ಕನ್ನಡಪ್ರಭ ವಾರ್ತೆ ಮಡಿಕೇರಿ
ಈ ಸಂದರ್ಭ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ 2026ರ ಮಾರ್ಚ್ ವರೆಗೆ ಜಿಲ್ಲೆಯಲ್ಲಿ ಒಂದು ಪ್ರಕರಣ ಕಂಡುಬಂದಿದೆ. ಸೋಮವಾರಪೇಟೆ ತಾಲೂಕಿನ 16,860 ಮಂದಿಯ ರಕ್ತ ಪರೀಕ್ಷೆಯಲ್ಲಿ 1 ಪ್ರಕರಣ ಕಂಡುಬಂದಿದ್ದು, ಅವರು ಗುಣಮುಖರಾಗಿದ್ದಾರೆ ಎಂದರು.
ಮಲೇರಿಯಾ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಶೀಘ್ರ ಪತ್ತೆಗಾಗಿ ರಕ್ತ ಲೇಪನಗಳ ಪರೀಕ್ಷೆ, ಜಿಲ್ಲೆಯ ವಲಸಿಗರ ಮತ್ತು ಹೊರ ರಾಜ್ಯದ ವಲಸಿಗರ ಸಮೀಕ್ಷೆ, ವಿವಿಧ ಕಾರ್ಯಕ್ರಮ ಮೂಲಕ ಜಾಗೃತಿ ಮೂಡಿಸುವುದು, ಮಲೇರಿಯಾ ಪತ್ತೆಯಾದ ಗ್ರಾಮ/ ಪ್ರದೇಶಗಳಲ್ಲಿ ರಕ್ತ ಲೇಪ ಸಂಗ್ರಹ ಮತ್ತು ಐಇಸಿ ಚಟುವಟಿಕೆಗಳು, ಸ್ವಚ್ಛ ನೀರಿನ ತಾಣಗಳಿಗೆ ಲಾರ್ವಾಹಾರಿ ಮೀನು (ಗಪ್ಪಿ ಮತ್ತು ಗ್ಯಾಂಬೂಸಿಯ) ಬಿಡುಗಡೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್/ ಸಾರ್ವಜನಿಕ ಆರೋಗ್ಯ ಎಂಜಿನಿಯರಿಂಗ್ ಇಲಾಖೆ ಮೂಲಕ ಸೊಳ್ಳೆ ಉತ್ಪತ್ತಿ ತಾಣಗಳ ನಿವಾರಣೆ ಹಾಗೂ ಗ್ರಾಮ ನೈರ್ಮಲ್ಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು, ನೀರು ಸರಬರಾಜು ಮಾಡುವ ತೊಟ್ಟಿಗಳನ್ನು ಭದ್ರವಾಗಿ ಮುಚ್ಚುವುದು, ನಗರಾಭಿವೃದ್ಧಿ ಇಲಾಖೆಯಿಂದ ಫ್ಲೆಕ್ಸ್, ಪೋಸ್ಟರ್, ಬಿತ್ತಿಪತ್ರಗಳ ಮೂಲಕ ಮಾಹಿತಿ ನೀಡುವುದು, ನೀರು ಸರಬರಾಜು ಪೈಪ್ಗಳನ್ನು ಕಾಲ ಕಾಲಕ್ಕೆ ಪರೀಕ್ಷಿಸುವುದು, ನೀರಾವರಿ ಇಲಾಖೆಯಿಂದ ನೀರಾವರಿ ಯೋಜನೆಗಳಡಿ ಕೆಲಸಕ್ಕಾಗಿ ಬರುವ ಕಾರ್ಮಿಕರ ಬಗ್ಗೆ ಮುಂಚಿತವಾಗಿ ಆರೋಗ್ಯ ಇಲಾಖೆಗೆ ತಿಳಿಸಲಾಗುವುದು ಎಂದು ಡಾ. ಸತೀಶ್ ಕುಮಾರ್ ತಿಳಿಸಿದರು. ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯಲು ಹೆಣ್ಣು ಮಕ್ಕಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಎಚ್ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ನೀಡಲಾಗುತ್ತಿದ್ದು, ವಿದ್ಯಾರ್ಥಿನಿಯರಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ಈ ಬಗ್ಗೆ ಹೆಚ್ಚು ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕ್ರಮಗಳನ್ನು ಯಶಸ್ವಿಯಾಗಿ ಕಾರ್ಯಗತ ಮಾಡದೇ ಇದ್ದಲ್ಲಿ 2030ರ ವೇಳೆಗೆ ಸರಿ ಸುಮಾರು 8 ಲಕ್ಷ ಹೊಸ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ವಾರ್ಷಿಕವಾಗಿ ಸಂಭವಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಿರುವುದರಿಂದ ಜಿಲ್ಲೆಯಲ್ಲಿ ಹೆಚ್ಚು ಜಾಗೃತಿ ಅಗತ್ಯ ಇದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮಾತನಾಡಿ, ಈ ಬಗ್ಗೆ ವಿದ್ಯಾರ್ಥಿನಿಯರಿಗೆ ಒತ್ತಡ ಹೇರದೆ, ಅವರ ಮನ ಒಲಿಸಿ, ವಿಶ್ವಾಸಕ್ಕೆ ತೆಗೆದುಕೊಂಡು ಇಲಾಖಾಧಿಕಾರಿಗಳು ಕಾರ್ಯನಿರ್ವಹಿಸಬೇಕು. ಹೆಣ್ಣು ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ, ಪೋಷಕರಿಗೆ ಹಾಗೂ ಧರ್ಮಗುರುಗಳು ಸಮುದಾಯ ಬಾಂಧವರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದರು.ಜಿಲ್ಲೆಯ 29 ಗ್ರಾಪಂನ್ನು ಟಿಬಿ ಮುಕ್ತಗೊಳಿಸಲಾಗಿದ್ದು, ಶೇಕಡವಾರು ಪ್ರಗತಿ ಸಾಧಿಸಲು ಹೆಚ್ಚಿನ ಜಾಗೃತಿ ಮೂಡಿಸಲಾಗಿದೆ. ಈ ನಿಟ್ಟಿನಲ್ಲಿ ಮಿಷನ್ ಏಡ್ಸ್ ಸುರಕ್ಷಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ತಿಳಿಸಿದರು.