ಬಳ್ಳಾರಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯದಂತೆ ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಅರ್ಹ ತಾಲೂಕುಗಳನ್ನು ಪಟ್ಟಿಗೆ ಸೇರಿಸಿ ಕೇಂದ್ರ ಸರ್ಕಾರಕ್ಕೆ ಪರಿಹಾರ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ಹೇಳಿದರು.
ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ಮುಕ್ತಿ ಪಡೆದ ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಪ್ರಗತಿ, ಸಾಮಾಜಿಕ ನ್ಯಾಯ ಹಾಗೂ ಜನರ ಏಳಿಗೆಯೇ ನಮ್ಮ ಸರ್ಕಾರದ ಅಚಲ ಸಂಕಲ್ಪವಾಗಿದೆ ಎಂದು ಸಚಿವರು ಹೇಳಿದರು.
ಬರ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದರ ಜತೆಗೆ, ವಿಬಿಜಿ ರಾಮ್ಜಿ ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯವಾಗಿ ಜನರಿಗೆ ಉದ್ಯೋಗ ನೀಡಿ ಗುಳೆ ಹೋಗುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಮೂಲಕ ಈವರೆಗೆ ಸುಮಾರು ₹18,000 ಕೋಟಿ ವೆಚ್ಚ ಮಾಡಲಾಗಿದ್ದು, ಪ್ರಮುಖ ವಲಯಗಳಿಗೆ ಆದ್ಯತೆ ನೀಡಲಾಗಿದೆ. ಶಿಕ್ಷಣಕ್ಕೆ ₹2,202 ಕೋಟಿ, ಆರೋಗ್ಯಕ್ಕೆ ₹2,071 ಕೋಟಿ, ಉದ್ಯೋಗಾವಕಾಶಕ್ಕೆ ₹974 ಕೋಟಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ₹ 498 ಕೋಟಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕೆ ₹ 638 ಕೋಟಿ, ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹313 ಕೋಟಿ, ಅಂತರ್ಜಲ ಅಭಿವೃದ್ಧಿಗೆ ₹ 425 ಕೋಟಿ, ಕಲ್ಯಾಣ ಪಥಕ್ಕೆ ₹1,000 ಕೋಟಿ, ಪ್ರಜಾಸೌಧಗಳ ನಿರ್ಮಾಣಕ್ಕೆ ₹166 ಕೋಟಿ ವ್ಯಯಿಸಲಾಗಿದೆ ಎಂದು ತಿಳಿಸಿದರು.ಇದೇ ವೇಳೆ ಕಲ್ಯಾಣ ಕರ್ನಾಟಕದಲ್ಲಿ ಈ ಹಿಂದೆ ನಡೆದ ನಿಜಾಮರ ಆಡಳಿತ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ಹಮ್ಮಿಕೊಂಡಿರುವ ಉದ್ದೇಶ ಕುರಿತು ತಿಳಿಸಿದ ಸಚಿವರು, 1947ರ ಆ.15ರಂದು ಇಡೀ ಭಾರತಕ್ಕೆ ಸ್ವಾತಂತ್ರ್ಯ ಬಂದರೂ, ಹೈದರಾಬಾದ್ ನಿಜಾಮ ಮೀರ್ ಉಸ್ಮಾನ್ ಅಲಿ ಖಾನ್ ಭಾರತ ಒಕ್ಕೂಟಕ್ಕೆ ಸೇರಲು ನಿರಾಕರಿಸಿ ಸ್ವತಂತ್ರವಾಗಿರಲು ನಿರ್ಧರಿಸಿದ್ದರಿಂದ ಕಲ್ಯಾಣ ಕರ್ನಾಟಕದ ಆಗಿನ ಕಲ್ಬುರ್ಗಿ, ಬೀದರ್, ರಾಯಚೂರು ಸೇರಿದಂತೆ ಇಂದಿನ ಏಳು ಜಿಲ್ಲೆಗಳಿಗೆ ಸ್ವಾತಂತ್ರ್ಯ ಸಿಕ್ಕಿರಲಿಲ್ಲ. ಕಾಸಿಂ ರಜ್ವಿ ನೇತೃತ್ವದ ರಜಾಕಾರರ ದೌರ್ಜನ್ಯದ ವಿರುದ್ಧ ಹೋರಾಟಗಾರರು ರಣಕಹಳೆ ಊದಿದರು. ಅಂತಿಮವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಜವಾಹರಲಾಲ್ ನೆಹರು ದಿಟ್ಟ ನಿರ್ಧಾರದ ಫಲವಾಗಿ ನಡೆದ ಐದು ದಿನಗಳ ಸೈನಿಕ ಕಾರ್ಯಾಚರಣೆಯಿಂದ 1948ರ ಸೆ.17ರಂದು ಈ ಭಾಗಕ್ಕೆ ಮುಕ್ತಿ ದೊರೆಯಿತು. ಈ ಐತಿಹಾಸಿಕ ಹೋರಾಟದಲ್ಲಿ ತ್ಯಾಗ ಬಲಿದಾನ ಮಾಡಿದ ಎಲ್ಲ ಮಹನೀಯರನ್ನು ಸ್ಮರಿಸಬೇಕಿದೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ಗೌರವಾಧ್ಯಕ್ಷ ಸಿರಿಗೇರಿ ಪನ್ನರಾಜ್ ವಿಶೇಷ ಉಪನ್ಯಾಸ ನೀಡಿದರು.