ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಹೊರೂರು ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು, ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಬಲಪಡಿಸುವುದು ನಮ್ಮ ಆದ್ಯತೆಯಾಗಿದೆ. ಈ ಭಾಗದಲ್ಲಿ ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಬೇಗ ಗುಣಮಟ್ಟದಿಂದ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಕಾಡುಪ್ರಾಣಿಗಳ ಉಪಟಳ ಹಾಗೂ ವಿದ್ಯುತ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರಕ್ಕಿಂತ ಹೆಚ್ಚಾಗಿ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ಭರವಸೆ ನೀಡಿದರು.ಕೆದಕಲ್ ಗ್ರಾಮದ ಕಾಫಿ ಬೆಳೆಗಾರರು ಹಾಗೂ ಗ್ರಾಮಸ್ಥರು ತಮ್ಮ ಹತ್ತಾರು ಸಮಸ್ಯೆಗಳ ಸರಮಾಲೆಯನ್ನೇ ಶಾಸಕರ ಮುಂದೆ ತೆರೆದಿಟ್ಟು ಕಾಡಾನೆ ಹಾಗೂ ಕಾಡೆಮ್ಮೆಗಳ ನಿರಂತರ ದಾಳಿಯಿಂದಾಗಿ ತೋಟ, ಗದ್ದೆಗಳು ನಾಶವಾಗುತ್ತಿದ್ದು, ರೈತರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಸಕಾಲದಲ್ಲಿ ಮಳೆಯಾಗದೆ ಕೃಷಿಕರು ಸಂಪೂರ್ಣವಾಗಿ ಕಂಗೆಟ್ಟಿದ್ದಾರೆ. ಮಳೆಗಾಲದ ಸಮಯದಲ್ಲಿ ತೀವ್ರ ವಿದ್ಯುತ್ ಸಮಸ್ಯೆ ಎದುರಾಗುತ್ತಿದ್ದು, ಇಡೀ ಗ್ರಾಮಸ್ಥರು ಕತ್ತಲಲ್ಲಿ ಕಳೆಯುವಂತಾಗಿದೆ ಎಂದು ತಮ್ಮ ನೋವನ್ನು ತೋಡಿಕೊಂಡರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೆದಕಲ್ ಗ್ರಾಮದ ಪ್ರಮುಖ ಕಾಫಿ ಬೆಳೆಗಾರರಾದ ಬಾಲಕೃಷ್ಣ ರೈ, ಸಂಜು ಪೊನ್ನಪ್ಪ, ದೇವಿಪ್ರಸಾದ್ ಕಾಯರ್ಮಾರ್, ವೆಂಕಪ್ಪ ಶಿವು ಸೋಮಣ್ಣ, ಸಂತೋಷ ಪೂವಯ್ಯ, ಕೊರವಂಡ ನರೇನ್ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.