ಪ್ರವಾಹಕ್ಕೊಳಗಾಗುವ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ-ಜಿಲ್ಲಾಧಿಕಾರಿ

KannadaprabhaNewsNetwork |  
Published : Jun 14, 2025, 12:32 AM IST
ಪೋಟೋ ಇದೆ. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಬೆಣ್ಣೆಹಳ್ಳ ಹಾಗೂ ನದಿಯ ಪ್ರವಾಹಕ್ಕೊಳಗಾಗುವ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗೆ ಸ್ಥಳೀಯ ಅಧಿಕಾರಿಗಳು ಪ್ರಥಮಾದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

ಗದಗ: ಜಿಲ್ಲೆಯಲ್ಲಿ ಬೆಣ್ಣೆಹಳ್ಳ ಹಾಗೂ ನದಿಯ ಪ್ರವಾಹಕ್ಕೊಳಗಾಗುವ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗೆ ಸ್ಥಳೀಯ ಅಧಿಕಾರಿಗಳು ಪ್ರಥಮಾದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯಿಂದ ವಿಡಿಯೋ ಕಾನ್ಫರನ್ಸ್ ಮೂಲಕ ಬೆಣ್ಣೆಹಳ್ಳ ಹಾಗೂ ನದಿಯ ಪ್ರವಾಹದಿಂದ ತೊಂದರೆಗೊಳಗಾಗುವ ಗ್ರಾಮಗಳ ಸುರಕ್ಷತೆ ಕುರಿತಂತೆ ತಾಲೂಕಾಡಳಿತದೊಂದಿಗೆ ಪ್ರವಾಹ ಪರಿಸ್ಥಿತಿ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಅಪಾರ ಮಳೆಯಿಂದ ಬಿದ್ದ ಮಳೆ ನೀರು ಚರಂಡಿ ಹಾಗೂ ಪ್ರಮುಖ ಕಾಲುವೆಗಳ ಮೂಲಕ ಸರಾಗವಾಗಿ ಮುಂದೆ ಸಾಗುವಂತೆ ಇರುವ ಗಿಡ ಕಂಟೆ, ಪ್ಲಾಸ್ಟಿಕ್ ತೆರವುಗೊಳಿಸಬೇಕು. ಇದರಿಂದ ವಿನಾಕಾರಣ ಮಳೆ ನೀರು ಮನೆಗಳಿಗೆ ನುಗ್ಗುವುದನ್ನು ತಡೆಯಬಹುದಾಗಿದೆ ಎಂದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಎಲ್ಲರೂ ಕೇಂದ್ರ ಸ್ಥಾನದಲ್ಲಿದ್ದು ಅತೀವೃಷ್ಟಿ, ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಸಮರ್ಪಕವಾಗಿ ಎದುರಿಸಬೇಕು. ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ಜನಜಾನುವಾರುಗಳ ಜೀವ ಹಾನಿ ತಡೆಯುವುದರೊಂದಿಗೆ ಆಸ್ತಿ ರಕ್ಷಣೆ ಮಾಡಬೇಕೆಂದರು.ಈ ಹಿಂದೆ ಅಧಿಕ ಪ್ರಮಾಣದ ಪ್ರವಾಹ ಪರಿಸ್ಥಿತಿ ಎದುರಾದಾಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ ಅನೇಕ ಅಧಿಕಾರಿಗಳು ಅನುಭವ ಹೊಂದಿದವರಾಗಿದ್ದಾರೆ. ಪ್ರವಾಹ ಪರಿಸ್ಥಿತಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಣೆಗೆ ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕೆಂದು ಸೂಚಿಸಿದರು.

ನವಿಲುತೀರ್ಥ ಡ್ಯಾಂ 37.731 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು. ನವಿಲುತೀರ್ಥ ಡ್ಯಾಮಿನಿಂದ ಅಪಾರ ಪ್ರಮಾಣದ ನೀರು ಬಿಟ್ಟಲ್ಲಿ ಮುಂದಿನ 18 ಗಂಟೆಯೊಳಗಾಗಿ ನೀರು ಜಿಲ್ಲೆಗೆ ಪ್ರವೇಶ ಮಾಡಲಿದ್ದು ಡ್ಯಾಂನಿಂದ ನೀರು ಹೊರಬಿಡುವ ಮಾಹಿತಿ ದೊರೆತ ತಕ್ಷಣ ತಾಲೂಕಾಡಳಿತಗಳು ಪ್ರವಾಹ ಪೀಡಿತಕ್ಕೊಳಗಾಗುವ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸುವ ಮೂಲಕ ಆಗುವ ಜೀವ ಹಾನಿ ತಪ್ಪಿಸಬೇಕು ಎಂದರು.

ನವಲಗುಂದ ಸೇರಿದಂತೆ 5 ತಾಲೂಕುಗಳ ಮಳೆಯಿಂದ ಅಪಾರ ಪ್ರಮಾಣದ ನೀರು ಬೆಣ್ಣೆಹಳ್ಳ ತಲುಪಿ ಅಲ್ಲಿಂದ ಜಿಲ್ಲೆಗೆ ಒಮ್ಮಿಲೇ ನೀರು ಹರಿದು ಬರಲಿದೆ. ಇದರಿಂದ ನರಗುಂದ ಹಾಗೂ ರೋಣ ತಾಲೂಕಿನ ಹಲವು ಗ್ರಾಮಗಳು ಪ್ರವಾಹಕ್ಕೊಳಗಾಗುವ ಸಂಭವವಿದ್ದು, ಈಗಾಗಲೇ ತಾಲೂಕಾಡಳಿತ ಅಂತಹ ಗ್ರಾಮಗಳನ್ನು ಗುರುತಿಸಿದೆ. ನೀರಿನ ಪ್ರಮಾಣಕ್ಕನುಗುಣವಾಗಿ ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಬೇಕು ಎಂದು ನಿರ್ದೇಶಿಸಿದರು.

ಪ್ರವಾಹ ಪರಿಸ್ಥಿತಿ ತಲೆದೂರಿದಲ್ಲಿ ಅಗ್ನಿಶಾಮಕ ಇಲಾಖೆ ತಂಡ ತಕ್ಷಣ ಕಾರ್ಯಪ್ರವೃತ್ತವಾಗಬೇಕು. ತಾಲೂಕಾಡಳಿತದೊಂದಿಗೆ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸುವ ಮೂಲಕ ಪ್ರವಾಹ ಪರಿಸ್ಥಿತಿ ನಿರ್ವಹಣೆ ಮಾಡಬೇಕು. ತಗ್ಗುಪ್ರದೇಶಗಳಲ್ಲಿ ಹಾಗೂ ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಗಳಲ್ಲಿ ವಾಸಿಸುವವರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಬೇಕು ಎಂದು ತಿಳಿಸಿದರು.

ಜಿಪಂ ಸಿಇಒ ಭರತ್.ಎಸ್ ಮಾತನಾಡಿ, ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು. ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು. ಕಾಳಜಿ ಕೇಂದ್ರಗಳನ್ನು ಈಗಾಗಲೇ ಗುರುತಿಸಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಅಗತ್ಯಮೂಲಭೂತ ಸೌಲಭ್ಯಗಳು ಇರುವಂತೆ ಪರಿಶೀಲಿಸಬೇಕು. ಸಂದರ್ಭಾನುಸಾರ ಸಾರ್ವಜನಿಕರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿದಲ್ಲಿ ಆರೋಗ್ಯಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಬೇಕೆಂದು ಸೂಚಿಸಿದರು.

ಉಪವಿಭಾಗಾಧಿಕಾರಿ ಗಂಗಪ್ಪ.ಎಂ ಮಾತನಾಡಿ, ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಈಗಾಗಲೇ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. ಜನಜಾನುವಾರು ಸ್ಥಳಾಂತರಕ್ಕೆ ಸ್ಥಳ ಗುರುತಿಸಿಟ್ಟುಕೊಳ್ಳಲಾಗಿದೆ. ಮೊದಲು ಪ್ರವಾಹಕ್ಕಿಡಾಗುವ ಗ್ರಾಮಗಳ ಪಟ್ಟಿಯನ್ನು ಮಾಡಿಟ್ಟುಕೊಂಡಿದ್ದು ಸಂದರ್ಭಕ್ಕನುಸಾರವಾಗಿ ಸಮರ್ಪಕವಾಗಿ ಪ್ರವಾಹ ನಿರ್ವಹಣೆಗೆ ಕ್ರಮ ವಹಿಸಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ತಾಲೂಕು ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ತಾಲೂಕಾ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''