ಕನ್ನಡಪ್ರಭ ವಾರ್ತೆ ಹೊಸಕೋಟೆ
ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಪವಿತ್ರಾ ಮಂಜುನಾಥ್, ಉಪಾಧ್ಯಕ್ಷರಾಗಿದ್ದ ಅಸ್ಮಾ ತಾಜ್ ಜಿಯಾವುಲ್ಲಾ ರಾಜೀನಾಮೆ ನೀಡಿದ್ದು, ತೆರವಾಗಿದ್ದ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕ ಡಿ. ರಮೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಅಶ್ವಿನಿ ದೇವರಾಜ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಒಮ್ಮತದಿಂದ ಎಲ್ಲಾ ಚುನಾಯಿತ ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಶುಭಕೋರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಟಿ.ಎಸ್. ರಾಜಶೇಖರ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛತೆ ಹಾಗೂ ನೀರಿನ ಸಮಸ್ಯೆ ನೀಗಿಸುವಲ್ಲಿ ಆದ್ಯತೆ ನೀಡಬೇಕು. ಈಗಾಗಲೇ ಸ್ವಚ್ಛತೆ ನಿವಾರಣೆಗಾಗಿ ಸ್ವಚ್ಛತಾ ವಾಹಿನಿಯ ಮುಖಾಂತರ ಹೆಚ್ಚಿನ ಕಾಳಜಿ ವಹಿಸಿದ್ದು, ಅದರ ಜೊತೆಗೆ ನೀರಿನ ಸಮಸ್ಯೆ, ಚರಂಡಿ ಸ್ವಚ್ಛತೆ, ಬೀದಿ ದೀಪದ ಸಮಸ್ಯೆ ಸೇರಿದಂತೆ ಗ್ರಾಮಗಳಲ್ಲಿ ರಸ್ತೆ ಹಾಗೂ ಶಾಲೆ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಮುಂದಾಗಬೇಕು ಎಂದರು.ನೂತನ ಅಧ್ಯಕ್ಷೆ ಪ್ರಿಯಾಂಕ ಡಿ. ರಮೇಶ್ ಮಾತನಾಡಿ, ನಮ್ಮ ಚುನಾಯಿತ ಎಲ್ಲಾ ಸದಸ್ಯರನ್ನು ಗಣನೆಗೆ ತೆಗೆದುಕೊಂಡು ಒಗ್ಗಟ್ಟಿನಿಂದ ಗ್ರಾಪಂ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳನ್ನು ಅಭಿವೃದ್ಧಿಪಡಿಸಲಾಗುವುದು. ನಮ್ಮ ಮಾಜಿ ಸಂಸದರಾದ ಬಿ.ಎನ್. ಬಚ್ಚೇಗೌಡ ಹಾಗೂ ಶಾಸಕರಾದ ಶರತ್ ಬಚ್ಚೇಗೌಡ, ತಾಪಂನ ಮಾಜಿ ಅಧ್ಯಕ್ಷರಾದ ಟಿ.ಎಸ್. ರಾಜಶೇಖರ್ ಸೇರಿದಂತೆ ಎಲ್ಲಾ ಮುಖಂಡರ ಬೆಂಬಲದಿಂದ ನಾನು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಎಲ್ಲರ ಸಹಕಾರದೊಂದಿಗೆ ಇದೇ ರೀತಿ ಅಭಿವೃದ್ಧಿ ಪಥದೊಂದಿಗೆ ಜನರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ತಿಳಿಸಿದರು.