ಕಾರವಾರ: ಕೇಂದ್ರದ ಕೃಷಿ ಯಾಂತ್ರೀಕರಣ ಉಪ ಆಭಿಯಾನ ಯೋಜನೆಯಡಿ ಜಿಲ್ಲೆಯ ಕೃಷಿಕರಿಗೆ ಕೃಷಿ ಯಂತ್ರೋಪಕರಣ ಒದಗಿಸುವ ಮೂಲಕ ಜಿಲ್ಲೆಯಲ್ಲಿ ಕೃಷಿ ಯಾಂತ್ರೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ಚಿಕ್ಕ ಹಿಡುವಳಿಗಳು ಇರುವುದರಿಂದ ಕೃಷಿಯಿಂದ ರೈತರಿಗೆ ಲಾಭದಾಯವಾಗುವ ನಿಟ್ಟಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯ ಅನುಷ್ಠಾನದಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯ ನಿರ್ವಹಿಸಿ ಸಂಪೂರ್ಣ ಗುರಿ ಸಾಧಿಸುವ ಮೂಲಕ ರೈತರಿಗೆ ಯೋಜನೆಯ ಪ್ರಯೋಜನ ಒದಗಿಸಬೇಕು. ಆತ್ಮ ಯೋಜನೆ ಸೇರಿದಂತೆ ಕೇಂದ್ರ ಪುರಸ್ಕೃತ ಕೃಷಿ ಇಲಾಖೆಯ ಕಾರ್ಯಕ್ರಮಗಳಲ್ಲಿ ಸಂಪೂರ್ಣ ಪ್ರಗತಿ ಸಾಧಿಸಿ ಎಂದರು.
ಜಿಲ್ಲೆಯಲ್ಲಿ ಹಲಸು ಬೆಳೆ ಹೇರಳವಾಗಿದ್ದು, ಸೂಕ್ತ ರೀತಿಯಲ್ಲಿ ಬಳಕೆ ಮಾಡದ ಕಾರಣ ವ್ಯರ್ಥವಾಗುತ್ತಿದ್ದು, ಅತ್ಯಧಿಕ ಪೌಷ್ಠಿಕಾಂಶ ಹೊಂದಿರುವ ಇದನ್ನು ಮೌಲ್ಯ ವರ್ಧನೆ ಮಾಡಿ ಹಲಸಿನಿಂದ ತಯಾರಿಸುವ ಆಹಾರ ಪದಾರ್ಥಗಳ ಫುಡ್ ಪ್ರೊಸೆಸಿಂಗ ಯೂನಿಟ್ ಸ್ಥಾಪನೆಗೆ ರೈತರ ಮನವೊಲಿಸಿ ಇದರಿಂದ ಸ್ವಯಂ ಉದ್ಯೋಗ ಸೃಷ್ಟಿಗೆ ಕೂಡಾ ಅವಕಾಶವಿದೆ. ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಮೌಲ್ಯವರ್ಧನೆ ಕುರಿತಂತೆ ಹೊಸ ಸಂಶೋಧನೆಗಳು ನಡೆಯಬೇಕು ಎಂದರು.ಜಿಲ್ಲೆಯಲ್ಲಿ ನಡೆದಿರುವ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಾಗಿ ಜಿಲ್ಲೆಗೆ ₹ 966 ಕೋಟಿ ಮಂಜೂರಾಗಿದ್ದು ಹಾಗೂ ₹800 ಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಗಳು ಜಿಲ್ಲೆಗೆ ಬಂದಿದೆ. ಈ ಎಲ್ಲ ಕಾಮಗಾರಿ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಕೈಗೊಂಡು ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಸೂಚಿಸಿದರು.
ಪಿಎಂ ಆವಾಸ್ ಯೋಜನೆಗೆ ಜಿಲ್ಲೆಗೆ 23,000 ಮನೆ ಮಂಜೂರಾಗಿದ್ದು, ಅರ್ಹ ಎಲ್ಲರಿಗೂ ಇದರ ಪ್ರಯೋಜನ ಒದಗಿಸುವಂತೆ ತಿಳಿಸಿದ ಅವರು, ಪಿಎಂ ವಿಶ್ವಕರ್ಮ ಯೋಜನೆ ಕುಶಲಕರ್ಮಿಗಳಿಗೆ ತರಬೇತಿ ನೀಡಿ ಬ್ಯಾಂಕ್ನಿಂದ ಸಾಲ ಸೌಲಭ್ಯ ದೊರಕಿಸಿ ಪ್ರಗತಿ ಸಾಧಿಸಿ, ಯೋಜನೆಯಡಿ ಬ್ಯಾಂಕ್ಗಳಿಗೆ ಸಲ್ಲಿಕೆಯಾಗುವ ಅರ್ಜಿಗಳನ್ನು ತಿರಸ್ಕರಿಸಬೇಡಿ ಎಂದರು.