ಹೊಸಪೇಟೆ: ಪ್ರಧಾನಮಂತ್ರಿ ಇಂಟರ್ನ್ಶಿಪ್ ಯೋಜನೆಯಿಂದ ಯುವಕರಲ್ಲಿ ಕೌಶಲ್ಯ ಹಾಗೂ ಉದ್ಯೋಗ ಸೃಷ್ಟಿಗೆ ಅನುಕೂಲ ಆಗಲಿದೆ. ಇದರ ಪ್ರಯೋಜನ ಪಡೆದುಕೊಂಡರೆ; ದೇಶದ ಉತ್ತಮ ಕಂಪನಿಗಳಲ್ಲಿ ಉದ್ಯೋಗ ಪಡೆಯಬಹುದಾಗಿದೆ. ಈ ಭಾಗದಲ್ಲೂ ಯುವಕರು ಇಂಟರ್ನ್ಶಿಪ್ ಯೋಜನೆಯಲ್ಲಿ ನೋಂದಣಿ ಮಾಡಿಕೊಂಡು ಮುಂದುವರಿದಿರುವುದು ಖುಷಿಯ ವಿಚಾರವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಮಾತೃಭಾಷೆಯಲ್ಲಿ ಮಾತನಾಡಿ: ನಿಮ್ಮ ಪ್ರಶ್ನೆಗಳಿಗೆ ನಾನು ಖಂಡಿತಾ ಉತ್ತರಿಸುವೆ. ಯಾರೂ ಹೆದರದೇ ಮುಕ್ತವಾಗಿ ಸಂವಾದದಲ್ಲಿ ಭಾಗಿಯಾಗಬಹುದು. ಇಂಗ್ಲಿಷ್ನಲ್ಲಿ ಮಾತನಾಡಲು ಯುವತಿ ಆರ್ಯ ತೊದಲಿದರು, ಆಗ ನಿಮ್ಮ ಮಾತೃಭಾಷೆಯಲ್ಲೆ ಮಾತನಾಡಿ ಎಂದು ಸಚಿವೆ ಹುರಿದುಂಬಿಸಿದರು. ಆಗ ಮಲಯಾಳಂನಲ್ಲಿ ಆರ್ಯ ಮಾತನಾಡಿದರು.
ಆಂಧ್ರಪ್ರದೇಶದ ಕಡಪ ಜಿಲ್ಲೆಯ ಹರಿಕೃಷ್ಣ ಎಂಬ ಯುವಕನಿಗೆ "ಎಂಥ ಪೆದ್ದಗ ಪನಿ ಚೇಶ್ಯಾವು ನಾನಾ " (ಎಂತಹ ದೊಡ್ಡ ಕೆಲಸ ಮಾಡಿದೀಯಾ ಅಪ್ಪ) ಎಂದು ಸಚಿವೆ ನಿರ್ಮಲಾ ಸೀತಾರಾಮನ್, ಈ ಯುವಕ ಕಂಪನಿಯಲ್ಲಿ ಮಾಡುತ್ತಿರುವ ಕಾರ್ಯ ವೈಖರಿ ಗುಣಗಾನ ಮಾಡಿ; ಕಂಪನಿಯೊಂದರಲ್ಲಿ ಉದ್ಯೋಗ ನೇಮಕಾತಿ ಆಫರ್ ಲೆಟರ್ನ್ನು ಹರಿಕೃಷ್ಣಗೆ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದರು.ಈ ವೇಳೆ ಹರಿಕೃಷ್ಣ ತಲೆ ಸವರಿ ಒಳ್ಳೆಯದಾಗಲಿ ಎಂದು ಶುಭಹಾರೈಸಿದರು.
ಉದ್ಯೋಗಕ್ಕಾಗಿ ಕೌಶಲ್ಯ ಮುಖ್ಯ. ಹಾಗಾಗಿ ನಾವು ಯುವಕರಲ್ಲಿ ಕೌಶಲ್ಯ ಬೆಳೆಸಲು ಈ ಯೋಜನೆ ರೂಪಿಸಿದ್ದೇವೆ. ಇದೊಂದು ಮಹತ್ತರ ಯೋಜನೆ ಆಗಿದೆ. ಇದರಲ್ಲಿ ಮಾರ್ಪಾಡು ಮಾಡಬೇಕು ಎಂಬ ಸಲಹೆ ಇದ್ದರೂ ನಾವು ಮುಕ್ತವಾಗಿ ಸ್ವೀಕಾರ ಮಾಡುತ್ತೇವೆ. ಉದ್ಯೋಗದಾತ ಕಂಪನಿಗಳ ಪ್ರತಿನಿಧಿಗಳು ಕೂಡ ನಿಮ್ಮ ಸಲಹೆ ನೀಡಬಹುದು. ಈ ಭಾಗದಲ್ಲಿ ಬಲ್ಡೋಟ ಸಮೂಹದ ಎಂಎಸ್ಪಿಎಲ್ ಕಂಪನಿ ಕೂಡ ಉದ್ಯೋಗ ಸೃಷ್ಟಿಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ಇಂಟರ್ನಿಗಳಿಗೂ ಅನುಕೂಲ ಆಗಿದೆ ಎಂದರು.ಅಧಿಕಾರಿಗಳಾದ ಅನಿರುದ್ಧ ಶ್ರವಣ್, ವಿಶಾಲ್, ಬಾಲ ಮುರುಗನ್ , ರೀಚಾ, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಇದ್ದರು. ವಿವಿಧ ಕಡೆಯಿಂದ ಆಗಮಿಸಿದ್ದ ಪ್ರಶಿಕ್ಷಣಾರ್ಥಿಗಳು ಕೂಡ ಭಾಗವಹಿಸಿದ್ದರು.