ಅಜ್ಜಂಪುರದಲ್ಲಿ ರಾಜ್ಯಪಾಲರ ಪ್ರತಿಕೃತಿ ದಹನ । ಕಳಸದಲ್ಲೂ ಪ್ರತಿಭಟನೆ
ಮೈಸೂರಿನ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾನುವಾರವೂ ಕಾಂಗ್ರೆಸ್ ಪ್ರತಿಭಟನೆ ಮುಂದುವರಿದಿತ್ತು.
ಅಜ್ಜಂಪುರ ಹಾಗೂ ಕಳಸ ತಾಲೂಕು ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮೆರವಣಿಗೆ ನಡೆಸಿ ರಾಜ್ಯಪಾಲರ ಹಾಗೂ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ಹೊರ ಹಾಕಿದರು.ತರೀಕೆರೆ ಕ್ಷೇತ್ರದ ಶಾಸಕ ಜಿ.ಎಚ್. ಶ್ರೀನಿವಾಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಜ್ಜಂಪುರ ಪಟ್ಟಣದ ಗಾಂಧಿ ವೃತ್ತದಿಂದ ಮೆರವಣಿಗೆಯಲ್ಲಿ ಹೊರಟು, ಬಿಜೆಪಿ ಮತ್ತು ಜೆಡಿಎಸ್ ಗೆ ಧಿಕ್ಕಾರ ಹಾಕುತ್ತಾ ಬಸ್ ನಿಲ್ದಾಣ, ನೆಹರು ವೃತ್ತ, ಸಿದ್ದರಾಮೇಶ್ವರ ವೃತ್ತ ಮೂಲಕ ಸಾಗಿ ಪುನಃ ಗಾಂಧಿ ವೃತ್ತದಲ್ಲಿ ಜಮಾಯಿಸಿದರು. ಬಳಿಕ ಮಾನವ ಸರಪಳಿ ರಚಿಸಿ, ಟೈರ್ ಗೆ ಬೆಂಕಿ ಹಚ್ಚಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರದ ಗೃಹ ಸಚಿವ ಅಮಿತ್ ಶಾ, ರಾಜ್ಯಪಾಲ ಥಾವರಚಂದ್ ಗೆಹಲೋಟ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಇದೊಂದು ದ್ವೇಷದ ರಾಜಕಾರಣ, ರಾಜ್ಯ ಸರ್ಕಾರ ಐದು ಗ್ಯಾರಂಟಿ ನೀಡುವ ಮೂಲಕ ಉತ್ತಮ ಆಡಳಿತ ನೀಡುತ್ತಿದೆ. ಇದನ್ನು ಸಹಿಸಲಾರದೆ ಪ್ರತಿಪಕ್ಷಗಳು ಕುತಂತ್ರ ಮಾಡಿ ರಾಜ್ಯಪಾಲರ ಅಧಿಕಾರ ದುರುಪಯೋಗ ಮಾಡಿಕೊಂಡು ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಗುರುಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಯಾನಂದ್, ಮುಖಂಡ ಜೋಗಿ ಪ್ರಕಾಶ್, ಗಡೀಹಳ್ಳಿ ಮಂಜುನಾಥ್, ರಾಘವೇಂದ್ರ, ನವೀನ್ ಮಂದಾಲಿ, ಕೃಷ್ಣಪ್ಪ, ಬಂಡ್ರೆ ಕಲ್ಲೇಶ್, ಅಯೂಬ್, ಮುಸ್ತಾಕ್ ಅಹಮದ್ ಹಾಗೂ ಕಾರ್ಯಕರ್ತರು ಇದ್ದರು.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೇಣಿಕ ಅವರು, ಕಾಂಗ್ರೆಸ್ ವಿಚಾರದಲ್ಲಿ ಪಕ್ಷಪಾತ ಧೋರಣೆ ತೋರುತ್ತಿರುವ ರಾಜ್ಯಪಾಲರು ಮುಖ್ಯಮಂತ್ರಿ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಆರೋಪ ಇರುವ ಎಚ್.ಡಿ.ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ಶಶಿಕಲಾ ಜೊಲ್ಲೆಯಂತಹವರು ರಾಜ್ಯಪಾಲರ ಕಣ್ಣಿಗೆ ಕಾಣಿಸುತ್ತಿಲ್ಲ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಹಿತ್ತಲಮಕ್ಕಿ ರಾಜೇಂದ್ರ ಮಾತನಾಡಿ, ಸರ್ಕಾರದ ಯಾವುದೇ ಏಜೆನ್ಸಿ ವಿಚಾರಣೆ ಇಲ್ಲದೆ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರು ಅನುಮತಿ ನೀಡಿರುವುದು ದೊಡ್ಡ ಪ್ರಮಾದ ಎಂದು ಆರೋಪಿಸಿದರು.
ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶುಕೂರ್ ಮಾತನಾಡಿ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ ತಮ್ಮ ಗೌರವ ಕಳೆದು ಕೊಳ್ಳುವ ಮುನ್ನ ರಾಜ್ಯಪಾಲರು ಸಿದ್ಧರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ನೀಡಿರುವ ಅನುಮತಿ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
18 ಕೆಸಿಕೆಎಂ 4ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಅಜ್ಜಂಪುರದಲ್ಲಿ ತರೀಕೆರೆ ಶಾಸಕ ಶ್ರೀನಿವಾಸ್ ನೇತೃತ್ವದಲ್ಲಿ ಭಾನುವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.
--- 18 ಕೆಸಿಕೆಎಂ 5ಸಿಎಂ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಳಸದಲ್ಲಿ ಭಾನುವಾರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.