ಸರ್ಕಾರದಿಂದ ಎಲ್ಲ ವರ್ಗದ ಜನರ ಹಿತರಕ್ಷಣೆ: ಚಲುವರಾಯಸ್ವಾಮಿ

KannadaprabhaNewsNetwork |  
Published : Feb 23, 2026, 01:30 AM IST
22ಕೆಎಂಎನ್‌ಡಿ-7ನಾಗಮಂಗಲದ ಶಿಕ್ಷಕರ ಭವನದಲ್ಲಿ ಶಾಲಾ ಅಡುಗೆ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಉದ್ಘಾಟಿಸಿದರು. | Kannada Prabha

ಸಾರಾಂಶ

ನಾಗಮಂಗಲ ತಾಲೂಕಿನ ೨೭೬ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ೧೦೩೦೫ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಸಲು ೪೦೪ಮಂದಿ ಅಡುಗೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಡುಗೆ ಸಿಬ್ಬಂದಿ ತಮ್ಮ ಜವಾಬ್ದಾರಿ ಅರಿತು ಮಧ್ಯಾಹ್ನ ಬಿಸಿಯೂಟದಲ್ಲಿ ಯಾವುದೇ ಸಣ್ಣ ಪುಟ್ಟ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು.

ಕನ್ನಡಪ್ರಭ ವಾರ್ತೆ ನಾಗಮಂಗಲ

ನಾಡಿನ ಎಲ್ಲ ವರ್ಗಗಳ ರೈತರು, ಮಹಿಳೆಯರೂ ಸೇರಿದಂತೆ ಜನಸಾಮಾನ್ಯರ ಹಿತಕಾಯುವುದು ರಕ್ಷಣೆ ಮಾಡುವುದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಪಟ್ಟಣದ ಶಿಕ್ಷಕರ ಭವನದಲ್ಲಿ ತಾಪಂ ಮತ್ತು ಶಾಲಾ ಶಿಕ್ಷಣ ಇಲಾಖೆ ಪಿಎಂ ಪೋಷಣ್ (ಮಧ್ಯಾಹ್ನದ ಉಪಹಾರ ಯೋಜನೆ) ವತಿಯಿಂದ ಆಯೋಜಿಸಿದ್ದ ಶಾಲಾ ಅಡುಗೆ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ, ೬೦ವರ್ಷ ವಯೋಮಾನ ತುಂಬಿ ಬಿಡುಗಡೆ ಹೊಂದಿರುವ ಅಡುಗೆ ಸಿಬ್ಬಂದಿಗೆ ಇಡುಗಂಟು ಹಾಗೂ ಸಮವಸ್ತ್ರ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕೆಂಬ ಉದ್ದೇಶದಿಂದ ಈ ಹಿಂದೆ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಸ್ತ್ರಿ ಶಕ್ತಿ ಸ್ವಸಹಾಯ ಸಂಘಗಳು ಸೇರಿದಂತೆ ಹಲವು ಮಹತ್ತರ ಯೋಜನೆಗಳು ಜಾರಿಗೆ ತರುವ ಮೂಲಕ ಹೆಣ್ಣು ಮಕ್ಕಳ ರಕ್ಷಣೆಗೆ ನಿಂತರು. ಈಗ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಹೆಚ್ಚು ಪ್ರಾಮುಖ್ಯತೆ ಕೊಟ್ಟು ೫ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.

ತಾಲೂಕಿನ ೨೭೬ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ೧೦೩೦೫ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಸಲು ೪೦೪ಮಂದಿ ಅಡುಗೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಡುಗೆ ಸಿಬ್ಬಂದಿ ತಮ್ಮ ಜವಾಬ್ದಾರಿ ಅರಿತು ಮಧ್ಯಾಹ್ನ ಬಿಸಿಯೂಟದಲ್ಲಿ ಯಾವುದೇ ಸಣ್ಣ ಪುಟ್ಟ ಸಮಸ್ಯೆಯಾಗದಂತೆ ಎಚ್ಚರಿಕೆಯಿಂದ ಮಕ್ಕಳಿಗೆ ಶುಚಿ ಹಾಗೂ ರುಚಿಕರವಾದ ಅಡುಗೆ ಮಾಡಿ ಬಡಿಸಬೇಕು. ಅಡುಗೆ ಮಾಡುವ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.

೬೦ವರ್ಷ ವಯೋಮಾನ ತುಂಬಿ ಬಿಡುಗಡೆ ಹೊಂದಿರುವ ೩೭ಮಂದಿ ಅಡುಗೆ ಸಿಬ್ಬಂದಿಗಳಿಗೆ ಒಟ್ಟು ೧೪.೪೦ಲಕ್ಷ ರು.ಗಳ ಇಡಿಗಂಟು ವಿತರಿಸಿ ಗೌರವಿಸಲಾಯಿತು. ಅಲ್ಲದೆ ೪೦೪ಮಂದಿ ಅಡುಗೆ ಸಿಬ್ಬಂದಿಗೂ ಕೂಡ ಉಚಿತವಾಗಿ ಸಮವಸ್ತ್ರ ವಿತರಿಸಲಾಯಿತು.

ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ಕೆಎಂಎಫ್ ನಿರ್ದೇಶಕ ಎನ್.ಅಪ್ಪಾಜಿಗೌಡ, ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್.ಲೋಕೇಶ್, ಕ್ಷೇತ್ರ ಸಮನ್ವಯಾಧಿಕಾರಿ ಕೆ.ರವೀಶ್, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಮಂಜುನಾಥ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೆ.ವೈ.ಮಂಜುನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ.ನಾರಾಯಣ, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಂ.ಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ವೀಣಾ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಹಿತ್ಯದ ಮೂಲಕ ಮನಸುಗಳ ಬೆಸೆದ ಜಿಎಸ್‍ಎಸ್: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ
ಪ್ರಬುದ್ಧರು ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ: ಡಾ.ಭಗವಾನ್‌