ಬಳ್ಳಾರಿ: ನಾಡಿನ ಪ್ರತಿಷ್ಠಿತ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆ ಕೊಡಮಾಡುವ ‘ಸುವರ್ಣ ಕನ್ನಡಿಗ-2026’ರ ಪ್ರಶಸ್ತಿಗೆ ಆಯ್ಕೆಗೊಂಡು ಈಚೆಗೆ ಬೆಂಗಳೂರಿನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ಮುನಿರಾಜು ಅವರನ್ನು ವಿವಿ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.
ವಿವಿಯ ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ. ತಿಪ್ಪೇರುದ್ರಪ್ಪ ಜೆ. ಅವರು ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಕುಲಪತಿಗಳಿಗೆ ಪ್ರಶಸ್ತಿ ಬಂದಿರುವುದು ಅವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ. ಮುಂದೆ ಮತ್ತಷ್ಟು ಪ್ರಶಸ್ತಿಗಳು ಅವರಿಗೆ ಒಲಿದು ಬರಲಿ ಎಂದು ಹಾರೈಸಿದರು.
ಶಿಕ್ಷಣ ಕ್ಷೇತ್ರದಲ್ಲಿ ಮೂರೂವರೆ ದಶಕಗಳ ಕಾಲ ಸುದೀರ್ಘವಾಗಿ ಸಲ್ಲಿಸಿದ ಸೇವೆ ಗುರುತಿಸಿ ನಾಡಿನ ಪ್ರಭಾವಿ ದಿನಪತ್ರಿಕೆ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ವಾಹಿನಿ ನೀಡಿರುವ ಪ್ರಶಸ್ತಿಯಿಂದ ಹೆಚ್ಚು ಸಂತಸವಾಗಿದೆ. ಬಳ್ಳಾರಿ ವಿವಿಯ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದ್ದು ಇನ್ನೂ ಸಾಕಷ್ಟು ಕೋರ್ಸ್ ಗಳನ್ನು ಆರಂಭಿಸುವ ಮೂಲಕ ಈ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ಹೇಳಿದರು.ವಿವಿಯ ಸಿಂಡಿಕೇಟ್ ಸದಸ್ಯರು, ಹಣಕಾಸು ಅಧಿಕಾರಿ ಸ್ಫೂರ್ತಿ ಕೆ.ಜಿ., ಅಧ್ಯಾಪಕರ ಸಂಘದ ಪದಾಧಿಕಾರಿಗಳು, ಎಲ್ಲ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ ಇದ್ದರು.