ಕನ್ನಡಪ್ರಭ ವಾರ್ತೆ ಶಿರಹಟ್ಟಿಐತಿಹಾಸಿಕ ಹಿನ್ನೆಲೆ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಶ್ರೀಕ್ಷೇತ್ರ ವರವಿ ಮೌನೇಶ್ವರ ಮಠದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಚ್.ಕೆ. ಪಾಟೀಲ ಹೇಳಿದರು.ತಾಲೂಕಿನ ವರವಿ ಗ್ರಾಮದ ಶ್ರೀ ಮೌನೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಿದ್ದ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭ, ದಾನಿಗಳಿಗೆ ಸನ್ಮಾನ ಹಾಗೂ ಪೂಜಾಫಲ ಲಿಲಾವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಲವು ವರ್ಷಗಳ ಇತಿಹಾಸ ಹೊಂದಿರುವ ಇಂತಹ ಸ್ಥಳಗಳು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಧಾರ್ಮಿಕ ನಂಬಿಕೆಗಳ ಪ್ರತೀಕವಾಗಿವೆ. ಆದರೆ ಸೂಕ್ತ ನಿರ್ವಹಣೆ ಹಾಗೂ ಅಭಿವೃದ್ಧಿ ಕಾರ್ಯಗಳ ಕೊರತೆಯಿಂದಾಗಿ ಕೆಲವು ಐತಿಹಾಸಿಕ ಸ್ಥಳಗಳು ನಿರ್ಲಕ್ಷ್ಯಕ್ಕೊಳಗಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದೆ.ಸ್ಥಳದ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ, ರಸ್ತೆ, ವಿದ್ಯುತ್, ಭಕ್ತರಿಗೆ ವಿಶ್ರಾಂತಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಸ್ಥಳವನ್ನು ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು. ಅಲ್ಲದೆ, ಸ್ಥಳದ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಮಾಹಿತಿ ಫಲಕಗಳನ್ನು ಅಳವಡಿಸಿ, ಪಾರಂಪರಿಕ ಕಟ್ಟಡಗಳು ಹಾಗೂ ಸ್ಮಾರಕಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.ಟ್ರಸ್ಟ್ ಕಮಿಟಿಯವರು ಭಕ್ತರ ಸಹಕಾರದೊಂದಿಗೆ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಿ ಹಂತ ಹಂತವಾಗಿ ಅನುಷ್ಠಾನಗೊಳಿಸಬೇಕು. ಸರ್ಕಾರದ ಸಂಬಂಧಿಸಿದ ಇಲಾಖೆಗಳ ನೆರವು ಹಾಗೂ ಅನುದಾನ ಪಡೆದು ಐತಿಹಾಸಿಕ ಸ್ಥಳವನ್ನು ಪ್ರವಾಸಿ ಹಾಗೂ ಧಾರ್ಮಿಕ ಕೇಂದ್ರವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ಅಗತ್ಯವಿದೆ. ಐತಿಹಾಸಿಕ ಸ್ಥಳಗಳು ಕೇವಲ ಪೂಜಾ ಕೇಂದ್ರಗಳಲ್ಲ. ಅವು ನಮ್ಮ ಪರಂಪರೆಯ ಜೀವಂತ ಸಾಕ್ಷಿಗಳು. ಅವುಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.ಇದೇ ವೇಳೆ ಗಣಪತಿ ಹಾಗೂ ವಿಠೋಬ ಮಂದಿರದ ಜೊತೆಗೆ ೨೫ ಅತಿಥಿ ಕಟ್ಟಡಗಳ ಕಾಮಗಾರಿಗೆ ಶಂಕು ಸ್ಥಾಪನೆ ಮಾಡಲಾಯಿತು.ವರವಿ ದೇವಸ್ಥಾನ ಹಾಗೂ ಮಠದ ವಿಕಾಸ ಟ್ರಸ್ಟ್ ಕಮಿಟಿ ಅಧ್ಯಕ್ಷ ಮೋಹನ ನರಗುಂದ ಮಾತನಾಡಿದರು.