ನರಸಾಪುರ ಹೋಬಳಿ ಮಟ್ಟದ ಜೆಡಿಎಸ್ ಸಮಾವೇಶ । ಬಿ ಪಾರಂ ಕೊಟ್ಟವರಿಗೆ ನಮ್ಮ ಮತ: ಹೇಳಿಕೆ
ಹಳ್ಳಿಗಳಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವುದೇ ನಮ್ಮ ಪ್ರಮುಖ ಗುರಿಯಾಗಿದ್ದು, ಪಕ್ಷದ ಹೈಕಮಾಂಡ್ ಯಾರಿಗೆ ಬಿ ಫಾರಂ ನೀಡಿ ಟಿಕೆಟ್ ನೀಡುತ್ತದೆಯೋ ಅವರ ಪರವಾಗಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಗೆಲ್ಲಿಸಬೇಕು. ಮುಂದಿನ ದಿನಗಳಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ನಾಗರಾಜ್ ತಿಳಿಸಿದರು
ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ಜೆಡಿಎಸ್ ಪಕ್ಷದಿಂದ ಹೋಬಳಿ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾರ್ಯಕರ್ತರೇ ಪಕ್ಷದ ಆಸ್ತಿ. ಪಕ್ಷದ ಸೂಚನೆಯಂತೆ ಪ್ರತಿಯೊಂದು ಹಳ್ಳಿಗೂ ತೆರಳಿ ಮತದಾರರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿ ಸಂಘಟನೆ ಬಲಪಡಿಸಬೇಕು. ಕೋಲಾರದಲ್ಲಿ ಜೆಡಿಎಸ್ ಶಾಸಕರನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರೂ ಪೂರ್ಣ ಬಹುಮತದ ಸರ್ಕಾರ ನಡೆಸಲು ಸಾಧ್ಯವಾಗಿಲ್ಲ. ಈ ಬಾರಿ ಅವರಿಗೆ ಪೂರ್ಣ ಬಹುಮತದ ಐದು ವರ್ಷಗಳ ಕಾಲ ಅವಕಾಶ ನೀಡಿದರೆ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ರಾಜ್ಯವನ್ನು ಅಭಿವೃದ್ಧಿಪಡಿಸಲಿದ್ದಾರೆ. ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳುವ ನಾಯಕರು. ಆದ್ದರಿಂದ ಜೆಡಿಎಸ್ಗೆ ಒಂದು ಅವಕಾಶ ನೀಡಬೇಕು ಎಂದರು.
ವಕ್ಕಲೇರಿ ಸೊಸೈಟಿ ಅಧ್ಯಕ್ಷ ಪಾಲಾಕ್ಷಗೌಡ ಮಾತನಾಡಿ, ಜೆಡಿಎಸ್ ಯಾವುದೇ ಒಂದು ಜಾತಿಗೆ ಸೀಮಿತವಾದ ಪಕ್ಷವಲ್ಲ. ರೈತರ ಪರವಾಗಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ ಸಾಲಮನ್ನಾ ಒಂದೇ ಜಾತಿಗೆ ಮಾಡಿಲ್ಲ ಎಲ್ಲರಿಗೂ ಮಾಡಿದ್ದಾರೆ. ವಿರೋಧಿಗಳು ಪಕ್ಷದ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದರು.