ಕನ್ನಡಪ್ರಭ ವಾರ್ತೆ ಮಂಡ್ಯ
ಶನಿವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಸಂಘಟನಾ ಸೃಜನ ಅಭಿಯಾನ ರಾಹುಲ್ ಗಾಂಧಿಯವರ ಕನಸಿನ ಕೂಸು. ಪ್ರತಿ ಜಿಲ್ಲೆಯಲ್ಲೂ ಕಾಂಗ್ರೆಸ್ ಪಕ್ಷದ ಸಂಘಟನೆ ಬಲವಾಗಿರಬೇಕು. ಅಧ್ಯಕ್ಷರ ಆಯ್ಕೆಯಲ್ಲಿ ಕಾರ್ಯಕರ್ತರ ಅಭಿಪ್ರಾಯಕ್ಕೂ ಮನ್ನಣೆ ದೊರಕಿಸಬೇಕೆಂಬ ಉದ್ದೇಶದಿಂದ ಎಐಸಿಸಿ ನಾಯಕರು ಹೊಸ ಸ್ವರೂಪ ನೀಡಿದ್ದಾರೆ. ಈಗಾಗಲೇ ೨೦ ರಾಜ್ಯಗಳಲ್ಲಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ವಿವರಿಸಿದರು.
ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಧ್ಯಕ್ಷರ ಆಯ್ಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕಾರ್ಯಕರ್ತರ ಒಟ್ಟಾರೆ ಅಭಿಪ್ರಾಯವನ್ನು ಪರಿಗಣಿಸಿ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡುವುದರಿಂದ ಪಕ್ಷದ ಸಂಘಟನಾ ಸಾಮರ್ಥ್ಯ ಹೆಚ್ಚುತ್ತದೆ. ಪಕ್ಷ ಸಂಘಟನೆಯಲ್ಲಿ ತೊಡಗಿರುವವರಿಗೆ ಅಧಿಕಾರ ಸಿಕ್ಕಂತಾಗುತ್ತದೆ ಎಂಬುದನ್ನು ಮನಗಂಡು ರಾಹುಲ್ಗಾಂಧಿ ಅವರು ಜಿಲ್ಲಾಧ್ಯಕ್ಷರ ಆಯ್ಕೆಗೆ ಹೆಚ್ಚಿನ ಮಹತ್ವ ನೀಡಿದ್ದಾರೆ ಎಂದರು.ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಇಬ್ಬರು ಸಾಮಾನ್ಯ ವರ್ಗ, ಎಸ್ಸಿ, ಒಬಿಸಿ, ಅಲ್ಪಸಂಖ್ಯಾತ, ಮಹಿಳೆ ಸೇರಿ ಆರು ಮಂದಿ ಸ್ಪರ್ಧೆಗೆ ಅವಕಾಶ ಕಲ್ಪಿಸಲಾಗಿದೆ. ವೆಬ್ಸೈಟ್, ವ್ಯಾಟ್ಸಾಪ್ಗಳಲ್ಲಿ ಅರ್ಜಿ ದೊರೆಯಲಿದ್ದು ಅದನ್ನು ಭರ್ತಿ ಮಾಡಬೇಕು. ನಂತರದಲ್ಲಿ ಅವುಗಳನ್ನು ಯಾರಿಗೆ ಸಲ್ಲಿಸಬೇಕು ಎಂಬುದನ್ನು ತಿಳಿಸುವುದಾಗಿ ಹೇಳಿದರು.
ಜಿಲ್ಲಾಧ್ಯಕ್ಷರ ಆಯ್ಕೆ ವಿಷಯದಲ್ಲಿ ಯಾರ ಪ್ರಭಾವ, ಶಿಫಾರಸನ್ನೂ ಪರಿಗಣಿಸಲಾಗುವುದಿಲ್ಲ. ಯಾರ ಮನವಿಯನ್ನೂ ಸ್ವೀಕರಿಸುವುದಿಲ್ಲ. ಬಹುಮತದ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗುವುದು. ಯಾರನ್ನೂ ವೈಯಕ್ತಿಕವಾಗಿ ಭೇಟಿ ಮಾಡುವುದಕ್ಕೆ ಅವಕಾಶವಿರುವುದಿಲ್ಲ. ರಾಜ್ಯ ನಾಯಕರ ಪಾತ್ರ ಇದರಲ್ಲಿ ಇರುವುದೇ ಇಲ್ಲ. ಎಐಸಿಸಿಯಿಂದ ನೇಮಕಗೊಂಡ ಉಸ್ತುವಾರಿಗಳು, ವೀಕ್ಷಕರು ಕಳುಹಿಸುವ ೬ ಅಭ್ಯರ್ಥಿಗಳಲ್ಲಿ ಒಬ್ಬರನ್ನು ಎಐಸಿಸಿ ಅಂತಿಮಗೊಳಿಸಲಿದೆ ಎಂದು ಸ್ಪಷ್ಟಪಡಿಸಿದರು.
ನಾಳೆಯಿಂದಲೇ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುವುದು. ೨೫ ದಿನಗಳಲ್ಲಿ ಜಿಲ್ಲಾ ಪ್ರವಾಸ ಮುಗಿಸಿ ಎಲ್ಲಾ ಅಭಿಪ್ರಾಯಗಳನ್ನು ಕೋಢೀಕರಿಸಿ ಎಐಸಿಸಿಗೆ ಕಳುಹಿಸಲಾಗುವುದು ಎಂದರು.