- ಹಿರೇತೊಗಲೇರಿಯಲ್ಲಿ ಕಸ ವಿಲೇವಾರಿ ಘಟಕಕ್ಕೆ ಭೂಮಿಪೂಜೆ- - - ಕನ್ನಡಪ್ರಭ ವಾರ್ತೆ ದಾವಣಗೆರೆ
ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕುರ್ಕಿ ಗ್ರಾಮ ಪಂಚಾಯಿತಿಯ ಹಿರೇತೊಗಲೇರಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಎಂಜಿನಿಯರಿಂಗ್ ವಿಭಾಗದಿಂದ 2023-2024ನೇ ಸಾಲಿನ ಎಸ್ಬಿಎಂಜಿ ಯೋಜನೆಯಡಿ ಮಂಜೂರಾಗಿರುವ ₹2.48 ಕೋಟಿ ವೆಚ್ಚದ ತಾಲೂಕುಮಟ್ಟದ ಕಸ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಹಿರೇತೊಗಲೇರಿ ಗ್ರಾಮದ 2 ಎಕರೆ ಪ್ರದೇಶದಲ್ಲಿ ಕಸ ವಿಲೇವಾರಿ ಘಟಕ ನಿರ್ಮಿಸಲಾಗುತ್ತಿದೆ. ತಾಲೂಕಿನ ಒಣಕಸ ಸಂಗ್ರಹಿಸಿ ಇಲ್ಲಿನ ಒಣಕಸ ನಿರ್ವಹಣಾ ಘಟಕ ಮೂಲಕ ಪ್ಲಾಸ್ಟಿಕ್, ಕಬ್ಬಿಣ, ಗಾಜು ಇತ್ಯಾದಿಗಳನ್ನು ವಿಂಗಡಿಸಿ, ಪುನರ್ ಉತ್ಪಾದನೆ ಮಾಡುವ ಉದ್ದಿಮೆದಾರರಿಗೆ ಕಳುಹಿಸಲಾಗುತ್ತದೆ. ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.ಕ್ಷೇತ್ರದ ಬಹುತೇಕ ಗ್ರಾಪಂಗಳಲ್ಲಿ ಘಟಕಗಳು ನನೆಗುದಿಗೆ ಬಿದ್ದಿವೆ. ಕೆಲವೊಂದು ಗ್ರಾಪಂಗಳಲ್ಲಿ ಕಸ ವಿಲೇವಾರಿ ಘಟಕಗಳು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಕಸ ಸಂಗ್ರಹಿಸುವ ಆಟೋಗಳು ಮೂಲೆ ಸೇರಿ ತುಕ್ಕು ಹಿಡಿಯುತ್ತಿವೆ. ಕುರ್ಕಿ ಗ್ರಾಮದ ಕಸ ವಿಲೇವಾರಿ ಘಟಕವನ್ನು ಇಲ್ಲಿನ ಗ್ರಾಪಂ ಪಿಡಿಒ, ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳ ವರ್ಗ ಸುಸ್ಥಿತಿಯಲ್ಲಿ ಇಟ್ಟುಕೊಂಡು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ ಎಂದರು.
ಗ್ರಾಮ ಸ್ವಚ್ಛತೆಗಾಗಿ ಸರ್ಕಾರ ಪ್ರತ್ಯೇಕ ಅನುದಾನ ನೀಡುತ್ತಿದ್ದು, ಇದನ್ನು ಗ್ರಾಪಂಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು. ನಗರ, ಪಟ್ಟಣಗಳಂತೆ ಗ್ರಾಮೀಣ ಪ್ರದೇಶದಲ್ಲೂ ಪ್ರತಿನಿತ್ಯ ಸ್ವಚ್ಛತೆ ಮಾಡಲು ಪೌರಕಾರ್ಮಿಕರ ನೇಮಿಸಬೇಕೆಂದು ಈ ಹಿಂದೆ ನಡೆದ ಅಧಿವೇಶನದಲ್ಲಿ ಚರ್ಚೆ ಮಾಡಿ ಸರ್ಕಾರದ ಮೇಲೆ ಒತ್ತಡ ಹಾಕಿದ್ದೇನೆ. ಪ್ರತಿದಿನ ಸ್ವಚ್ಛತೆ ಮಾಡಿ, ಗ್ರಾಮದ ಸೌಂದರ್ಯವನ್ನೂ ಕಾಪಾಡುವ ಕೆಲಸ ಆಗಬೇಕಾಗಿದೆ ಎಂದರು.
ಪಂಚಾಯತ್ ರಾಜ್ ಇಲಾಖೆ ಇಇ ಟಾಟಾ ಶಿವನ್, ಎಇಇ ಶಿವಮೂರ್ತಿ, ಗ್ರಾಪಂ ಅಧ್ಯಕ್ಷರಾದ ನಾಗಮ್ಮ, ಗ್ರಾಪಂ ಪಿಡಿಒ ಸುರೇಖಾ, ಗ್ರಾಪಂ ಸದಸ್ಯರು, ಮುಖಂಡರಾದ ನಿಂಗಪ್ಪ, ಬಸವರಾಜಪ್ಪ, ರಾಜಪ್ಪ, ವಾಸು, ಗ್ರಾಮಸ್ಥರು ಉಪಸ್ಥಿತರಿದ್ದರು.- - - -3ಕೆಡಿವಿಜಿ37:
ದಾವಣಗೆರೆ ತಾಲೂಕಿನ ಹಿರೇತೊಗಲೇರಿಯಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಸ್.ಬಸವಂತಪ್ಪ ಭೂಮಿಪೂಜೆ ನೆರವೇರಿಸಿದರು.