡಿಯಲ್ಲಿ ₹20 ಕೋಟಿ ವೆಚ್ಚದಲ್ಲಿ ಹುಲಿಗಿ ರೈಲ್ವೆ ನಿಲ್ದಾಣ ಅಭಿವೃದ್ಧಿಪಡಿಸಲಾಗುತ್ತಿದೆ.

ಮುನಿರಾಬಾದ್: ಪ್ರಧಾನಿ ನರೇಂದ್ರ ಮೋದಿ ಜಗತ್ತು ಕಂಡ ಅದ್ಭುತ ನಾಯಕ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿದರು.

ಇಲ್ಲಿನ ರೈಲ್ವೆ ನಿಲ್ದಾಣದ ಅಭಿವೃದ್ಧಿ ಹಾಗೂ ಹುಲಿಗಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸೋಮವಾರ ಚಾಲನೆ ನೀಡಿದ ಬಳಿಕ ಅವರು ರೈಲ್ವೆ ನಿಲ್ದಾಣದಲ್ಲಿ ಮಾತನಾಡಿದರು.

ಹುಲಿಗೆಮ್ಮ ದೇವಸ್ಥಾನಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕಗೊಳ್ಳುತ್ತಿದೆ. ದೇಶದ ಪುಣ್ಯಕ್ಷೇತ್ರಗಳಾದ ತಿರುಪತಿ ಮತ್ತು ಅಯೋಧ್ಯೆಗೆ ಯಾವ ರೀತಿ ಭಕ್ತರು ಆಗಮಿಸುತ್ತಿದ್ದಾರೆಯೋ ಅದೇ ರೀತಿಯಲ್ಲಿ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ನೂತನ ರೈಲ್ವೆ ಮೇಲ್ಸೇತುವೆಯಿಂದ ಭಕ್ತರಿಗೆ ಅನುಕೂಲವಾಗಲಿದೆ. ಅಮೃತ್ ಭಾರತ ಯೋಜನೆ ಅಡಿಯಲ್ಲಿ ₹20 ಕೋಟಿ ವೆಚ್ಚದಲ್ಲಿ ಹುಲಿಗಿ ರೈಲ್ವೆ ನಿಲ್ದಾಣ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ದೇಶ ಅಭಿವೃದ್ಧಿಯಾಗಬೇಕಾದರೆ ಮೂಲಭೂತ ಸೌಕರ್ಯಗಳು ಅಭಿವೃದ್ಧಿಯಾಗಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ. ದೇಶದಲ್ಲಿ ರೈಲು ಮಾರ್ಗ, ಜಲ ಮಾರ್ಗ, ವಾಯು ಮಾರ್ಗಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇನ್ನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ದೇಶವು ವಿಶ್ವದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಸಂಸದ ಕರಡಿ ಸಂಗಣ್ಣ ಹೇಳಿದರು.

2014ರಲ್ಲಿ ದೇಶದ ಜನರು ಮೋದಿ ಅವರನ್ನು ಪ್ರಧಾನಿಯಾಗಿ ಆಶೀರ್ವದಿಸಿದರು. ಪ್ರಧಾನಿ ಮೋದಿ ದೇಶದ ಜನರ ಆಶೀರ್ವಾದಕ್ಕೆ ಚ್ಯುತಿ ಬಾರದ ರೀತಿಯಲ್ಲಿ ನಡೆದುಕೊಳ್ಳುತ್ತಾ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ ಎಂದರು.

ಹಿಂದೆ ನಮ್ಮ ದೇಶದ ಪ್ರಧಾನಿಗಳು ವಿದೇಶಕ್ಕೆ ಪ್ರಯಾಣಕ್ಕೆ ಹೋದರೆ, ಭಾರತ ದೇಶದ ಪ್ರಧಾನಿಗಳು ಸಾಲಕ್ಕಾಗಿ ಬಂದಿದ್ದಾರೆ ಎಂದು ವಿದೇಶಿಗರು ಅಪಹಾಸ್ಯ ಮಾಡುತ್ತಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಮಾಡಿದರೆ ಅವರಿಗೆ ರೆಡ್‌ ಕಾರ್ಪೆಟ್ ಸ್ವಾಗತ ನೀಡಲಾಗುತ್ತಿದೆ ಎಂದರು.

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಅಧಿಕ ಸ್ಥಾನ ಪಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಲಿದ್ದಾರೆ. ದೇಶವನ್ನು ವಿಶ್ವದ ಮೂರನೇ ಆರ್ಥಿಕ ಶಕ್ತಿಯನ್ನಾಗಿ ಮಾಡಲಿದ್ದಾರೆ ಎಂದು ಸಂಸದ ಕರಡಿ ಸಂಗಣ್ಣ ನುಡಿದರು.

ರೈಲ್ವೆ ಇಲಾಖೆಯಿಂದ ಶಾಲಾ ಮಕ್ಕಳಿಗೆ ಆಯೋಜಿಸಲಾದ ಚಿತ್ರಕಲೆ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಸಂಸದರು ಬಹುಮಾನ ವಿತರಿಸಿದರು.

ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿ ವಿಜಯಕುಮಾರ್ ವರ್ಮ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನವೀನ್ ಗುಳಗಣ್ಣನವರ್, ಹುಲಿಗಿ ಗ್ರಾಪಂ ಅಧ್ಯಕ್ಷೆ ನೀಲಮ್ಮ, ಗ್ರಾಮದ ಹಿರಿಯರಾದ ಪಾಲಾಕ್ಷಪ್ಪ ಗುಂಗಾಡಿ, ಬಸವರಾಜ್ ಮೇಟಿ, ಹುಲಿಗೆಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷ ವೀರೇಶ್, ಗೋಪಾಲ್ ಕಲಾಲ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರದಿಂದ ಮಹತ್ವದ ನಿರ್ಧಾರ : ವಿಪತ್ತು ವೇಳೆ ಇಡೀ ಊರಿನ ರೈತರಿಗೆ ಪರಿಹಾರ
ಕಡಿಮೆಯಾಗಲಿದೆ ಬೆಂಗಳೂರು - ದಾವಣರೆ ಮಧ್ಯೆ ಅಂತರ : ಎರಡೂ ಗಂಟೆ ಪ್ರಯಾಣ ಸಮಯ ಉಳಿತಾಯ