ತಾಲೂಕು ಕಚೇರಿ ಎದುರು ಪ್ರತಿಭಟನಾ ಸಭೆ- ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ
ಅರ್ಹ ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು ನೇಮಕವಾದ ಎಲ್ಲಾ 1 ರಿಂದ 8 ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವರೆಗೂ ಈ ಮೊದಲಿನಂತೆ ಅರ್ಹತೆ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು ಎಂದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ನಂಜುಂಡಪ್ಪ ಆಗ್ರಹಿಸಿದರು.ಸೋಮವಾರ ತಾಲೂಕು ಕಚೇರಿ ಮುಂಭಾಗದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಹಮ್ಮಿ ಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು. ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯ ಸರಿಪಡಿಸಬೇಕು. 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಬೇಕು. ಮೂಲತಃ 1ರಿಂದ 7 ಹಾಗೂ 1 ರಿಂದ 8 ನೇ ತರಗತಿಗೆ ನೇಮಕ ಹೊಂದಿದವರನ್ನು ಪಿಎಸ್ ಟಿ ಎಂದು ಪದನಾಮ ಮಾಡಿ 1 ರಿಂದ 5 ನೇ ತರಗತಿಗೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು.
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಹಿಂದಿನಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆ ಆಧಾರದ ಮೇಲೆ ಬಡ್ತಿ ನೀಡಬೇಕು. ಅರ್ಹ ವಿದ್ಯಾರ್ಹತೆ ಪದವಿ ಮತ್ತು ಶಿಕ್ಷಣ ತರಬೇತಿ ಹೊಂದಿದ 2016 ಕ್ಕಿಂತ ಹಿಂದೆ ನೇಮಕಾತಿಯಾದ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಠತೆಯೊಂದಿಗೆ ಬಡ್ತಿ ನೀಡ ಬೇಕೆಂದು ಆಗ್ರಹಿಸಿದರು.1 ರಿಂದ 7ನೇ ತರಗತಿಗೆ ನೇಮಕವಾದ ಶಿಕ್ಷಕರನ್ನು 1 ರಿಂದ 5 ಕ್ಕೆ ಸೀಮಿತಗೊಳಿಸಿ ಕೆಳಮಟ್ಟಕ್ಕೆ ಬಡ್ತಿ ನೀಡಿ ತಾರತಮ್ಯ ಎಸಗಲಾಗಿದೆ. ಪ್ರಾಥಮಿಕ ಶಿಕ್ಷಕರಿಗೆ ಅರ್ಹತೆ ಮತ್ತು ಸೇವಾ ಜೇಷ್ಠತೆ ಇದ್ದರು ಅನ್ಯಾಯವಾಗಿದೆ. ಈ ಬಗ್ಗೆ ಹಲವು ಬಾರಿ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಸರ್ಕಾರ ಮತ್ತು ಶಿಕ್ಷಣ ಇಲಾಖೆ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕೆಂದು ಅವರು ಒತ್ತಾಯಿಸಿದರು.ಬಡ್ತಿ ಮುಖ್ಯ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಅಶೋಕ್ ಮಾತನಾಡಿ, ಸರ್ಕಾರಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಇದೇ 7ರಂದು ಜಿಲ್ಲಾಮಟ್ಟದಲ್ಲಿ ಹಾಗೂ 12 ರಂದು ಬೆಂಗಳೂರಿನಲ್ಲಿ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಪದಾಧಿಕಾರಿಗಳು ಇದ್ದರು. ನಂತರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಇದಕ್ಕೂ ಮೊದಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ನಂತರ ಬೈಕ್ ಜಾಥದ ಮೂಲಕ ತಾಲೂಕು ಕಚೇರಿಗೆ ಆಗಮಿಸಲಾಯಿತು.