ಆಸ್ತಿ ಸಮೀಕ್ಷೆ - ಪಾಲಿಕೆ, ಹೆಸ್ಕಾಂ ಅಂಕಿ ಅಂಶಗಳಲ್ಲಿ ವ್ಯತ್ಯಾಸ

KannadaprabhaNewsNetwork | Published : May 27, 2025 11:49 PM
ಕರ ವಸೂಲಾತಿ ಪ್ರಗತಿ ಆಗಬೇಕು. ಸುಮಾರು 45 ಸಾವಿರಕ್ಕೂ ಅಧಿಕವಾಗಿ ಅನಧಿಕೃತ ನಿವೇಶನಗಳು ನಿರ್ಮಾಣಗಳಾಗಿವೆ. ಇವುಗಳಿಂದ ನಾಗರಿಕ ಸವಲತ್ತು, ಮೂಲ ಸೌಕರ್ಯ ನೀಡಲು ಸಮಸ್ಯೆಗಳಾಗುತ್ತಿವೆ. ಈ ಬಗ್ಗೆ ಕ್ರಮವಹಿಸಬೇಕು.

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಈಗ ಮಾಡಿರುವ ಆಸ್ತಿ ಸಮೀಕ್ಷೆ ತಾಂತ್ರಿಕವಾಗಿ ಸರಿಯಿಲ್ಲ. ಹೆಸ್ಕಾಂದಿಂದ ಮೀಟರ್ ನೀಡಿರುವ ಮನೆಗಳ ಸಂಖ್ಯೆಗೂ ಮತ್ತು ಪಾಲಿಕೆ ಆಸ್ತಿ ಸಂಖ್ಯೆಗೂ ವ್ಯತ್ಯಾಸವಿದೆ. ಈ ಕುರಿತು ಕ್ರಮವಹಿಸಿ, ಸಮನ್ವಯತೆ ಸಾಧಿಸಿ, ಪ್ರತಿ ಆಸ್ತಿಗೂ ಟ್ಯಾಕ್ಸ್ ಬರುವಂತೆ ಕ್ರಮವಹಿಸಲು ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಮಂಗಳವಾರ ಜಿಪಂ ಸಭಾಂಗಣದಲ್ಲಿ ಮಹಾನಗರ ಪಾಲಿಕೆ ಮತ್ತು ಹುಡಾ ಪ್ರಗತಿ ಪರಿಶೀಲನೆ ಸಭೆ ಜರುಗಿಸಿದ ಅವರು, ಪಾಲಿಕೆಯಿಂದ ವಿವಿಧ ಉದ್ದೇಶಗಳಿಗಾಗಿ ಬಹಳಷ್ಟು ವರ್ಷಗಳ ಹಿಂದೆ 999 ವರ್ಷ, 99 ವರ್ಷ ಹೀಗೆ ಬಹು ವರ್ಷಗಳ ಅವಧಿಗೆ ಸುಮಾರು 2,474 ರಷ್ಟು ಮಹಾನಗರ ಪಾಲಿಕೆಯ ಆಸ್ತಿಗಳನ್ನು ಲೀಜ್ ಕೊಡಲಾಗಿದೆ. ಇದನ್ನು ಕೆಲವರು ನಿಯಮಬಾಹಿರವಾಗಿ ಮತ್ತೊಬ್ಬರಿಗೆ ಮಾರಾಟ ಮಾಡಿರುವುದು ತಿಳಿದು ಬಂದಿದೆ. ಈ ಕುರಿತು ಪರಿಶೀಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂತೋಷ ಲಾಡ್ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕರ ವಸೂಲಿಯಾಗಲಿ: ಕರ ವಸೂಲಾತಿ ಪ್ರಗತಿ ಆಗಬೇಕು. ಸುಮಾರು 45 ಸಾವಿರಕ್ಕೂ ಅಧಿಕವಾಗಿ ಅನಧಿಕೃತ ನಿವೇಶನಗಳು ನಿರ್ಮಾಣಗಳಾಗಿವೆ. ಇವುಗಳಿಂದ ನಾಗರಿಕ ಸವಲತ್ತು, ಮೂಲ ಸೌಕರ್ಯ ನೀಡಲು ಸಮಸ್ಯೆಗಳಾಗುತ್ತಿವೆ. ಈ ಬಗ್ಗೆ ಕ್ರಮವಹಿಸಬೇಕು. ಪ್ರತಿ ಆಸ್ತಿಯೂ ಟ್ಯಾಕ್ಸ್ ವ್ಯಾಪ್ತಿಗೆ ಒಳಪಡಿಸಬೇಕು. ಪ್ರತಿ ವಲಯದಲ್ಲಿ ಈ ಕುರಿತು ಅಭಿಯಾನ ಆಗಬೇಕು. ಕೃಷಿ ಭೂಮಿ ಸೈಟ್ ಮಾಡಿ ಮಾರಾಟ ಮಾಡುತ್ತಿದ್ದಾರೆ. ಇದು ಅನಧಿಕೃತ. ಇದನ್ನು ನಿಲ್ಲಿಸಲು ಗಂಭೀರವಾಗಿ ಪರಿಗಣಿಸಬೇಕು. ನೋಂದಣಿ ಇಲಾಖೆ, ಸರ್ವೇ ಇಲಾಖೆ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳು ಜಂಟಿಯಾಗಿ ಕ್ರಮವಹಿಸಬೇಕು. ಫಲವತ್ತಾದ ಕೃಷಿ ಭೂಮಿಯನ್ನು ಮನೆ ಕಟ್ಟಲು ಪ್ಲಾಟ್‌ಗಳನ್ನಾಗಿ ಪರಿವರ್ತಿಸಿ, ಮಾರುವುದು ಕಾನೂನುಬಾಹಿರ. ಈ ಸಂಗತಿಯು ಮುಂದಿನ ದಿನಮಾನಗಳಲ್ಲಿ ಅನೇಕ ರೀತಿಯಿಂದ ತೊಂದರೆ ಆಗಬಹುದು ಎಂದು ಸಚಿವರು ಹೇಳಿದರು.

ಅವಳಿ ನಗರದಲ್ಲಿ ಕುಡಿಯುವ ನೀರಿನ ಕರ ವಸೂಲಾತಿ ಸುಮಾರು ₹149 ಕೋಟಿಗಳ ಬಾಕಿಯಿದೆ. ಜನರಿಗೆ ಸರಿಯಾದ ಸಮಯಕ್ಕೆ ನಿಗದಿತ ದಿನಗಳಲ್ಲಿ ನೀರು ಸರಬರಾಜು ಮಾಡಬೇಕು. ಎಲ್ಲ ಬಾಕಿ ವಸೂಲಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒನ್ ಟೈಮ್ ಸೆಟ್ಲಮೆಂಟ್ ಮಾಡಲು ಬಹಳಷ್ಟು ಶಾಸಕರು ಮತ್ತು ಅಧ್ಯಕ್ಷರು ಒತ್ತಡ ತರುತ್ತಿದ್ದಾರೆ. ಅವರು ಮನವಿ ಸಲ್ಲಿಸಿದ ನಂತರ ಸರ್ಕಾರದ ಗಮನಕ್ಕೆ ತರುತ್ತೇನೆ. ಬಾಕಿ ಮೊತ್ತದ ಬಡ್ಡಿ ಮನ್ನಾ ಮಾಡಲು ಸರ್ಕಾರಕ್ಕೆ ಒನ್ ಟೈಮ್ ಸೆಟ್ಲಮೆಂಟ್ ಆದೇಶಕ್ಕಾಗಿ ಪಾಲಿಕೆಯಿಂದ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಸಚಿವರು ತಿಳಿಸಿದರು.

ಅವಳಿ ನಗರ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ಬಡಾವಣೆ ನಿರ್ಮಾಣವಾಗದಂತೆ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು. ಈಗಾಗಲೇ ಅನುಮತಿ ಇಲ್ಲದೆ ನಿರ್ಮಿಸಿರುವ ಬಡಾವಣೆಗಳಿಗೆ ನೋಟಿಸ್ ನೀಡಿ, ಸೂಕ್ರ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶಿಸಿದರು.

ಅನಧಿಕೃತ ಪಿಜಿಗಳಿಗೆ ನೋಟಿಸ್‌: ಲಕ್ಷಾಂತರ ಯುವಕ, ಯುವತಿಯರು ಓದು, ಉದ್ಯೋಗ ಹಾಗೂ ಇತರ ಕಾರಣಗಳಿಗಾಗಿ ಬೇರೆ ಬೇರೆ ಜಿಲ್ಲೆಗಳಿಂದ, ರಾಜ್ಯಗಳಿಂದ ಬಂದು ಅವಳಿನಗರದಲ್ಲಿ ವಾಸಿಸುತ್ತಿದ್ದಾರೆ. ಇವರಿಗೆ ವಸತಿ, ಊಟ ಕಲ್ಪಿಸುವ ಪಿಜಿಗಳ ಬಹುತೇಕ ಮಾಲೀಕರು ಸಂಬಂಧಿಸಿದ ಪ್ರಾಧಿಕಾರದಿಂದ ಅಧಿಕೃತ ಅನುಮತಿ ಪಡೆದಿರುವುದಿಲ್ಲ ಎಂಬುದು ತಿಳಿದು ಬಂದಿದೆ. ಎಲ್ಲ 12 ವಲಯ ಸಹಾಯಕ ಆಯುಕ್ತರು ತಮ್ಮ ವಲಯದ ಎಲ್ಲ ವಾರ್ಡ್‌ಗಳಲ್ಲಿ ಸಮೀಕ್ಷೆ ಮಾಡಿ, ಸಮೀಪದ ಪೊಲೀಸ್ ಠಾಣೆಗೆ ಪಿಜಿ ಆರಂಭಿಸಿದ ಕುರಿತು ಮಾಹಿತಿ ನೀಡಿರುವ ಬಗ್ಗೆ ಮತ್ತು ಪಿಜಿಯಲ್ಲಿ ಸಿಸಿಟಿವಿ, ಪಾರ್ಕಿಂಗ್, ವಾಣಿಜ್ಯ ಬಳಕೆಗೆ ವಿದ್ಯುತ್, ಕುಡಿಯುವ ನೀರು ಸೌಲಭ್ಯ ಹಾಗೂ ಪಾಲಿಕೆಗೆ ಕಮರ್ಸಿಯಲ್ ಟ್ಯಾಕ್ಸ್ ಭರಿಸುತ್ತಿರುವ ಬಗ್ಗೆ ನಿಗಧಿತ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಬೇಕು ಮತ್ತು ತಕ್ಷಣ ಅನಧಿಕೃತ ಪಿಜಿಗಳಿಗೆ ನೋಟಿಸ್ ನೀಡಬೇಕೆಂದು ಸಚಿವ ಸಂತೋಷ ಲಾಡ್ ಅವರು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೆಸ್ಕಾಂ, ಪಾಲಿಕೆಯಿಂದ ಅಗತ್ಯ ಸೌಲಭ್ಯಗಳನ್ನು ಪಡೆದು ಪಾಲಿಕೆ ನಿಯಮಾನುಸಾರ ಕರ ತುಂಬದವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಪಾಲಿಕೆ ಅಧಿಕಾರಿಗಳು ಕ್ರಿಯಾಶೀಲವಾಗಬೇಕು. ಮುಂದಿನ ದಿನಗಳಲ್ಲಿ ತಾವು ಈ ಕುರಿತು ಮಹಾನಗರಪಾಲಿಕೆಯಿಂದ ಸೂಕ್ತ ವರದಿ ಪಡೆದುಕೊಳ್ಳುವುದಾಗಿ ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಕೃಷಿ ಭೂಮಿಯನ್ನು ಅನುಮತಿ ಇಲ್ಲದೆ ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡಿದರೆ ಅದನ್ನು ರದ್ದುಪಡಿಸಿ, ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಹುಡಾ ಮತ್ತು ಪಾಲಿಕೆ ಅಧಿಕಾರಿಗಳು ವರದಿ ಸಲ್ಲಿಸಿದರೆ ಕ್ರಮ ಜರುಗಿಸಲಾಗುತ್ತದೆ ಎಂದರು. ಜಿಲ್ಲೆಯಲ್ಲಿ ಅನಧಿಕೃತ ಲೇಔಟ್ ಆಗುವುದನ್ನು ನಿಯಂತ್ರಿಸಲು ಜಂಟಿ ಸಮಿತಿ ರಚಿಸಿ, ಕ್ರಮಕೈಗೊಳ್ಳಲಾಗುತ್ತದೆ ಎಂದು ಉತ್ತರಿಸಿದರು.

ಪಾಲಿಕೆ ಮಹಾಪೌರ ರಾಮಣ್ಣ ಬಡಿಗೇರ, ಹುಡಾ ಅಧ್ಯಕ್ಷ ಶಾಕೀರ ಸನದಿ, ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಸಂತೋಷ ಬಿರಾದಾರ ಇದ್ದರು.