ಮಳೆಗಾಲದಲ್ಲಿ ನಿಂತ ನೀರಿನಲ್ಲಿ ಸೋಂಕಿತ ಸೊಳ್ಳೆಗಳು ಹೆಚ್ಚಾಗಿ ಒಬ್ಬರಿಂದ ಇನ್ನೊಬ್ಬರಿಗೆ ಕಚ್ಚುವುದರಿಂದ ಮಲೇರಿಯಾ ಹರಡುತ್ತದೆ. ಈ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ನಗರದ ಕಾಳಿದಾಸ ಪ್ರೌಢಶಾಲೆಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಮಾತನಾಡಿ, ಮಳೆಗಾಲದಲ್ಲಿ ನಿಂತ ನೀರಿನಲ್ಲಿ ಸೋಂಕಿತ ಸೊಳ್ಳೆಗಳು ಹೆಚ್ಚಾಗಿ ಒಬ್ಬರಿಂದ ಇನ್ನೊಬ್ಬರಿಗೆ ಕಚ್ಚುವುದರಿಂದ ಮಲೇರಿಯಾ ಹರಡುತ್ತದೆ. ಈ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ತಲೆನೋವು, ವಾಂತಿ, ವಿಪರೀತ ಚಳಿಜ್ವರ, ಮೈನಡುಕ ಲಕ್ಷಣಗಳು ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.
ಮಲೇರಿಯಾ ನಿಯಂತ್ರಣಕ್ಕಾಗಿ ಮನೆ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸುವುದು, ಸಂಜೆ ಬೇವಿನ ಸೊಪ್ಪಿನ ಹೊಗೆ ಹಾಕುವುದು, ಸೊಳ್ಳೆ ಕಡಿತದಿಂದ ದೂರವಿರಲು ವೈಯಕ್ತಿಕ ರಕ್ಷಣೆಗೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು.
ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಕಾಂತ ಎಚ್.ಎಚ್., ಕಾಯಿಲೆಗಳ ನಿಯಂತ್ರಣ ಮತ್ತು ಅದರ ಮುಂಜಾಗ್ರತ ಕ್ರಮ, ಮಕ್ಕಳಲ್ಲಿ ಕಂಡುಬರುವ ಅತಿಸಾರಭೇದಿ ನಿಯಂತ್ರಣ, ಮುಂಜಾಗ್ರತ ಕ್ರಮಗಳ ಕುರಿತು ಮತ್ತು ಹದಿ-ಹರೆಯದವರ ಆರೋಗ್ಯ ರಕ್ಷಣೆ ಕುರಿತು ಮಾಹಿತಿ ನೀಡಿದರು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಲಿಂಕ್ವರ್ಕರ್ ಉದಯ, ಕ್ಷಯರೋಗ, ಕುಷ್ಠರೋಗ, ಅ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಬಾಲ್ಯವಿವಾಹ ನಿಷೇಧ ಕುರಿತು ಮಾತನಾಡಿದರು.
ಮುಖ್ಯಶಿಕ್ಷಕ ಡಾ. ರಾಮಪ್ಪ ಮಾತನಾಡಿ, ಈ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಗಿವೆ ಎಂದು ಹೇಳಿದರು.
ಸಹ ಶಿಕ್ಷಕಿ ಎಸ್.ಡಿ. ಕುಲಕರ್ಣಿ, ಆರೋಗ್ಯ ಇಲಾಖೆ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.