ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರವಾಗಿ ಶಾಸಕ ಇಕ್ಬಾಲ್ ಹುಸೇನ್ ಭಾನುವಾರ ನಗರ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು.
ನಗರದ ಕಾಮಣ್ಣನಗುಡಿ ಸರ್ಕಲ್ನಲ್ಲಿ ಜನರನ್ನುದ್ದೇಶಿಸಿ ಮತನಾಡಿದ ಅವರು, ಚುನಾವಣಾ ಪೂರ್ವದಲ್ಲಿ ಜನರಿಗೆ ಕೊಟ್ಟ ಆಶ್ವಾಸನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿ ಮಾಡುವ ಮೂಲಕ ನುಡಿದಂತೆ ನಡೆದು ತೋರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಕೊಟ್ಟ ಆಶ್ವಾಸನೆ ಈಡೇರಿಸಿ ಪ್ರಾಮಾಣಿಕವಾಗಿ ಜನರ ಸೇವೆ ಮಾಡುತ್ತಿದೆ ಎಂದರು.
ನಿಮ್ಮೆಲ್ಲರ ಪ್ರೀತಿ ಆಶೀರ್ವಾದದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಮೂಲಕ ನಿಮ್ಮ ಸೇವೆಗೆ ಸದಾ ಸಿದ್ದನಿದ್ದೇನೆ. ರಾಮನಗರದ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆ ಕೆಲವೇ ದಿನಗಳಲ್ಲಿ ಮುಗಿಯಲಿದ್ದು ಮನೆ ಮನೆಗೂ ಕಾವೇರಿ ನೀರು ಸಿಗಲಿದೆ. ಅರ್ಕಾವತಿ ನದಿ ದಂಡೆಯಲ್ಲಿ ವಾಕ್ ಪಾತ್ ನಿರ್ಮಾಣವಾಗಲಿದ್ದು, ಈಗಾಗಲೇ ಹುಣಸನಹಳ್ಳಿ, ಮಾಗಡಿ ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಹೇಳಿದರು.ಬಡವರಿಗೆ ಸೂರು, ಜನರಿಗೆ ಮೂಲ ಸೌಕರ್ಯ ಒದಗಿಸಿಕೊಡುವುದೇ ನಮ್ಮ ಮೊದಲ ಆದ್ಯತೆ. ಸಂಸದ ಡಿ.ಕೆ. ಸುರೇಶ್ ಅವರು ಜನ ಸೇವಕರಾಗಿ ಹಗಲಿರುಳು ಜನರಿಗಾಗಿ ದುಡಿಯುವಂತವರು. ಅವರ ಸೇವೆ ಕ್ಷೇತ್ರಕ್ಕೆ ಮತ್ತಷ್ಟು ಬೇಕಾಗಿದೆ. ನಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಬಲ ತುಂಬಲು ಡಿ.ಕೆ.ಸುರೇಶ್ ಅವರ ಸಹಕಾರ ಅಗತ್ಯವಾಗಿ ಬೇಕಾಗಿದೆ ಎಂದು ಇಕ್ಬಾಲ್ ಹುಸೇನ್ ತಿಳಿಸಿದರು.
ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರವಾಗಿ ಶಾಸಕ ಇಕ್ಬಾಲ್ ಹುಸೇನ್ ಮತಯಾಚನೆ ಮಾಡಿದರು.