ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಿರಿಧಾನ್ಯ ಮೌಲ್ಯ ಸರಪಳಿ ಉದ್ಯಾನದ ಶಂಕುಸ್ಥಾಪನೆಯನ್ನು ವರ್ಚುವಲ್ ಮುಖಾಂತರ ನೆರವೇರಿಸಿ ಶುಕ್ರವಾರ ಮಾತನಾಡಿದರು. ಜಿಲ್ಲೆಯಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಿರಿಧಾನ್ಯಗಳ ಸಂಶೋಧನಾ ಪ್ರಯೋಗಾಲಯ, ಸಿರಿಧಾನ್ಯಗಳ ಬೀಜ ಕೇಂದ್ರ ಸ್ಥಾಪನೆ ಹಾಗೂ ಸಿರಿಧಾನ್ಯಗಳ ಮೌಲವರ್ಧನೆ ಸಂಕೀರ್ಣವನ್ನು ಆದಷ್ಟು ಬೇಗ ಸ್ಥಾಪನೆ ಮಾಡಿ ಉದ್ಘಾಟಿಸಿ ರೈತರಿಗೆ ಅನುಕೂಲವಾಗಬೇಕು.
ವಿವಿಯಲ್ಲಿ ಸಿರಿಧಾನ್ಯಗಳ ಪ್ರೋತ್ಸಾಹಕ್ಕಾಗಿ ಸಿರಿಧಾನ್ಯ ಉದ್ಯಾನವನ್ನು ₹25ಕೋಟಿ ವೆಚ್ಚದಲ್ಲಿ ಸ್ಥಾಪನೆ ಮಾಡಲಾಗುವುದು. ಇದರಿಂದ ಜಿಲ್ಲೆಯ ಜನರಿಗೆ ಹಾಗೂ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ರೈತರಿಗೆ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಹೆಚ್ಚಿಸಲು ಹಾಗೂ ಮೌಲ್ಯವರ್ಧನೆ ಮತ್ತು ಬ್ರಾಂಡಿಂಗ್ ಮಾರುಕಟ್ಟೆ ವಿಸ್ತರಣೆಗೆ ವಿಶ್ವವಿದ್ಯಾಲಯ ಹಾಗೂ ಸರ್ಕಾರದಿಂದ ಪೂರ್ಣ ಪ್ರಮಾಣದ ಸಹಕಾರ ನೀಡಲಾಗುವುದು ಎಂದರು.ಇದೇ ವೇಳೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಎನ್.ಎಸ್ ಬೋಸರಾಜು, ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಕೃಷಿ ಅಭಿವೃದ್ಧಿಗೆ ಪೂರಕವಾಗಿ ಸರ್ಕಾರದಿಂದ ಕಾರ್ಯನಿರ್ವಹಿಸಲಾಗುತ್ತಿದ್ದು, ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ನಿಟ್ಟಿನಲ್ಲಿ ಸಿರಿಧಾನ್ಯಗಳ ಬೆಳೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವ ದೃಷ್ಠಿ ಯಿಂದ ಸಿರಿಧಾನ್ಯಗಳ ಉದ್ಯಾನವನ್ನು ಸ್ಥಾಪಿಸಲಾಗುತ್ತಿದ್ದು, ರೈತರ ಉಪಯೋಗಕ್ಕಾಗಿ ನಡೆಸುವ ಕಾರ್ಯಗಳಿಗೆ ಸಹಕರಿಸುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ ಎಂದರು.
ಈ ಸಂದರ್ಭದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಹನುಮಂತಪ್ಪ, ವ್ಯವಸ್ಥಾಪನಾ ಮಂಡಳಿ ಸದಸ್ಯ ಡಿ.ಮಲ್ಲಿಕಾರ್ಜುನ, ಸಂಶೋದನಾ ನಿರ್ದೇಶಕ ಡಾ.ಬಿ.ಕೆ ದೇಸಾಯಿ, ರಿಜಿಸ್ಟ್ರಾರ್ ಎಂ.ವೀರನಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.