ಕನ್ನಡಪ್ರಭ ವಾರ್ತೆ ಬೀದರ್
ಇಲ್ಲಿನ ಪ್ರತಾಪನಗರದಲ್ಲಿರುವ ಡಿಸಿಸಿ ಬ್ಯಾಂಕ್ ಆರ್ಸೆಟಿ ಸಂಸ್ಥೆಯ ಸಭಾಭವನದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಸಹಕಾರ ಯೂನಿಯನ್ನ 2025-26ನೇ ಸಾಲಿನ 64ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಲಾಭದಲ್ಲಿರುವ ಸಹಕಾರ ಸಂಘಗಳು ಸಹಕಾರ ಶಿಕ್ಷಣ ನಿಧಿಯನ್ನು ನಿಯಮಿತವಾಗಿ ಪಾವತಿಸಿದರೆ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಮತ್ತಷ್ಟು ಸದೃಢಗೊಳ್ಳಲು ಸಾಧ್ಯವಾಗುತ್ತದೆ. ಸಹಕಾರ ಚಳವಳಿಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಲು ಇದರಿಂದ ಅನುಕೂಲ ವಾಗಲಿದೆ ಎಂದರು.
ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಡಾ.ನೀಲಾಂಬಿಕಾ ಮಾತನಾಡಿ, ಜಿಲ್ಲೆಯ ಎಲ್ಲ ಸಹಕಾರ ಸಂಘಗಳು ಸಕಾಲದಲ್ಲಿ ಸಹಕಾರ ಶಿಕ್ಷಣ ನಿಧಿ ಪಾವತಿಸುವ ಮೂಲಕ ಸಹಕಾರ ಚಳವಳಿಯ ಬಲವರ್ಧನೆಗೆ ಕೈಜೋಡಿ ಸಬೇಕು. ಸಂಘಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕಿ, ಲಾಭದಾಯಕವಾಗಿ ಕಾರ್ಯ ನಿರ್ವಹಿಸುವ ಮೂಲಕ ಸದಸ್ಯರ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಂಘಗಳ ಒಳಿತು-ಕೆಡಕುಗಳನ್ನು ಅರಿತು, ಸಂಘಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಂಘಗಳು ಹೆಚ್ಚಿನ ಪ್ರಮಾಣದಲ್ಲಿ ಲಾಭ ಗಳಿಸುವಂತೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಇದರಿಂದ ಸಂಘಗಳ ಅಭಿವೃದ್ಧಿಯೊಂದಿಗೆ ಸದಸ್ಯರ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
2025-26ನೇ ಸಾಲಿನಲ್ಲಿ ಸಹಕಾರ ಶಿಕ್ಷಣ ನಿಧಿ ಪಾವತಿಸಿದ ಸಹಕಾರ ಸಂಘಗಳ ಅಧ್ಯಕ್ಷರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಸೌಹಾರ್ದ ತರಬೇತಿ ಕೇಂದ್ರ ನೌಬಾದ್ನ ನಿರ್ದೇಶಕ ಸುಬ್ರಮಣ್ಯ ಪ್ರಭು ಸ್ವಾಗತಿಸಿದರು. ಜಿಲ್ಲಾ ಸಹಕಾರ ಯೂನಿಯನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಆರ್.ಮಲ್ಲಮ್ಮ ವಂದಿಸಿದರು. ಇದರಲ್ಲಿ 200ಕ್ಕೂ ಹೆಚ್ಚು ಸದಸ್ಯರು ಮಹಾಸಭೆಯಲ್ಲಿ ಪಾಲ್ಗೊಂಡಿದ್ದರು.