ಅಕ್ಷರ ದಾಸೋಹ ಸಿಬ್ಬಂದಿಯ ಆರೋಗ್ಯಕ್ಕೂ ಆದ್ಯತೆ

KannadaprabhaNewsNetwork |  
Published : Jul 20, 2026, 12:30 AM IST
 ಉಚಿತ ಏಪ್ರಾನ್ ಮತ್ತು ತಲೆಗವಸು ವಿತರಣೆ, ಗರ್ಭಕೊರಳ ಹಾಗೂ ಸ್ತನ ಕ್ಯಾನ್ಸರ್ ಕುರಿತು ಅರಿವು ಮತ್ತು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಗೊಂಡಿತು | Kannada Prabha

ಸಾರಾಂಶ

ಸರ್ಕಾರಿ ಶಾಲೆಗಳ ಅಕ್ಷರ ದಾಸೋಹ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯ ಆರೋಗ್ಯ ರಕ್ಷಣೆ, ಸ್ವಚ್ಛತೆ ಹಾಗೂ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತ ಸೇವಾದಳ ಜಿಲ್ಲಾ ಸಮಿತಿ, ನವಚೇತನ ಚಾರಿಟಬಲ್ ಟ್ರಸ್ಟ್ ಅಂಡ್ ಫೌಂಡೇಶನ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದ ಉಚಿತ ಏಪ್ರಾನ್ ಮತ್ತು ತಲೆಗವಸು ವಿತರಣೆ, ಗರ್ಭಕೊರಳ ಹಾಗೂ ಸ್ತನ ಕ್ಯಾನ್ಸರ್ ಕುರಿತು ಅರಿವು ಮತ್ತು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಗೊಂಡಿತು.

ಕನ್ನಡಪ್ರಭ ವಾರ್ತೆ ಹಾಸನ

ಸರ್ಕಾರಿ ಶಾಲೆಗಳ ಅಕ್ಷರ ದಾಸೋಹ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯ ಆರೋಗ್ಯ ರಕ್ಷಣೆ, ಸ್ವಚ್ಛತೆ ಹಾಗೂ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತ ಸೇವಾದಳ ಜಿಲ್ಲಾ ಸಮಿತಿ, ನವಚೇತನ ಚಾರಿಟಬಲ್ ಟ್ರಸ್ಟ್ ಅಂಡ್ ಫೌಂಡೇಶನ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದ ಉಚಿತ ಏಪ್ರಾನ್ ಮತ್ತು ತಲೆಗವಸು ವಿತರಣೆ, ಗರ್ಭಕೊರಳ ಹಾಗೂ ಸ್ತನ ಕ್ಯಾನ್ಸರ್ ಕುರಿತು ಅರಿವು ಮತ್ತು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಗೊಂಡಿತು.

ಕಾರ್ಯಕ್ರಮವನ್ನು ಗಣ್ಯರು ಜ್ಯೋತಿ ಬೆಳಗುವ ಮೂಲಕ ಉದ್ಘಾಟನೆ ಮಾಡಿದ ನಂತರ ಮಾತನಾಡಿದ ಭಾರತ ಸೇವಾದಳ ಜಿಲ್ಲಾ ಅಧ್ಯಕ್ಷ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಕೆ. ಕಮಲ್ ಕುಮಾರ್, ಶಾಲಾ ಮಕ್ಕಳಿಗೆ ಪ್ರತಿದಿನ ಪೌಷ್ಟಿಕ ಆಹಾರ ತಯಾರಿಸುವ ಅಕ್ಷರ ದಾಸೋಹ ಸಿಬ್ಬಂದಿ ಸಮಾಜದ ಆರೋಗ್ಯದ ಕಾವಲುಗಾರರಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಆರೋಗ್ಯ ಸುರಕ್ಷಿತವಾಗಿದ್ದಾಗ ಮಾತ್ರ ಮಕ್ಕಳಿಗೂ ಗುಣಮಟ್ಟದ ಆಹಾರ ಒದಗಿಸಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಅವರ ಆರೋಗ್ಯ ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಗರ್ಭಕೊರಳ ಹಾಗೂ ಸ್ತನ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಆದರೆ ಅನೇಕಮಹಿಳೆಯರು ಕುಟುಂಬದ ಜವಾಬ್ದಾರಿ, ಆರ್ಥಿಕ ಸಂಕಷ್ಟ, ಸಮಯದ ಅಭಾವ ಹಾಗೂ ಮುಜುಗರದ ಕಾರಣದಿಂದ ವೈದ್ಯರನ್ನು ಸಂಪರ್ಕಿಸಲು ಹಿಂದೇಟು ಹಾಕುತ್ತಾರೆ. ಈ ನಿರ್ಲಕ್ಷ್ಯವೇ ಹಲವು ಸಂದರ್ಭಗಳಲ್ಲಿ ಜೀವಕ್ಕೆ ಅಪಾಯ ಉಂಟುಮಾಡುತ್ತಿದೆ. ಯಾವುದೇ ಕಾಯಿಲೆಯನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿದರೆ ಸಂಪೂರ್ಣ ಗುಣಪಡಿಸಬಹುದಾದ ಸಾಧ್ಯತೆ ಹೆಚ್ಚಿರುತ್ತದೆ. ಸಾವಿರಾರು ಮಕ್ಕಳ ಆರೋಗ್ಯದ ಜವಾಬ್ದಾರಿಯನ್ನು ಹೊತ್ತಿರುವ ಮಾತೃಸ್ವರೂಪದ ಮಹಿಳೆಯರು. ಅವರು ಸ್ವಚ್ಛತೆಯೊಂದಿಗೆ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ಉಚಿತ ಏಪ್ರಾನ್ ಹಾಗೂ ತಲೆಗವಸು ವಿತರಿಸಲಾಗುತ್ತಿದೆ. ಇದು ಅವರ ಆರೋಗ್ಯ ರಕ್ಷಣೆ ಮಾತ್ರವಲ್ಲದೆ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯನ್ನು ಮತ್ತಷ್ಟು ಉತ್ತಮಗೊಳಿಸುವ ಪ್ರಯತ್ನವಾಗಿದೆ ಎಂದು ಹೇಳಿದರು.

ಆರೋಗ್ಯ ಮತ್ತು ಶಿಕ್ಷಣವು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕುಗಳಾಗಿವೆ. ಹಣವಿರುವವರಿಗೆ ಮಾತ್ರ ಉತ್ತಮ ಚಿಕಿತ್ಸೆ ದೊರೆಯುವ ಪರಿಸ್ಥಿತಿ ಬದಲಾಗಬೇಕು. ಬಡ ಮತ್ತು ಮಧ್ಯಮ ವರ್ಗದ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಹಾಗೂ ಶಿಕ್ಷಣ ಸುಲಭವಾಗಿ ದೊರೆಯುವಂತಾಗಬೇಕು. ಸಮಾಜಮುಖಿ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಿ ಇಂತಹ ಸೇವಾ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿನಾಕಲಗೂಡು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಗರ್ಭಕೊರಳ ಹಾಗೂ ಸ್ತನ ಕ್ಯಾನ್ಸರ್‌ ಕುರಿತು ಇನ್ನೂ ಸಾಕಷ್ಟು ಅರಿವಿನ ಕೊರತೆ ಇದೆ. ವಿಶೇಷವಾಗಿ ಸರ್ಕಾರಿ ಶಾಲೆಗಳ ಅಕ್ಷರ ದಾಸೋಹ ಸಿಬ್ಬಂದಿಯಲ್ಲಿ ಬಹುತೇಕರು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಾಗಿದ್ದು, ಕುಟುಂಬ ನಿರ್ವಹಣೆಯ ಜೊತೆಗೆ ಸಮಾಜ ಸೇವೆಯನ್ನೂ ಮಾಡುತ್ತಿದ್ದಾರೆ. ಇಂತಹ ಮಹಿಳೆಯರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.

ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಸಾವಿತ್ರಿ ಹಲವು ವರ್ಷಗಳಿಂದ ಗರ್ಭಕೊರಳ ಕ್ಯಾನ್ಸರ್ ತಡೆ ಕುರಿತು ಜಾಗೃತಿ ಮೂಡಿಸುತ್ತಿದ್ದು, ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ, ಸಮಸ್ಯೆ ಬರುವ ಮುನ್ನವೇ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಪ್ರತಿಯೊಬ್ಬ ಮಹಿಳೆಯೂ ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಶಿಬಿರದಲ್ಲಿ ಭಾಗವಹಿಸಿದ್ದ ವೈದ್ಯರು ಗರ್ಭಕೊರಳ ಹಾಗೂ ಸ್ತನ ಕ್ಯಾನ್ಸರ್‍ನ ಆರಂಭಿಕ ಲಕ್ಷಣಗಳು, ತಡೆಗಟ್ಟುವ ಕ್ರಮಗಳು, ನಿಯಮಿತ ತಪಾಸಣೆಯ ಅಗತ್ಯತೆ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ವಿವರವಾದ ಮಾಹಿತಿ ನೀಡಿದರು. ಮಹಿಳೆಯರ ಹಲವು ಆರೋಗ್ಯ ಸಮಸ್ಯೆಗಳ ಕುರಿತು ವೈಯಕ್ತಿಕ ಸಲಹೆ ಮತ್ತು ಮಾರ್ಗದರ್ಶನವೂ ನೀಡಲಾಯಿತು.

ಕಾರ್ಯಕ್ರಮದಲ್ಲಿ ಹಾಸನ ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗೆ ಉಚಿತ ಏಪ್ರಾನ್ ಹಾಗೂ ತಲೆಗವಸು ತರಿಸಲಾಯಿತು. ನೂರಾರು ಮಹಿಳೆಯರು ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ವೈದ್ಯರಿಂದ ಆರೋಗ್ಯ ಪರೀಕ್ಷೆ, ಸಲಹೆ ಹಾಗೂ ಅಗತ್ಯ ಮಾರ್ಗದರ್ಶನ ಪಡೆದುಕೊಂಡರು.

ಈ ಸಂದರ್ಭದಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಸಾವಿತ್ರಿ, ಮಹಾಲಕ್ಷ್ಮೀ ಮಂಜಪ್ಪ ಆಸ್ಪತ್ರೆ ಅಧ್ಯಕ್ಷ ಡಾ. ಉಮೇಶ್, ಡಾ. ಪ್ರೇಮಲತಾ, ಶಿಕ್ಷಣಾಧಿಕಾರಿ ಜಿ.ಎನ್. ಮಂಜೂಳಾ, ಭಾರತ ಸೇವಾದಳ ತಾಲೂಕು ಅಧ್ಯಕ್ಷ ಜಿ. ಕುಮಾರ್‌, ಉಪಾಧ್ಯಕ್ಷ ವರದರಾಜು, ಮಮತಾ ಪಟೇಲ್, ಭಾರತ ಸೇವಾದಳದ ಪದಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಅಕ್ಷರ ದಾಸೋಹ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರರೋಗ ಸಮಸ್ಯೆ ಪರಿಹಾರಕ್ಕೆ ಸಲಕರಣೆಗಳ ನೆರವು: ಡಾ.ರಾಜೇಶ್
ಚನ್ನಮ್ಮ ನಿಧನ: ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನಾಚರಣೆ