ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಮಂಡ್ಯ ತಾಲೂಕು ಪಂಚಾಯ್ತಿಯ 2024-25ನೇ ಸಾಲಿನ ನವೆಂಬರ್ 2024ರ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವು ಸೇರಿದಂತೆ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೃಷಿ ಇಲಾಖೆಗೆ ಸಂಬಂಧಿಸಿದಂತೆ ರೈತರಿಗೆ ಯಾವುದೇ ಕೊರತೆ ಉಂಟಾಗದಂತೆ ಬಿತ್ತನೆ ಭತ್ತ ಆಯಾ ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಣೆ ಮಾಡಬೇಕು. ಮಳೆ ಬರುತ್ತಿರುವ ಹಿನ್ನೆಲೆ ರೈತರಿಗೆ ಅಗತ್ಯ ಸಲಹೆ ಹಾಗೂ ಬೆಳೆ ವಿಮೆಯ ಬಗ್ಗೆ ಮಾಹಿತಿ ನೀಡಬೇಕು ಎಂದರು.ಇದುವರೆಗೂ ತಾಲೂಕಿನಲ್ಲಿ 3,850 ರೈತರು ಬೆಳೆ ವಿಮೆ ಮಾಡಿಸಿಕೊಂಡಿದ್ದಾರೆ. ಕೃಷಿಯಲ್ಲಿ ರೈತರಿಗೆ ಸಿಗುವ ಎಲ್ಲಾ ಸೌಲಭ್ಯಗಳು ಸೂಕ್ತ ರೀತಿಯಲ್ಲಿ ಅವರಿಗೆ ದೊರೆಯಬೇಕು. ತಾಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ನದಿ, ಕಾಲುವೆಗಳಿಗೆ ಹರಿಸಲಾಗುತ್ತಿರುವ ನೀರನ್ನು ಕಾವೇರಿ ನೀರಾವರಿ ನಿಗಮದವರು ತಾತ್ಕಾಲಿಕವಾಗಿ ನಿಲ್ಲಿಸಬೇಕು ಎಂದರು.
ತಾಲೂಕಿನ ಪ್ರತಿಯೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ಇರುವ ತಾಂತ್ರಿಕ ಸಮಸ್ಯೆ ಪರಿಹರಿಸಬೇಕು. ಮುದಗಂದೂರು ಗ್ರಾಮದಲ್ಲಿ ನ್ಯಾಯ ಬೆಲೆ ಅಂಗಡಿಯಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ಪಡಿತರ ಪಡೆಯಲು ಸಾರ್ವಜನಿಕರು 5,6 ಕಿಲೋ ಮೀಟರ್ ದೂರದಿಂದ ಬರುತ್ತಿದ್ದು, ಸದರಿ ಗ್ರಾಮದ ಸುತ್ತಮುತ್ತಲು ಬೇರೆ ಯಾವುದೇ ನ್ಯಾಯ ಬೆಲೆ ಅಂಗಡಿ ಇಲ್ಲ. ಮುದಗಂದೂರಿನ ಅಕ್ಕಪಕ್ಕದ ಗ್ರಾಮದಲ್ಲಿ ಉಪ ಕೇಂದ್ರ ತೆರೆಯಬೇಕು ಎಂದರು.
ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಎಲ್ಲಾ ಫಲಾನುಭವಿಗಳಿಗೆ ತಲುಪುತ್ತಿದೆ ಎಂಬ ಬಗ್ಗೆ ಮಾಹಿತಿ ಪಡೆದರು.
ಡೆಂಘೀ ಪ್ರಕರಣವನ್ನು ತಡೆಗಟ್ಟಲು ಜಾಥಾ, ಅರಿವು ಕಾರ್ಯಕ್ರಮಗಳು ಹಾಗೂ ಬೇವಿನ ಎಣ್ಣೆ ವಿತರಿಸಲಾಗಿದೆ. ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಸೊಳ್ಳೆಗಳ ಉತ್ಪತ್ತಿಗೆ ಕಾರಣ ಹಾಗೂ ಅವುಗಳನ್ನು ತಡೆಗಟ್ಟಲು ಅನುಸರಿಸಬೇಕಾದ ಸುರಕ್ಷಿತ ಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲಾಗಿದೆ. ನವೆಂಬರ್ ಅಂತ್ಯಕ್ಕೆ ಕೇವಲ 5 ಪ್ರಕರಣಗಳಿವೆ ಎಂದು ವೈದ್ಯರು ಮಾಹಿತಿ ನೀಡಿದರು.
ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫಲಿತಾಂಶ ಕಡಿಮೆ ಬಂದಿದ್ದು, ಈ ಬಾರಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸುವ ಮೂಲಕ ಉತ್ತಮ ಫಲಿತಾಂಶ ಬರಬೇಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ವ್ಯಾಪ್ತಿಯ ಹಾಸ್ಟೆಲ್ಗಳ ವಿದ್ಯಾರ್ಥಿಗಳಿಗೆ ಮೆನು ಪ್ರಕಾರ ಉತ್ತಮ ಗುಣಮಟ್ಟದ ಊಟ, ಬಿಸಿ ನೀರು ಕೊಡುವುದು, ಯಾವುದೇ ಕುಂದು ಕೊರತೆಗಳಿದ್ದಲ್ಲಿ ನನ್ನ ಗಮನಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ತಿಳಿಸಿದರು.